ನರೇಗಾ ಯೋಜನೆಯಲ್ಲಿ ಕಾರ್ಯನಿರ್ವಹಿಸುತ್ತರುವ ನೌಕರರಿಗೆ ವೈದ್ಯಕೀಯ ವಿಮಾ ಸೌಲಭ್ಯ: ಸಂಪುಟ ಒಪ್ಪಿಗೆ
ಬೆಂಗಳೂರು, ಜನವರಿ 16: ಗ್ರಾಮೀಣಾಭಿವೃದ್ಧಿ ಆಯುಕ್ತಾಲಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕಾರ್ಯಗತಗೊಳಿಸುತ್ತಿರುವ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ 3352 ಸಿಬ್ಬಂದಿಗಳಿಗೆ ಸಾಮೂಹಿಕ ವೈದ್ಯಕೀಯ ವಿಮೆ ಸೌಲಭ್ಯವನ್ನು ಒದಗಿಸಲು ಇಂದು ನಡೆದ ರಾಜ್ಯ ಸಚಿವ ಸಂಪುಟ ತನ್ನ ಒಪ್ಪಿಗೆ ನೀಡಿದೆ.
ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಿದ್ದು, ಇದಕ್ಕಾಗಿ ವಾರ್ಷಿಕ 8.34 ಕೋಟಿ ರೂ. ವೆಚ್ಚ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಮುಂದಿನ 3 ವರ್ಷಗಳಲ್ಲಿ ಈ ಯೋಜನೆ ಜಾರಿಗೊಳಿಸಲು ಅಂದಾಜು 2,514 ಲಕ್ಷ ರೂ ವೆಚ್ಚವಾಗಲಿದೆ.

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ರಾಜ್ಯ, ಜಿಲ್ಲೆ, ತಾಲ್ಲೂಕು, ಹಾಗೂ ಗ್ರಾಮ ಪಂಚಾಯತಿ ಮಟ್ಟದಲ್ಲಿ ಅನುಷ್ಠಾನ ಇಲಾಖೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಇ.ಎಸ್.ಐ. ಸೌಲಭ್ಯ ಹೊಂದಿರುವ ಸಿಬ್ಬಂದಿಗಳನ್ನು ಹೊರತುಪಡಿಸಿದಂತೆ ಉಳಿದ ಸಿಬ್ಬಂದಿಗಳಿಗೆ ಸಾಮೂಹಿಕ ವೈದ್ಯಕೀಯ ವಿಮೆ ಸೌಲಭ್ಯವನ್ನು ಒದಗಿಸಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಮಾಹಿತಿ ಹಂಚಿಕೊಂಡಿದ್ದಾರೆ.
ರಾಜ್ಯದಾದ್ಯಂತ ನರೇಗ ಯೋಜನೆಯನ್ನು ಅನುಷ್ಠಾನಗೊಳಿಸುವಲ್ಲಿ ಹೊರಗುತ್ತಿಗೆ ನೌಕರರು ನಿರ್ಣಾಯಕ ಪಾತ್ರ ವಹಿಸುತ್ತಾರೆ. ಈ ಆರೋಗ್ಯ ವಿಮಾ ಯೋಜನೆಯನ್ನು ಪರಿಚಯಿಸುವ ಮೂಲಕ, ನೌಕರರ ಆರೋಗ್ಯ ಮತ್ತು ಯೋಗಕ್ಷೇಮಕ್ಕಾಗಿ ಸುರಕ್ಷತಾ ಜಾಲವನ್ನು ಒದಗಿಸುವ ಗುರಿಯನ್ನು ಹೊಂದಲಾಗಿದೆ" ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಪ್ರಸ್ತುತ ರಾಜ್ಯ-ಚಾಲಿತ ಕಿಯೊನಿಕ್ಸ್ ಸಂಸ್ಥೆಯಲ್ಲಿ ಹೊರಗುತ್ತಿಗೆ ಸಿಬ್ಬಂದಿಗೆ ಇದೇ ರೀತಿಯ ಗುಂಪು ಆರೋಗ್ಯ ವಿಮಾ ಯೋಜನೆ ಜಾರಿಯಲ್ಲಿದೆ. ನೌಕರರ ಆರೋಗ್ಯ ಭದ್ರತೆಯನ್ನು ಗಮನದಲ್ಲಿರಿಸಿಕೊಂಡು ಸಾಧಾರಣ ವೇತನಕ್ಕಾಗಿ ದೈಹಿಕವಾಗಿ ಬೇಡಿಕೆಯ ಕೆಲಸಗಳನ್ನು ಮಾಡುವಲ್ಲಿ ನಿರತರಾಗಿರುವ ನರೇಗ ನೌಕರರಿಗೂ ವೈದ್ಯಕೀಯ ವಿಮೆ ಸೌಲಭ್ಯವನ್ನು ವಿಸ್ತರಿಸಲಾಗಿದೆ ಎಂದೂ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯವು ಬೆಂಗಳೂರು ಅರಮನೆ (ಭೂಸ್ವಾಧಿನ ಮತ್ತು ವರ್ಗಾವಣೆ) ಅಧಿನಿಯಮ, 1996 ಎಂದು ಕರೆಯಲ್ಪಡುವ ಶಾಸನವನ್ನು ಅಧಿನಿಯಮಿಸಿ ದಿನಾಂಕ: 21.11.1996 ರಿಂದ ಜಾರಿಗೆ ಬರುವಂತೆ ಬೆಂಗಳೂರು ಅರಮನೆಗೆ ಸೇರಿದ ಎಲ್ಲಾ ಸ್ಥಿರ ಚರ ಸ್ವತ್ತುಗಳ (ಕಾಯ್ದೆಯಲ್ಲಿ ನಿರ್ಧಿಷ್ಟಪಡಿಸಲಾದ ಸ್ವತ್ತುಗಳು) ಎಲ್ಲಾ ವಿಧವಾದ ಹಕ್ಕು ರಾಜ್ಯ ಸರ್ಕಾರದಲ್ಲಿ ವಿಹಿತವಾಗುತ್ತದೆ ಎಂದು ತಿಳಿಸಲಾಗಿತ್ತು.
ಈ ಅಧಿನಿಯಮವನ್ನು ಪ್ರಶ್ನಿಸಿ ರಿಟ್ ಅರ್ಜಿ ಸಂಖ್ಯೆ: 3353/1997 ರಲ್ಲಿ ಮತ್ತು ಇತರೆ ಸಂಬAಧಿತ ವಿಷಯಗಳಲ್ಲಿ ಕರ್ನಾಟಕದ ಉಚ್ಛ ನ್ಯಾಯಾಲಯದ ಮುಂದೆ ಪ್ರಶ್ನಿಸಿದ ಸಂದರ್ಭದಲ್ಲಿ ರಾಜ್ಯದ ಶಾಸನದ ಮಾನ್ಯತೆಯನ್ನು ರಾಜ್ಯ ಉಚ್ಛ ನ್ಯಾಯಾಲಯವು ಎತ್ತಿ ಹಿಡಿದಿತ್ತು. ರಾಜ್ಯ ಉಚ್ಛ ನ್ಯಾಯಾಲಯದ ಈ ತೀರ್ಪನ್ನು ಪ್ರಶ್ನಿಸಿ ಅರ್ಜಿದಾರರು ವಿಶೇಷ ಅನುಮತಿ ಅರ್ಜಿ (ಸಿವಿಲ್) ಸಂಖ್ಯೆ: 8650/1997ರಲ್ಲಿ ಮತ್ತು ಇತರೆ ಸಂಬಂಧಿತ ವಿಷಯಗಳಲ್ಲಿ ಸರ್ವೋಚ್ಛ ನ್ಯಾಯಾಲಯದ ಮೊರೆ ಹೋಗಿರುತ್ತಾರೆ. ಸರ್ವೋಚ್ಛ ನ್ಯಾಯಾಲಯವು ಈ ಪ್ರಕರಣದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಆದೇಶ ನೀಡಿದೆ. ಈ ಅರ್ಜಿ ವಿಲೆವಾರಿ ಆಗುವವರೆಗೆ ಮಾಲಿಕತ್ವ ಪ್ರಶ್ನೆಯು ಇತ್ಯರ್ಥವಾಗುವವರೆಗೆ ಟಿ.ಡಿ.ಆರ್ ಪ್ರಕರಣವನ್ನು ಕಾನೂನು ಪ್ರಕಾರ ನಿರ್ವಹಿಸಲು ಸಚಿವ ಸಂಪುಟ ನಿರ್ದೇಶಿಸಿದೆ.












Click it and Unblock the Notifications