ಹೊಸ ಕೈಗಾರಿಕಾ ನೀತಿಗೆ ಅಸ್ತು ಎಂದ ಸಚಿವ ಸಂಪುಟ
ಬೆಂಗಳೂರು, ಸೆ. 12 : ಎರಡು ವಾರದಲ್ಲಿ ಹೊಸ ಕೈಗಾರಿಕಾ ನೀತಿ ಪ್ರಕಟಗೊಳಿಸುವುದು, ರಾಜ್ಯದ ಐದು ಸಹಕಾರಿ ಬ್ಯಾಂಕುಗಳ ಅವ್ಯವಹಾರದ ಬಗ್ಗೆ ತನಿಖೆ ನಡೆಸುವುದು, 452 ಎ ಮತ್ತು ಬಿ ಶ್ರೇಣಿಯ ಕೆಎಎಸ್ ಹುದ್ದೆಗಳಿಗೆ ನೇಮಕ ಪ್ರಕ್ರಿಯೆ ಕೈಗೊಳ್ಳುವುದು ಸೇರಿದಂತೆ ಹಲವಾರು ನಿರ್ಣಯಗಳನ್ನು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ.
ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ ನಡೆಯಿತು. ಸಭೆಯ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಕಾನೂನು ಸಚಿವ ಟಿ.ಬಿ.ಜಯಚಂದ್ರ ಸಭೆಯ ವಿವರಗಳನ್ನು ಮಾಧ್ಯಮಗಳಿಗೆ ನೀಡಿದರು. ಮುಂದಿನ ಐದು ವರ್ಷಗಳಲ್ಲಿ 5 ಲಕ್ಷ ಕೋಟಿ ಬಂಡವಾಳ ಹೂಡಿಕೆ ಮತ್ತು 15 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ಗುರಿಯುಳ್ಳ ‘ಕರ್ನಾಟಕ ಕೈಗಾರಿಕಾ ನೀತಿ 2014-2019' ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ಜಯಚಂದ್ರ ಅವರು ತಿಳಿಸಿದರು.
ಕೈಗಾರಿಕಾ ಅಭಿವೃದ್ಧಿಯ ಸದ್ಯದ ಸ್ಥಿತಿ ಆಧರಿಸಿ ತಾಲ್ಲೂಕುಗಳನ್ನು ಆರು ವಲಯಗಳನ್ನಾಗಿ ವಿಂಗಡಿಸಲಾಗಿದೆ. ಹೈದರಾಬಾದ್ ಕರ್ನಾಟಕ ಪ್ರದೇಶದಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ಹೊಸ ನೀತಿಯ ಅನುಷ್ಠಾನದಿಂದ ನಿವ್ವಳ ಆಂತರಿಕ ಉತ್ಪನ್ನದಲ್ಲಿ (ಜಿಡಿಪಿ) ಶೇಕಡ 20ರಷ್ಟು ಹೆಚ್ಚಳ ಸಾಧಿಸುವ ಗುರಿ ಇದ್ದು, ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತ ಸಮುದಾಯಗಳ ಜನರಿಗೆ ಕೈಗಾರಿಕೆ ಸ್ಥಾಪಿಸಲು ಉತ್ತೇಜನ ನೀಡಲಾಗುತ್ತದೆ ಎಂದು ಸಚಿವರು ಹೇಳಿದರು. ಸಚಿವ ಸಂಪುಟ ಸಭೆಯ ಮುಖ್ಯಾಂಶಗಳು [ಐಟಿ, ಕೈಗಾರಿಕೆಗಳಿಗೆ ಹೊಸ ನೀತಿ : ಸಿಎಂ]

ಕೆಪಿಎಸ್ಸಿ ನೇಮಕ ಪ್ರಕ್ರಿಯೆ ನಡೆಸಲು ನಿರ್ಧಾರ
ಕರ್ನಾಟಕ ಆಡಳಿತಾತ್ಮಕ ನ್ಯಾಯಾಧೀಕರಣದ ಮೆಟ್ಟಿಲೇರಿರುವ 362 ಕೆಎಎಸ್ ಹುದ್ದೆಗಳನ್ನು ಹೊರತುಪಡಿಸಿ ಹೆಚ್ಚುವರಿಯಾಗಿ 452 ಎ ಮತ್ತು ಬಿ ಶ್ರೇಣಿಯ ಕೆಎಎಸ್ ಹುದ್ದೆಗಳಿಗೆ ನೇಮಕ ಪ್ರಕ್ರಿಯೆ ಕೈಗೊಳ್ಳಲು ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ನೇಮಕ ಪ್ರಕ್ರಿಯೆ ನಡೆಸುವಂತೆ ಕರ್ನಾಟಕ ಲೋಕಸೇವಾ ಆಯೋಗಕ್ಕೆ (ಕೆಪಿಎಸ್ಸಿ) ಸೂಚಿಸಲು ತೀರ್ಮಾನ ಕೈಗೊಳ್ಳಲಾಗಿದೆ.

