ಬಡ ರೈತರಿಗೆ ಹೊರೆ; ಬಿತ್ತನೆ ಬೀಜ ದರ ಏರಿಕೆ: ಸರ್ಕಾರಕ್ಕೆ ರಣ ಬಿಸಿ ತಟ್ಟಲಿದೆ ಎಂದ ವಿಜಯೇಂದ್ರ
ಬೆಂಗಳೂರು, ಮೇ 29: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಬಿತ್ತನೆ ಬೀಜ ದರ ಏರಿಕೆಯಿಂದ ರಾಜ್ಯದ ರೈತರಿಗೆ ಹೊರೆಯಾಗಿದೆ. ಬಿತ್ತನೆ ಬೀಜ ದರ ಹೆಚ್ಚಳ ಹಿನ್ನೆಲೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಿಕಾರಿಪುರ ಶಾಸಕ ಬಿ ವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ವಿಜಯೇಂದ್ರ ಅವರು, ಬರದಿಂದ ನೊಂದು ಇದೀಗ ಮುಂಗಾರು ಬಿತ್ತನೆಗೆ ಸಜ್ಜಾಗುತ್ತಿರುವ ರೈತರಿಗೆ ಬಿತ್ತನೆ ಬೀಜಗಳ ದರ ಏರಿಕೆ ಮೂಲಕ ದಿನಕ್ಕೊಂದು ಬೆಲೆ ಏರಿಕೆಯ ಬರೆ ಎಳೆಯಲು ಮುಂದಾಗಿದೆ ಕಾಂಗ್ರೆಸ್ ಸರ್ಕಾರ ಎಂದು ಕಿಡಿಕಾರಿದ್ದಾರೆ.

ವಾರಂಟಿ ಇಲ್ಲದ ಗ್ಯಾರಂಟಿ ನೀಡುವಲ್ಲಿಯೂ ವಿಫಲವಾಗಿ ಖಜಾನೆ ಬರಿದು ಮಾಡಿಕೊಂಡಿರುವ ಪರಿಣಾಮ ದಿನಕ್ಕೊಂದು ದರ ಏರಿಕೆ ಮಾಡಿ ಜನ ಸಾಮಾನ್ಯರು ದೈನಂದಿನ ಜೀವನ ಸಾಗಿಸಲು ಉಸಿರುಗಟ್ಟುವ ಪರಿಸ್ಥಿತಿ ನಿರ್ಮಿಸುತ್ತಿದೆ, ಅನ್ನದಾತರಿಗೂ ಇದೇ ಪರಿಸ್ಥಿತಿ ನಿರ್ಮಿಸಿರುವ ಕಾಂಗ್ರೆಸ್ ಸರ್ಕಾರಕ್ಕೆ ಶೀಘ್ರವೇ ಜನಾಕ್ರೋಶದ ರಣ ಬಿಸಿ ತಟ್ಟಲಿದೆ ಎಂದು ಹೇಳಿದ್ದಾರೆ.
ಬಿತ್ತನೆ ಬೀಜದ ಮಾರಾಟದ ದರ ಏರಿಕೆ: ಸಿದ್ದರಾಮಯ್ಯ ಹೇಳಿದ್ದೇನು?
ಬೀಜೋತ್ಪಾದಕರಿಂದ ಖರೀದಿಸುವ ಬಿತ್ತನೆ ಬೀಜದ ದರಗಳು ಸಹ ಗಣನೀಯವಾಗಿ ಏರಿಕೆಯಾಗಿದೆ. ಈ ದರ ಏರಿಕೆ ಮುಂಗಾರು ಬೆಳೆ ಬೆಳೆಯುವ ಎಲ್ಲ ರಾಜ್ಯಗಳಲ್ಲಿಯೂ ಆಗಿದ್ದು ಉಳಿದ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲಿ ಬೀಜಗಳ ದರ ಕಡಿಮೆ ಇದೆ. ಬಿತ್ತನೆ ಬೀಜಗಳ ಮಾರಾಟ ದರಗಳನ್ನು ನಿಗದಿಪಡಿಸುವ ಸಂದರ್ಭಗಳಲ್ಲಿ ಬಿತ್ತನೆ ಬೀಜ ಖರೀದಿ ದರಗಳು ಹಾಗೂ ಗರಿಷ್ಠ APMC ಮಾರಾಟ ದರಗಳನ್ನು ಆಧಾರವಾಗಿ ಪರಿಗಣಿಸಲಾಗುತ್ತದೆ. 2022-23ನೇ ಸಾಲಿಗೆ ಹೋಲಿಸಿದಾಗ 2023-24ನೇ ಸಾಲಿನಲ್ಲಿ ವಿವಿಧ ಬೆಳೆಗಳ ಖರೀದಿ ದರಗಳಲ್ಲಿ (Procurement Rates) ಗರಿಷ್ಠ ಶೇ.59.58ರಷ್ಟು ವ್ಯತ್ಯಾಸವಾಗಿರುತ್ತದೆ.
