ಬೊಮ್ಮಾಯಿ ದೆಹಲಿಗೆ; ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ನಿರೀಕ್ಷೆ
ಬೆಂಗಳೂರು, ಜುಲೈ 30; ಮುಖ್ಯಮಂತ್ರಿಯಾಗಿ ಅಧಿಕಾರಿ ಸ್ವೀಕಾರ ಮಾಡಿದ ಬಳಿಕ ಬಸವರಾಜ ಬೊಮ್ಮಾಯಿ ಮೊದಲ ಬಾರಿಗೆ ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ಇದರಿಂದಾಗಿ ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ನಿರೀಕ್ಷೆ ಹೆಚ್ಚಾಗಿದೆ.
ಪ್ರಧಾನಿ ನರೇಂದ್ರ ಮೋದಿ ಭೇಟಿಗೆ ಸಮಯ ನಿಗದಿಯಾಗಿದೆ. ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾರನ್ನು ಸಹ ಭೇಟಿ ಮಾಡಲಿದ್ದಾರೆ.
ಬುಧವಾರ ಬಸವರಾಜ ಬೊಮ್ಮಾಯಿ ಏಕಾಂಗಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಇನ್ನೂ ನಡೆಯಬೇಕಿದೆ. ಈಗ ಮುಖ್ಯಮಂತ್ರಿಗಳು ದೆಹಲಿ ಭೇಟಿ ಕೈಗೊಂಡಿದ್ದು, ಸಚಿವ ಸ್ಥಾನ ಆಕಾಂಕ್ಷಿಗಳ ನಿರೀಕ್ಷೆಯನ್ನು ಹೆಚ್ಚು ಮಾಡಿದೆ.
ಬಸವರಾಜ ಬೊಮ್ಮಾಯಿ ಸಂಪುಟ ಸೇರಲು ಈಗಾಗಲೇ ಹಲವು ಶಾಸಕರು ಪ್ರಯತ್ನ ನಡೆಸಿದ್ದಾರೆ. ಈ ಕುರಿತು ಬಹಿರಂಗವಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಯಡಿಯೂರಪ್ಪ ಸಂಪುಟದಲ್ಲಿದ್ದ ಹಲವು ಸಚಿವರು ಬೊಮ್ಮಾಯಿ ಸಂಪುಟ ಸೇರುವುದಿಲ್ಲ, ಅವರಿಗೆ ಸಚಿವ ಸ್ಥಾನ ಸಿಗುವುದಿಲ್ಲ ಎಂಬ ಸುದ್ದಿಗಳು ಹಬ್ಬಿವೆ. ಹಲವಾರು ಶಾಸಕರು ಸಚಿವ ಸ್ಥಾನದ ಬಗ್ಗೆ ಮಾತನಾಡಿದ್ದಾರೆ...

ಬಸವರಾಜ ಬೊಮ್ಮಾಯಿ ಹೇಳಿಕೆ
ದೆಹಲಿ ಭೇಟಿ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿದ್ದಾರೆ. "ವರಿಷ್ಠರ ಭೇಟಿಗೆ ಸಮಯ ಕೇಳಿದ್ದೇನೆ. ಸಂಪುಟ ರಚನೆ ವಿಚಾರ ಮೊದಲ ಭೇಟಿಯಲ್ಲೇ ಚರ್ಚೆ ಮಾಡುವುದಿಲ್ಲ. ಮುಂದಿನ ಭೇಟಿಯಲ್ಲಿ ಚರ್ಚೆ ಮಾಡುತ್ತೇನೆ" ಎಂದು ಹೇಳಿದ್ದಾರೆ.

ನಾನೂ ಸಚಿವ ಸ್ಥಾನದ ಆಕಾಂಕ್ಷಿ
ಬಳ್ಳಾರಿ ನಗರ ಕ್ಷೇತ್ರದ ಶಾಸಕ ಸೋಮಶೇಖರ ರೆಡ್ಡಿ ಮಾಧ್ಯಮಗಳ ಜೊತೆ ಮಾತನಾಡಿದ್ದು, "ನಾನೂ ಸಚಿವ ಸ್ಥಾನದ ಆಕಾಂಕ್ಷಿ. ರಾಜ್ಯದಲ್ಲಿ 2008ರಿಂದ ಬಿಜೆಪಿ ಅಧಿಕಾರಕ್ಕೆ ಬರಲು ನಮ್ಮ ಪಾತ್ರವೂ ಇದೆ. ಹಳಬರು ಜಾಗ ಖಾಲಿ ಮಾಡಿ, ಹೊಸಬರಿಗೆ ಅವಕಾಶ ಮಾಡಿಕೊಡಬೇಕು. ಹಿಂದೆ ಸಚಿವ ಸಂಪುಟದಲ್ಲಿ ಬಳ್ಳಾರಿ ಜಿಲ್ಲೆಯ ಮೂವರು ಮಂತ್ರಿಗಳಿದ್ದರು. ಈಗ ಒಬ್ಬರಿಗೂ ಸ್ಥಾನ ನೀಡಿಲ್ಲ. ಜಿಲ್ಲೆಗೆ ಪ್ರಾತಿನಿಧ್ಯ ನೀಡಿರುವುದರಿಂದ ಪಕ್ಷ ಸಂಘಟನೆಗೆ ಹಿನ್ನಡೆಯಾಗುತ್ತಿದೆ" ಎಂದು ಹೇಳಿದ್ದಾರೆ.

