ಈ ಭಾಷೆ ರಾಜ್ಯದ ಎರಡನೇ ಅಧಿಕೃತ ಭಾಷೆ: ಮಹತ್ವದ ಅಪ್ಡೇಟ್ ಕೊಟ್ಟ ಡಿ ಕೆ ಶಿವಕುಮಾರ್
ಬೆಂಗಳೂರು, ಸೆಪ್ಟೆಂವರ್08: ತುಳು ರಾಜ್ಯದ ಎರಡನೇ ಅಧಿಕೃತ ಭಾಷೆ ಎಂದು ಘೋಷಿಸಬೇಕು ಎಂಬ ನಿಮ್ಮ ಬೇಡಿಕೆ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭರವಸೆ ನೀಡಿದರು.
ಬೆಂಗಳೂರಿನಲ್ಲಿ ಭಾನುವಾರ ಏರ್ಪಡಿಸಿದ್ದ ಅಷ್ಟೆಮಿದ ಐಸಿರಿ ತುಳುವ ತರ್ಲ್ ಸಾಸಿರಿ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಮಾತನಾಡಿ, ಇತ್ತೀಚೆಗೆ ಕುಂದಾಪುರದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೆ. ಆ ಕಾರ್ಯಕ್ರಮ ಈ ಕಾರ್ಯಕ್ರಮದಲ್ಲಿ ಸೇರಿರುವ ಜನ ನೋಡಿದರೆ ಮುಂದೆ ನೀವೆಲ್ಲರೂ ನಮ್ಮನ್ನು ಬೆಂಗಳೂರಿನಿಂದ ಖಾಲಿ ಮಾಡಿಸುತ್ತೀರೇನೋ ಎಂದು ಭಯವಾಗುತ್ತಿದೆ. ನಿಮ್ಮ ಈ ಶಕ್ತಿ, ಉತ್ಸಾಹ ನೋಡಿ ನನಗೆ ಈ ಅನುಮಾನ ಕಾಡುತ್ತಿದೆ ಎಂದು ಚಟಾಕಿ ಹಾರಿಸಿದರು.

ಇಡೀ ದೇಶಕ್ಕೆ ಕರ್ನಾಟಕದ ಮೂಲಕ ಸಂಸ್ಕೃತಿ ಹಾಗೂ ಶಿಕ್ಷಣ ಕೊಟ್ಟವರು, ಧಾರ್ಮಿಕ ಶಕ್ತಿ ಕೊಟ್ಟವರು, ಬ್ಯಾಂಕ್ ವ್ಯವಸ್ಥೆ ಕೊಟ್ಟವರು ಈ ಕರಾವಳಿ ಜನ. ಆರೋಗ್ಯ ಕ್ಷೇತ್ರ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ನೀವು ಮುಂದೆ ಇದ್ದೀರಿ. ಕರಾವಳಿ ಭಾಗ, ದಕ್ಷಿಣ ಕನ್ನಡದ ಜನ ವಿದ್ಯಾವಂತರು, ಬುದ್ಧಿವಂತರು, ಪ್ರಜ್ಞಾವಂತರು. ನಿಮ್ಮ ಜೊತೆ ನಾನು ಇದ್ದೇನೆ ಎಂದು ಹೇಳಲು ಇಲ್ಲಿಗೆ ಬಂದಿದ್ದೇನೆ. ಈ ಡಿ.ಕೆ. ಶಿವಕುಮಾರ್ ನಿಮ್ಮವ ಎಂದು ಭಾವಿಸಿ. ನಾನು ನಿಮ್ಮ ಪರವಾಗಿದ್ದೇನೆ. ನೀವು ನನಗೆ ಬೆಂಬಲವಾಗಿರಿ. ನಾನು ನಿಮ್ಮ ಆಶೀರ್ವಾದವನ್ನಷ್ಟೇ ಕೇಳುತ್ತಿದ್ದೇನೆ ಎಂದು ತಿಳಿಸಿದರು.