ಬ್ಯಾಂಕ್ ಅವ್ಯವಹಾರದ ತನಿಖೆ
ರಾಜ್ಯದ ಐದು ಸಹಕಾರಿ ಬ್ಯಾಂಕುಗಳ ಅವ್ಯಹಾರದ ತನಿಖೆಯನ್ನು ಸಿಐಡಿಗೆ ವಹಿಸಬೇಕೋ? ಸಿಬಿಐಗೆ ವಹಿಸಬೇಕೋ? ಎಂಬ ಬಗ್ಗೆ ನಿರ್ಧಾರ ಕೈಗೊಳ್ಳುವ ಜವಾಬ್ದಾರಿಯನ್ನು ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರಿಗೆ ವಹಿಸಲಾಗಿದೆ. ಈ ಬಗ್ಗೆ ಸಹಕಾರ ಮತ್ತು ಗೃಹ ಇಲಾಖೆ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ನಿರ್ದೇಶನ ನೀಡಿದ್ದಾರೆ.

10 ಸಾವಿರ ಮನೆ ಮಂಜೂರು
ರಸ್ತೆ ಬದಿಯಲ್ಲಿ ವಾಸಿಸುವ ಅಂಗವಿಕಲರು, ನಿರ್ಗತಿಕರು, ದೇವದಾಸಿಯರು, ಲೈಂಗಿಕ ಕಾರ್ಯಕರ್ತರಿಗೆ 10 ಸಾವಿರ ಮನೆಗಳನ್ನು ನೀಡಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.

ಕೈದಿಗಳ ಬಿಡುಗಡೆಗೆ ಮಾರ್ಗಸೂಚಿ
ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಕೈದಿಗಳ ಅವಧಿ ಪೂರ್ವ ಬಿಡುಗಡೆಗೆ ಸಂಬಂಧಿಸಿದಂತೆ ಮಾರ್ಗಸೂಚಿಯಲ್ಲಿ ಮಾರ್ಪಡು ಮಾಡಿ ಸುಪ್ರೀಂಕೋರ್ಟ್ಗೆ ಸಲ್ಲಿಸಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆಯಲಾಗಿದೆ. ಕೋರ್ಟ್ಗೆ ಸಲ್ಲಿಕೆ ಮಾಡಿದ ಬಳಿಕ ಸಂಪುಟ ಸಭೆಯಲ್ಲಿ ಚರ್ಚಿಸಿ, ಇದನ್ನು ಜಾರಿಗೆ ತರಲಾಗುತ್ತದೆ.

ಜಲಮಂಡಳಿ ಲೆಕ್ಕ ಅಧೀಕ್ಷರ ಸೇವೆಯಿಂದ ವಜಾ
ಬೆಂಗಳೂರು ಜಲಮಂಡಳಿ ಅಧೀಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಜೈರಾಜ್ ಅವರನ್ನು ಸೇವೆಯಿಂದ ವಜಾಗೊಳಿಸಲು ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆಯಲಾಗಿದೆ. ಜೈರಾಜ್ ವಿರುದ್ಧದ ಹಣ ದುರುಪಯೋಗ ಪ್ರಕರಣ ಸಾಬೀತಾದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು, ದುರುಪಯೋಗವಾಗಿದ್ದ 5.58 ಲಕ್ಷ ರೂ.ಗಳನ್ನು ಅವರಿಂದಲೇ ವಸೂಲಿ ಮಾಡಲಾಗುತ್ತದೆ.

ವೈದ್ಯ ಕಾಲೇಜು ಸ್ಥಾಪನೆಗೆ ಒಪ್ಪಿಗೆ
ಮಂಗಳೂರಿನಲ್ಲಿ ಕಣಚೂರು, ಕೆಜಿಎಫ್ನಲ್ಲಿ ಸಂಭ್ರಮ್ ಮತ್ತು ಬೆಂಗಳೂರಿನಲ್ಲಿ ಈಸ್ಟ್ ಪಾಯಿಂಟ್ ಸಂಸ್ಥೆಗಳು ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಹಿಂದೆ ಮೂಲಭೂತ ಸೌಕರ್ಯಗಳ ಕೊರತೆ ಇತ್ತು ಎಂಬ ಕಾರಣಕ್ಕಾಗಿ ವೈದ್ಯ ಕಾಲೇಜು ಸ್ಥಾಪಪನೆಗೆ ಒಪ್ಪಿಗೆ ನೀಡಿರಲಿಲ್ಲ.

ಬಿ.ಎನ್.ಶಂಕರ್ ನೇತೃತ್ವದಲ್ಲಿ ತನಿಖೆ
ಅಕ್ರಮ ಗಣಿಗಾರಿಕೆ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡಕ್ಕೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕರಾಗಿರುವ ಬಿ.ಎನ್.ಶಂಕರ್ ಅವರನ್ನು ನೇಮಿಸಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದೆ.

ಮಡಿಲು ಯೋಜನೆ ವಿಸ್ತರಣೆ
ಮುಂದಿನ ವರ್ಷದಿಂದ ಪ್ರಸೂತಿ ಆರೈಕೆ ಮತ್ತು ಮಡಿಲು ಯೋಜನೆಯನ್ನು ಎಲ್ಲಾ ಜಿಲ್ಲೆಗಳಿಗೆ ವಿಸ್ತರಣೆ ಮಾಡಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆಯಲಾಗಿದೆ. ಕೇವಲ ಎರಡು ಮಕ್ಕಳ ಹೆರಿಗೆಗೆ ಮಾತ್ರ ಇರುವ ನಿಯಮವನ್ನು ಸಡಿಲಿಸಲು ತೀರ್ಮಾನ ಕೈಗೊಳ್ಳಲಾಗಿದೆ.












Click it and Unblock the Notifications