ಸಂಪುಟ ವಿಸ್ತರಣೆ ಗಳಿಗೆ ಸಮೀಪಿಸಿದರೂ ಮುಗಿಯದ ಲಾಬಿ
ಬೆಂಗಳೂರು, ಜೂನ್ 6: ರಾಜ್ಯ ಸಚಿವ ಸಂಪುಟದ ವಿಸ್ತರಣೆಗೆ ಮುಹೂರ್ತ ಸಮೀಪಿಸುತ್ತಿದೆ. ಬುಧವಾರ ಮಧ್ಯಾಹ್ನ 2.12ರ ಸಮಯದಲ್ಲಿ ಜೆಡಿಎಸ್ ಮತ್ತು ಬಿಎಸ್ಪಿಯಿಂದ 9 ಮತ್ತು ಕಾಂಗ್ರೆಸ್ನಿಂದ 18 ಮಂದಿ ಪ್ರಮಾಣವಚನ ಸ್ವೀಕರಿಸುವ ನಿರೀಕ್ಷೆಯಿದೆ.
ಎರಡೂ ಪಕ್ಷಗಳ ವರಿಷ್ಠರು ಮೊದಲ ಹಂತದ ಸಂಪುಟ ವಿಸ್ತರಣೆಯ ಪಟ್ಟಿಯನ್ನು ಅಂತಿಮಗೊಳಿಸಿದ್ದರೆ ಎನ್ನಲಾಗಿದ್ದರೂ, ಸಚಿವ ಆಕಾಂಕ್ಷಿಗಳ ಲಾಬಿ ಮುಂದುವರಿದಿದೆ.
ಕಾಂಗ್ರೆಸ್ ಶಾಸಕರು ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಪ್ರಮುಖ ಮನವೊಲಿಸುವ ಕಾರ್ಯದಲ್ಲಿ ನಿರತರಾಗಿದ್ದರೆ, ಇತ್ತ ಜೆಡಿಎಸ್ನಲ್ಲಿ ಆಕಾಂಕ್ಷಿಗಳ ದಂಡು ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಪಕ್ಷದ ವರಿಷ್ಠ ಎಚ್.ಡಿ. ದೇವೇಗೌಡ ಅವರ ನಿವಾಸಕ್ಕೆ ಲಗ್ಗೆ ಇಟ್ಟಿದ್ದಾರೆ.

ಖಾತೆಗಳು ಎರಡೂ ಪಕ್ಷಗಳ ನಡುವೆ ಹಂಚಿಕೆಯಾಗಿರುವುದರಿಂದ ಕೆಲವೇ ಶಾಸಕರಿಗೆ ಸಂಪುಟ ಸೇರುವ ಅವಕಾಶ ಸಿಗಲಿದೆ. ಹೀಗಾಗಿ ಆಕಾಂಕ್ಷಿಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.
ಕೊನೆಯ ಹಂತದಲ್ಲಿ ಪಟ್ಟಿಯಲ್ಲಿ ಬದಲಾವಣೆ ಮಾಡಲು ವರಿಷ್ಠರ ಮನವೊಲಿಸಲು ಆಕಾಂಕ್ಷಿಗಳು ಕಸರತ್ತು ನಡೆಸಿದ್ದಾರೆ.
ಕೆ.ಆರ್ ನಗರ ಶಾಸಕ ಸಾ.ರಾ. ಮಹೇಶ್ ಹಾಗೂ ಶಿರಾ ಶಾಸಕ ಸತ್ಯನಾರಾಯಣ ಅವರು ಬುಧವಾರ ಬೆಳಿಗ್ಗೆ ಜೆ.ಪಿ. ನಗರದಲ್ಲಿರುವ ಕುಮಾರಸ್ವಾಮಿ ಅವರ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದರು.
ಸಂಭಾವ್ಯ ಸಚಿವರ ಪಟ್ಟಿಯಲ್ಲಿ ಈ ಇಬ್ಬರೂ ಶಾಸಕರ ಹೆಸರಿಲ್ಲ. ಹೀಗಾಗಿ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಗಳಾದ ಇಬ್ಬರೂ, ಕೊನೆಯ ಕ್ಷಣದ ಲಾಬಿ ನಡೆಸಲು ಮುಂದಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.












Click it and Unblock the Notifications