ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿ
Recommended Video
ಬೆಂಗಳೂರು, ಡಿಸೆಂಬರ್ 18: ಪೌರತ್ವ ಕಾಯ್ದೆ ವಿರುದ್ಧ ಪ್ರತಿಭಟನೆಯ ಬಿಸಿ ರಾಜ್ಯಕ್ಕೂ ತಗಲುವ ಸಾಧ್ಯತೆ ಇರುವ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿಯಾಗಿದೆ.
ಬೆಂಗಳೂರಿನಲ್ಲಿ (ಡಿಸೆಂಬರ್ 18) ಇಂದಿನಿಂದಲೇ 144 ಸೆಕ್ಷನ್ ಜಾರಿಯಾಗಿದ್ದು, ಡಿಸೆಂಬರ್ 21 ರ ರಾತ್ರಿ 12 ರ ವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಪೌರತ್ವ ಕಾಯ್ದೆ ವಿರುದ್ಧ ಪ್ರತಿಭಟನೆಗೆ ಹಲವು ಸಂಘಟನೆಗಳು ಕರೆ ನೀಡಿರುವ ಕಾರಣ, ಪ್ರತಿಭಟನೆ ನಡೆಸದಂತೆ ತಡೆಯಲು ಈ ಕ್ರಮ ಜರುಗಿಸಲಾಗಿದೆ.
ಬೆಂಗಳೂರು, ಮೈಸೂರು, ಚಿಕ್ಕಬಳ್ಳಾಪುರ, ಮಂಗಳೂರು, ಹಾಸನ, ಯಾದಗಿರಿ, ಚಿಕ್ಕಮಗಳೂರು, ಶಿವಮೊಗ್ಗ, ಕೋಲಾರ, ತುಮಕೂರು, ಬಾಗಲಕೋಟೆ, ದಾವಣಗೆರೆ ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಘೋಷಿಸಲಾಗಿದೆ.
ನಗರದಲ್ಲಿ ಶಾಲಾ-ಕಾಲೇಜು, ಆಸ್ಪತ್ರೆಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ. ಸಾರಿಗೆ ವ್ಯವಸ್ಥೆಯಲ್ಲೂ ಬದಲಾವಣೆ ಇಲ್ಲ. ಮದ್ಯದಂಗಡಿಗಳು ಸಹ ತೆರೆದಿರಲಿವೆ.
ಪೌರತ್ವ ಕಾಯ್ದೆ ವಿರುದ್ಧ ಕೆಲವು ರಾಜಕೀಯ ಪಕ್ಷಗಳು, ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿರುವ ಮಾಹಿತಿ ಇದ್ದು, ಕಾನೂನು ಸುವ್ಯವಸ್ಥೆಗೆ ಭಂಗ ಬರಬಾರದೆಂಬ ಕಾರಣಕ್ಕೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆಯೆಂದು ನೊಟೀಸ್ ನಲ್ಲಿ ತಿಳಿಸಲಾಗಿದೆ.
ನಿಷೇಧಾಜ್ಞೆ ಜಾರಿಯಿರುವ ಕಾರಣ, ಮೆರವಣಿಗೆ, ಪ್ರತಿಭಟನೆಗಳನ್ನು ಹಮ್ಮಿಕೊಳ್ಳುವಂತಿಲ್ಲ. ವಿಜಯೋತ್ಸವವನ್ನೂ ಆಚರಿಸುವಂತಿಲ್ಲ.
ದೆಹಲಿ, ಪಶ್ಚಿಮ ಬಂಗಾಳ, ಅಸ್ಸಾಂ, ಒಡಿಶಾ, ಈಶಾನ್ಯ ರಾಜ್ಯಗಳಲ್ಲಿ ಪೌರತ್ವ ಕಾಯ್ದೆಯ ವಿರುದ್ಧ ಪ್ರತಿಭಟನೆ ಉಗ್ರರೂಪ ತಳೆದಿದೆ. ರಾಜ್ಯದಲ್ಲಿಯೂ ಕೆಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ಮಾಡಿವೆ, ಆದರೆ ರಾಜ್ಯದಲ್ಲಿ ಪೌರತ್ವ ಕಾಯ್ದೆ ವಿರುದ್ಧ ಪ್ರತಿಭಟನೆ ಹೆಚ್ಚಾಗದಂತೆ ತಡೆಯಲು ನಿಷೇಧಾಜ್ಞೆ ಪ್ರಯೋಗಿಸಲಾಗಿದೆ.