ಮುಖ್ಯಮಂತ್ರಿಯ ಪರಮಾಧಿಕಾರ
ಮಾಜಿ ಸಚಿವ ಮರುಗೇಶ್ ನಿರಾಣಿ ಮಾತನಾಡಿದ್ದು, "ಸಂಪುಟ ವಿಸ್ತರಣೆ ಮುಖ್ಯಮಂತ್ರಿಯ ಪರಮಾಧಿಕಾರ. ಅವರು ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧ. ಸಂಪುಟ ವಿಸ್ತರಣೆ ಯಾವಾಗ ಮಾಡಬೇಕು. ಯಾರನ್ನು ತೆಗೆದುಕೊಳ್ಳಬೇಕು ಎಂಬುದು ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟಿದ್ದು, ಅವರ ನಿರ್ಧಾರಕ್ಕೆ ನಾವೆಲ್ಲರೂ ಬದ್ಧರಾಗಿರುತ್ತೇವೆ" ಎಂದು ಹೇಳಿದರು.

ಹೊರಗುಳಿಯವ ನಿಲುವು ತಾಳುವುದಿಲ್ಲ
ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ ಮಾತನಾಡಿದ್ದು, "ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಯಾವುದೇ ಸ್ಥಾನ ನೀಡಿದರೂ ಒಪ್ಪಿಕೊಳ್ಳುವೆ. ಪಕ್ಷ ಸಂಘಟನೆಗೆ ಸೂಚಿಸಿದರೂ ಆಕ್ಷೇಪಿಸುವುದಿಲ್ಲ. ಜಗದೀಶ್ ಶೆಟ್ಟರ್ ಅವರಂತೆ ಹೊರಗುಳಿಯುವ ನಿಲುವು ತಾಳುವುದಿಲ್ಲ. ಉಪಮುಖ್ಯಮಂತ್ರಿ, ಸಚಿವ ಸ್ಥಾನ ನೀಡಿದರೆ ನಿಭಾಯಿಸುವೆ. ಇಲ್ಲ ಶಾಸಕನಾಗಿ ಉಳಿದು ಪಕ್ಷ ಸಂಘಟನೆ ಕೆಲಸ ಮಾಡುವೆ. ಸ್ಥಾನಮಾನಕ್ಕಾಗಿ ಲಾಭಿ ನಡೆಸುವ ಪ್ರಶ್ನೆಯೇ ಇಲ್ಲ" ಎಂದು ಈಶ್ವರಪ್ಪ ಹೇಳಿದರು.
Recommended Video

ಅವಕಾಶ ಸಿಗುವ ಭರವಸೆ ಇದೆ
ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಮಾತನಾಡಿದ್ದು, "ತಮಗೆ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಕೆಲಸ ಮಾಡಲು ಅವಕಾಶ ಸಿಗುತ್ತದೆ ಎಂಬ ಭರವಸೆ ಇದೆ. ಆದರೆ ಅದಕ್ಕಾಗಿ ಒತ್ತಡ ತಂತ್ರ, ಲಾಬಿಗಳನ್ನು ಮಾಡಿಲ್ಲ. ನನ್ನನ್ನು ತೀರ್ಥಹಳ್ಳಿ ಜನತೆ ನಾಲ್ಕು ಬಾರಿ ಗೆಲ್ಲಿಸಿದ್ದಾರೆ. ಹಿರಿಯರು ಮೆಚ್ಚುವಂತೆ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಸಚಿವ ಸ್ಥಾನಕ್ಕಾಗಿ ಯಾವುದೇ ಒತ್ತಡ ಹೇರುವುದಿಲ್ಲ. ಹಿರಿಯರು ನನ್ನನ್ನು ಸಚಿವರನ್ನಾಗಿ ಮಾಡುತ್ತಾರೆ ಎಂಬ ನಂಬಿಕೆ, ಭರವಸೆ ಇದೆ" ಎಂದರು.












Click it and Unblock the Notifications