ಸಂಪುಟ ವಿಸ್ತರಣೆ : ಬಸವರಾಜ ಹೊರಟ್ಟಿ ಅಸಮಾಧಾನ!
ಬೆಂಗಳೂರು, ಜೂನ್ 05 : ಸಚಿವ ಸಂಪುಟ ರಚನೆ ವಿಚಾರದಲ್ಲಿ ಜೆಡಿಎಸ್ ಪಕ್ಷದಲ್ಲಿ ಅಸಮಾಧಾನ ಎದ್ದಿದೆ. ಪಕ್ಷದ ಹಿರಿಯ ನಾಯಕ ಬಸವರಾಜ ಹೊರಟ್ಟಿ ಅವರು ವಿಧಾನಪರಿಷತ್ ಸದಸ್ಯರಿಗೆ ಸಚಿವ ಸ್ಥಾನ ಇಲ್ಲ ಎಂಬ ನಿರ್ಧಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಜೂನ್ 6ರ ಬುಧವಾರ ಮಧ್ಯಾಹ್ನ 2 ಗಂಟೆಗೆ ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ನಿಗದಿಯಾಗಿದೆ. ಆದರೆ, ಎಚ್.ಡಿ.ಕುಮಾರಸ್ವಾಮಿ ಅವರ ಸಂಪುಟಕ್ಕೆ ಸೇರುವ ಜೆಡಿಎಸ್ ಶಾಸಕರು ಯಾರು? ಎಂಬುದು ಇನ್ನೂ ಅಂತಿಮವಾಗಿಲ್ಲ.

ಜೆಡಿಎಸ್ ವಿಧಾನಪರಿಷತ್ ಸದಸ್ಯರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದು ನಿರ್ಧಾರ ತೆಗೆದುಕೊಂಡಿದೆ. ಆದ್ದರಿಂದ, ಪಕ್ಷದ ಹಿರಿಯ ನಾಯಕ ಬಸವರಾಜ ಹೊರಟ್ಟಿ ಪಕ್ಷದ ನಾಯಕರ ವಿರುದ್ಧ ಅಸಮಾಧಾನಗೊಂಡಿದ್ದಾರೆ.
ಬಸವರಾಜ ಹೊರಟ್ಟಿ ಅವರಿಗೆ ಸಚಿವ ಸ್ಥಾನ ನೀಡುವ ಬದಲು ವಿಧಾನಪರಿಷತ್ ಸಭಾಪತಿ ಸ್ಥಾನ ನೀಡಲು ಜೆಡಿಎಸ್ ಚಿಂತನೆ ನಡೆಸಿದೆ. ಆದ್ದರಿಂದ, ಅವರು ಅಸಮಾಧಾನಗೊಂಡಿದ್ದು, 'ಸಚಿವ ಸ್ಥಾನವೂ ಬೇಡ, ಸಭಾಪತಿ ಸ್ಥಾನವೂ ಬೇಡ' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂದು ಸಂಜೆ 4 ಗಂಟೆಗೆ ಎಚ್.ಡಿ.ಕುಮಾರಸ್ವಾಮಿ ಸಂಪುಟ ಸೇರುವ ಜೆಡಿಎಸ್ ನಾಯಕರ ಪಟ್ಟಿಯನ್ನು ಎಚ್.ಡಿ.ದೇವೇಗೌಡ ಬಿಡುಗಡೆ ಮಾಡಲಿದ್ದಾರೆ. ಮೊದಲ ಹಂತದಲ್ಲಿ 8 ಶಾಸಕರು ಮಾತ್ರ ಸಂಪುಟ ಸೇರುವ ಸಾಧ್ಯತೆ ಇದೆ.
ಮತ್ತೊಂದು ಕಡೆ ಪರಿಷತ್ ಸದಸ್ಯ ಟಿ.ಎ.ಶರವಣ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 'ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಲಿ, ಜೆಡಿಎಸ್ ಅಧಿಕಾರಕ್ಕೆ ಬರಲಿ ಎಂದು ದಕ್ಷಿಣ ಭಾರತದ ಪ್ರಸಿದ್ಧ ದೇವಾಲಯಲ್ಲಿ ಪೂಜೆ ಮಾಡಿಸಿದ್ದೇನೆ. ಈಗ ಸಚಿವ ಸ್ಥಾನ ಇಲ್ಲ ಎಂದು ಹೇಳುವುದು ಎಷ್ಟು ಸರಿ?' ಎಂದು ಪ್ರಶ್ನಿಸಿದ್ದಾರೆ.












Click it and Unblock the Notifications