ಬಿಜೆಪಿ ಆಂತರಿಕ ಕಲಹ: ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ಭೇಟಿ ಮಾಡಿದ ಬಿವೈ ವಿಜಯೇಂದ್ರ
ಬೆಂಗಳೂರು, ಡಿಸೆಂಬರ್ 03: ರಾಜ್ಯ ಬಿಜೆಪಿಯಲ್ಲಿ ಭಿನ್ನಮತ ತೀವ್ರ ಸ್ವರೂಪವನ್ನು ಪಡೆದುಕೊಂಡಿದೆ. ಈ ಬೆನ್ನಲ್ಲೇ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಭೇಟಿ ಮಾಡಿ ಮಾತುಕತೆ ನಡೆಸಿದರು.
ಬಿಜೆಪಿ ರಾಜ್ಯ ಕಚೇರಿಗೆ ಆಗಮಿಸಿರುವ ತರುಣ್ ಚುಗ್ ಪ್ರಮುಖರ ಜೊತೆಗೆ ಮಾತುಕತೆ ನಡೆಸುತ್ತಿದ್ದಾರೆ. ಪಕ್ಷದ ಸಂಘಟನೆ, ಸದಸ್ಯತ್ವ ಅಭಿಯಾನದ ಕುರಿತಾಗಿ ಸಭೆಗಳು ನಡೆಯುತ್ತಿದೆ. ಇದೇ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರು ತರುಣ್ ಚುಗ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಿದ್ದಾರೆ. ಬಿಜೆಪಿ 39 ಸಂಘಟನಾ ಜಿಲ್ಲೆಗಳ ಜಿಲ್ಲಾಧ್ಯಕ್ಷರು ಗೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ಮನವಿ ಮಾಡಲು ನಿರ್ಧಾರ ಮಾಡಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆಗೆ ಬಿ ವೈ ವಿಜಯೇಂದ್ರ ಅವರು ಮಾತನಾಡಿ ರಾಜ್ಯದಲ್ಲಿ ಸದಸ್ಯತ್ವ ಅಭಿಯಾನ, ಸಕ್ರಿಯ ಸದಸ್ಯತ್ವ ಅಭಿಯಾನ, ಬೂತ್ ಸಮಿತಿಗಳ ರಚನೆ, ಮಂಡಲ ಅಧ್ಯಕ್ಷರನ್ನು ನೇಮಿಸುವ 'ಸಂಘಟನಾ ಪರ್ವ' ಪ್ರಕ್ರಿಯೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್, ಕರ್ನಾಟಕದ ಸಹ ಉಸ್ತುವಾರಿ ಸುಧಾಕರ ರೆಡ್ಡಿ ಅವರು ಬೆಂಗಳೂರಿಗೆ ಬಂದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.
ಜಗನ್ನಾಥ ಭವನದ ನಮ್ಮ ರಾಜ್ಯ ಕಚೇರಿಯಲ್ಲಿ ಬೆಳಿಗ್ಗೆಯಿಂದ ಸಂಜೆವರೆಗೆ 'ಸಂಘಟನಾ ಪರ್ವ' ಸಂಬಂಧಿತ ಸಭೆಗಳು ನಡೆಯುತ್ತಿವೆ. ಇದರಲ್ಲಿ ರಾಜಕೀಯ ಏನೂ ಇಲ್ಲ; ಖಂಡಿತವಾಗಿ ಅಭಿಪ್ರಾಯ ಸಂಗ್ರಹದಂಥದ್ದು ಏನೂ ಇಲ್ಲ; ಅಭಿಪ್ರಾಯ ಸಂಗ್ರಹ ಮಾಡುವುದಾದರೆ ರಾಜ್ಯದ ಉಸ್ತುವಾರಿ ರಾಧಾಮೋಹನ್ ದಾಸ್ ಅವರು ಬರುತ್ತಿದ್ದರು. ತರುಣ್ ಚುಗ್ ಅವರು ಸಂಘಟನೆಗೆ ಸೀಮಿತವಾಗಿ ಬಂದಿದ್ದಾರೆ ಎಂದು ಈ ಕುರಿತ ಪ್ರಶ್ನೆಗೆ ಉತ್ತರ ನೀಡಿದರು. ಇದು ಮನವಿ ಕೊಡಲು ವೇದಿಕೆ ಅಲ್ಲ; ಇದು ಸಂಘಟನೆಗೆ ಸಂಬಂಧಿತ ಸಭೆ. ಅಭಿಪ್ರಾಯ ಹೇಳುವ ಕಾರ್ಯಕ್ರಮ ಇದಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಹೇಳಿದರು.
ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆ
ಮಲ್ಲೇಶ್ವರದ ಜಗನ್ನಾಥ ಭವನದಲ್ಲಿ ಇಂದು ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆ ನಡೆಯಿತು. ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್, ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ, ಕೇಂದ್ರ ಸಂಸದೀಯ ಸಮಿತಿ ಸದಸ್ಯ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕರ್ನಾಟಕದ ಸಹ ಉಸ್ತುವಾರಿ ಸುಧಾಕರ ರೆಡ್ಡಿ, ಕರ್ನಾಟಕದ ಚುನಾವಣಾ ವೀಕ್ಷಕ ಮತ್ತು ಕೇಂದ್ರದ ಮಾಜಿ ಸಚಿವ ರಾಧಾಕೃಷ್ಣನ್, ವಿಪಕ್ಷ ನಾಯಕ ಆರ್.ಅಶೋಕ್, ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಮಾಜಿ ಸಚಿವ ಬಿ.ಶ್ರೀರಾಮುಲು, ಪುದುಚೇರಿ ಉಸ್ತುವಾರಿ ನಿರ್ಮಲ್ ಕುಮಾರ್ ಸುರಾಣ, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ಮಾಜಿ ಡಿಸಿಎಂ ಡಾ.ಅಶ್ವತ್ಥನಾರಾಯಣ್ ಅವರು ಭಾಗವಹಿಸಿದ್ದರು.












Click it and Unblock the Notifications