ರೈತರು ತಮ್ಮ ಜಮೀನಿನಲ್ಲಿಯೇ ಬೀಜಗಳನ್ನು ಉತ್ಪಾದನೆ ಮಾಡುತ್ತಾರೆ. ಇದನ್ನು ಕರ್ನಾಟಕ ರಾಜ್ಯ ಬೀಜ ನಿಗಮ ನಿ., ರಾಷ್ಟ್ರೀಯ ರಾಜ್ಯ ಬೀಜ ನಿ., ಕರ್ನಾಟಕ ಎಣ್ಣೆಬೀಜ ಬೆಳೆಗಾರರ ಮಹಾ ಮಂಡಳಿ ಹಾಗೂ ಖಾಸಗಿ ಸಂಸ್ಥೆಗಳು ಕೈಗೊಂಡು ಸರಬರಾಜು ಮಾಡುತ್ತವೆ.
ಈ ಬಾರಿ ಹೆಸರು ಬೆಳೆಯ ಬಿತ್ತನೆ ಬೀಜಗಳ ಎಲ್-1 ದರವು ಶೇ.48.5, ಉದ್ದು ಬೆಳೆಯ ದರವು ಶೇ.37.72, ತೊಗರಿ ಬೆಳೆಯ ವಿವಿಧ ತಳಿಗಳ ಬಿತ್ತನೆ ಬೀಜಗಳ ದರದಲ್ಲಿ ಶೇ.28.29 ರಿಂದ 37.69ರಷ್ಟು ಮತ್ತು ಜೋಳದ ಬೆಳೆಯ ಎಲ್-1 ದರವು ಶೇ.7.66 ರಿಂದ ಶೇ.33.33ರಷ್ಟು ಹೆಚ್ಚಾಗಿರುತ್ತದೆ. ಬೀಜಗಳ ಖರೀದಿ ದರದಲ್ಲಿನ ಹೆಚ್ಚಳದ ಮೊತ್ತವು ಬೀಜೋತ್ಪಾದನೆಯಲ್ಲಿ ತೊಡಗಿರುವ ರೈತರಿಗೆ ವರ್ಗಾವಣೆಯಾಗಿರುತ್ತದೆ ಎನ್ನುವುದು ಗಮನಾರ್ಹ ಅಂಶವಾಗಿದೆ.
ಇದಲ್ಲದೆ ಕೆಲ ಬಿತ್ತನೆ ಬೀಜದ ದರದಲ್ಲಿ ಇಳಿಕೆ ಹಾಗೂ ಯಥಾಸ್ಥಿತಿ ಕೂಡ ಕಂಡುಬಂದಿದೆ. 2024ರ ಮುಂಗಾರು ಹಂಗಾಮಿನ ಸೋಯಾಅವರೆ ಬಿತ್ತನೆ ಬೀಜದ ದರವು 2023ರ ಮುಂಗಾರು ಹಂಗಾಮಿನ ಎಲ್-1 ದರಗಳ ಹೋಲಿಕೆಯಲ್ಲಿ ಶೇ.8ರಷ್ಟು ಕಡಿತಗೊಂಡಿರುತ್ತದೆ. ಸೂರ್ಯಕಾಂತಿ ಬಿತ್ತನೆ ಬೀಜದ ದರ ಕಳೆದ ಸಾಲಿನಷ್ಟೇ ಇದ್ದು ಯಾವುದೇ ಬದಲಾವಣೆ ಇರುವುದಿಲ್ಲ. ಬಿ.ಟಿ. ಹತ್ತಿ ಬಿತ್ತನೆ ಬೀಜಗಳನ್ನು ರಾಜ್ಯ ಸರ್ಕಾರದ ಇಲಾಖಾ ವತಿಯಿಂದ ರಿಯಾಯತಿ ದರದಲ್ಲಿ ವಿತರಣೆ ಮಾಡುತ್ತಿರುವುದಿಲ್ಲ. ಬಿ.ಟಿ. ಹತ್ತಿ ಬಿತ್ತನೆ ಬೀಜಗಳ ಗರಿಷ್ಠ ದರಗಳನ್ನು ಕೇಂದ್ರ ಸರ್ಕಾರದ ವತಿಯಿಂದಲೇ ನಿಗದಿಪಡಿಸಲಾಗುತ್ತದೆ ಎಂದು ಹೇಳಿದ್ದಾರೆ.












Click it and Unblock the Notifications