ಮಂಗಳೂರು, ಉಡುಪಿ ಸೇರಿದಂತೆ ಕರಾವಳಿ ಭಾಗದ ಜನ ಉದ್ಯೋಗಕ್ಕಾಗಿ ವಲಸೆ ಹೋಗದಂತೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ರೂಪಿಸಲು ನಾನು ನಿಮ್ಮ ಭಾಗದ ಶಾಸಕರು, ಸ್ಪೀಕರ್ ಖಾದರ್ ಅವರ ಜೊತೆಗೆ ಚರ್ಚೆ ಮಾಡಿದ್ದೇನೆ ಎಂದು ತಿಳಿಸಿದರು. ನಿಮ್ಮ ಸಂಸ್ಕೃತಿ, ಇತಿಹಾಸ ದೇಶದ ಯಾವುದೇ ಭಾಗದಲ್ಲೂ ಇಲ್ಲ. ನೀವೆಲ್ಲರೂ ಕರ್ನಾಟಕ ರಾಜ್ಯದ ಆಸ್ತಿ ಎಂದು ತಿಳಿಸಿದರು.
ಬೂತ್ ಮಟ್ಟದಲ್ಲಿ ನಾಯಕರಾಗಿ ಬೆಳೆದು ನಿಮ್ಮ ಸಾಮರ್ಥ್ಯ ಪ್ರದರ್ಶಿಸಿದರೆ ಮಾತ್ರ ರಾಜಕೀಯದಲ್ಲಿ ಎತ್ತರಕ್ಕೆ ಬೆಳೆಯಲು ಸಾಧ್ಯ. ಅಲ್ಲಿ ನಿಮ್ಮ ಶಕ್ತಿ ಸಾಬೀತು ಮಾಡಿದರೆ ದೊಡ್ಡ ಮಟ್ಟದ ನಾಯಕರಾಗಿ ಬೆಳೆಯಬಹುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
ರಾಮಕೃಷ್ಣ ಹೆಗಡೆಯವರು ಮುಖ್ಯಮಂತ್ರಿಗಳಾಗಿದ್ದವರು, ಅವರ ವಿರುದ್ಧ ಹೋರಾಟ ಮಾಡಿದ್ದಕ್ಕೆ ನನಗೆ ಸಾತನೂರು ಕ್ಷೇತ್ರದಿಂದ ಟಿಕೆಟ್ ನೀಡಿದರು. ಏಕೆಂದರೆ ನನ್ನ ಸಂಘಟನೆಯ ಸಾಮರ್ಥ್ಯ ಅಷ್ಟು ಚೆನ್ನಾಗಿತ್ತು. ಯುವ ನಾಯಕನಾಗಿ ನಾನು ಪಕ್ಷವನ್ನು ತಳಮಟ್ಟದಿಂದ ಕಟ್ಟಿದ್ದೆ. ಈ ರೀತಿ ನಾಯಕನಾಗಿ ಬೆಳೆದೆ ಎಂದು ಹೇಳಿದರು.
ಚುನಾವಣೆಗೆ ಹಣ ಮುಖ್ಯವಲ್ಲ, ನಿಮ್ಮ ಸಂಘಟನಾ ಸಾಮರ್ಥ್ಯ ಮುಖ್ಯ. ರತನ್ ಟಾಟಾ ಅವರು ಒಂದು ಮಾತು ಹೇಳುತ್ತಿದ್ದರು, 'ವೇಗವಾಗಿ ಹೋಗಬೇಕು ಎಂದರೆ ಒಬ್ಬನೇ ಹೋಗು. ದೂರ ಕ್ರಮಿಸಬೇಕು ಎಂದರೆ ಜನರೊಟ್ಟಿಗೆ ಹೆಜ್ಜೆ ಹಾಕು' ಎಂದು. ನೀವು ನಾಯಕರುಗಳ ಹಿಂದೆ ಓಡಾಡಿದರೆ ಪ್ರಯೋಜನವಿಲ್ಲ. ನೀವೇ ನಾಯಕರಾಗಿ ಹೊರಹೊಮ್ಮಬೇಕು ಎಂದು ಕಿವಿ ಮಾತು ಹೇಳಿದರು.












Click it and Unblock the Notifications