Pocso Case: 'ಪೋಕ್ಸೋ' ಪ್ರಕರಣದಲ್ಲಿ ಯಡಿಯೂರಪ್ಪಗೆ ಬಿಗ್ ರಿಲೀಫ್: ವಿಜಯೇಂದ್ರ ಏನಂದ್ರು?
ಬೆಂಗಳೂರು, ಫೆಬ್ರವರಿ 07: ಬಿ ಎಸ್ ಯಡಿಯೂರಪ್ಪ ಅವರ ವಿರುದ್ಧ ಇದ್ದ ಪೋಕ್ಸೊ ಕೇಸಿನಲ್ಲಿ ಕೆಳಹಂತದ ಕೋರ್ಟಿನ ಸಮನ್ಸ್ ಅನ್ನು ರಾಜ್ಯ ಹೈಕೋರ್ಟ್ ಬದಿಗಿರಿಸಿದೆ. ರಾಜ್ಯ ಹೈಕೋರ್ಟ್ನಲ್ಲಿ ಈ ಕುರಿತು ಬಹಳ ದಿನ ವಾದವಿವಾದ ನಡೆದಿದೆ. ಅದರ ಆಧಾರದಲ್ಲಿ ನಮ್ಮ ಅರ್ಜಿಯನ್ನೂ ಪುರಸ್ಕರಿಸಿ, ಕೆಳಹಂತದ ಕೋರ್ಟಿನ ಸಮನ್ಸ್ ರದ್ದು ಮಾಡಿ ಮರು ಪರಿಶೀಲನೆ ಮಾಡುವಂತೆ ನಿರ್ದೇಶನ ನೀಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಹೇಳಿದರು.
ಈ ಕುರಿತು ಶುಕ್ರವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಬಿಎಸ್ ಯಡಿಯೂರಪ್ಪನವರಿಗೆ ವಿರುದ್ಧ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿಗೆ ಉಚ್ಚ ನ್ಯಾಯಾಲಯದಿಂದ ರಿಲೀಫ್ ಸಿಕ್ಕಿದೆ. ಕೆಳಹಂತದ ಕೋರ್ಟ್ ಯಡಿಯೂರಪ್ಪ ಅವರ ವಿರುದ್ಧ ಜಾರಿ ಮಾಡಿದ್ದ ಸಮನ್ಸ್ ಅನ್ನು ರಾಜ್ಯ ಉಚ್ಚ ನ್ಯಾಯಾಲಯವು ತಮ್ಮ ಅರ್ಜಿಯನ್ನು ಪುರಸ್ಕರಿಸಿ ಲೋಯರ್ ಕೋರ್ಟ್ ಅದೇಶವನ್ನು ಪಕ್ಕಕಿರಿಸಿದೆ, ಪ್ರಕರಣದ ಪುನರ್ ಪರಿಶೀಲನೆ ನಡೆಸುವಂತೆ ನ್ಯಾಯಾಲಯ ಆದೇಶಿಸಿದೆ ಎಂದು ಹೇಳಿದರು.

ಮೈಸೂರಿನ ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿರಪರಾಧಿ ಎಂಬುದಾಗಿ ಹೈಕೋರ್ಟ್ ಹೇಳಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದ್ದಾರೆ. ಮೈಸೂರಿನ ಮುಡಾ ಹಗರಣದಲ್ಲಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ರಾಜ್ಯ ಹೈಕೋರ್ಟಿನಲ್ಲಿ ಸಂಪೂರ್ಣ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡುವಂತೆ ಕೋರಿದ್ದರು. ಆ ಅರ್ಜಿಯನ್ನು ರಾಜ್ಯ ಹೈಕೋರ್ಟ್ ತಿರಸ್ಕರಿಸಿದೆ. ಅದರ ಅರ್ಥ ಸಿಎಂ ಸಿದ್ದರಾಮಯ್ಯನವರು ನಿರಪರಾಧಿ ಎಂದು ಹೈಕೋರ್ಟ್ ಹೇಳಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ತಿಳಿಸಿದರು.
ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಹೈಕೋರ್ಟ್ ಮಾಡಿಲ್ಲ. ಸಿಬಿಐ ತನಿಖೆಗೆ ಕೊಡುವುದಿಲ್ಲ ಎಂಬ ತೀರ್ಪನ್ನು ರಾಜ್ಯ ಹೈಕೋರ್ಟ್ ಹೇಳಿದೆ ಎಂದು ತಿಳಿಸಿದರು. ಇದರಿಂದ ಮೈಸೂರಿನ ಮುಡಾ ಹಗರಣದ ವಿಷಯದಲ್ಲಿ ಸಿಎಂ ಕುಟುಂಬ ಒಳಗೊಂಡ ಕುರಿತ ಬಿಜೆಪಿ ಹೋರಾಟ ಮತ್ತು ಪಾದಯಾತ್ರೆಗೆ ಹಿನ್ನಡೆ ಆಗಿಲ್ಲ ಎಂದು ಬಿ ವೈ ವಿಜಯೇಂದ್ರ ಅವರು ಹೇಳಿದರು.
ಲೋಕಾಯುಕ್ತ ಮತ್ತು ಇ.ಡಿ. ತನಿಖೆ ನಡೆಯುತ್ತಿದೆ. ಮುಂದೇನಾಗುತ್ತದೆ ಕಾದು ನೋಡೋಣ ಎಂದು ಅವರು ಪ್ರಶ್ನೆಗೆ ಉತ್ತರ ಕೊಟ್ಟರು. ರಾಜ್ಯ ಹೈಕೋರ್ಟ್ ತನ್ನ ತೀರ್ಪಿನಲ್ಲಿ ಸಿಎಂ ಕುಟುಂಬ ನಿರಪರಾಧಿಗಳೆಂದು ಹೇಳಿದೆಯೇ ಎಂದೂ ಅವರು ಪ್ರಶ್ನಿಸಿದರು. ಮುಡಾ ಹಗರಣದಲ್ಲಿ ಸಿಎಂ ಕುಟುಂಬ ಭಾಗಿ ಆಗಿರುವುದು ಮತ್ತು ಸಾವಿರಾರು ಕೋಟಿ ರೂಪಾಯಿ ಲೂಟಿ ಆದುದನ್ನು ತಿಳಿಸಿ ನಾವು ಹೋರಾಟ ಮಾಡಿದ್ದೆವು. ನಮ್ಮ ಆರೋಪಕ್ಕೆ ಇವತ್ತಿಗೂ ನಾವು ಬದ್ಧರಾಗಿದ್ದೇವೆ ಎಂದು ವಿಜಯೇಂದ್ರ ಅವರು ತಿಳಿಸಿದರು.
ಲೋಕಾಯುಕ್ತ ತನಿಖೆ, ಅವರ ವರದಿ ಬಂದ ಬಳಿಕ ನಾವು ಮಾತನಾಡುತ್ತೇವೆ ಎಂದ ಅವರು, ಇವತ್ತಿನ ಹೈಕೋರ್ಟಿನ ತೀರ್ಪಿನಲ್ಲಿ ಮುಖ್ಯಮಂತ್ರಿಗಳು, ಅವರ ಕುಟುಂಬ ನಿರಪರಾಧಿ ಎಂದು ಹೇಳಿಲ್ಲ ಎಂದು ಪುನರುಚ್ಚರಿಸಿದರು. ಲೋಕಾಯುಕ್ತದ ವರದಿಯನ್ನು ಕಾದು ನೋಡೋಣ ಎಂದು ಹೇಳಿದರು.












Click it and Unblock the Notifications