ಬಿಬಿಎಂಪಿ ಚುನಾವಣೆ ಬಳಿಕ ಸಚಿವ ಸಂಪುಟ ವಿಸ್ತರಣೆ?
ಬೆಂಗಳೂರು, ಜೂ. 03 : ಪಂಚಾಯಿತಿ ಚುನಾವಣೆ ನಂತರ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಕಾದು ಕುಳಿತವರಿಗೆ ನಿರಾಸೆಯಾಗುವ ಸಾಧ್ಯತೆ ಇದೆ. ಬಿಬಿಎಂಪಿ ಚುನಾವಣೆ ನೆಪ ಮುಂದಿಟ್ಟುಕೊಂಡು ಸಂಪುಟ ವಿಸ್ತರಣೆ ಮುಂದೂಡುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ. ಆದರೆ, ಈ ಕುರಿತು ಅಂತಿಮ ತೀರ್ಮಾನ ಜೂನ್ 9ರಂದು ಹೊರಬೀಳಲಿದೆ.
ರಾಜ್ಯದಲ್ಲಿ ಎರಡು ಹಂತದ ಗ್ರಾಮ ಪಂಚಾಯಿತಿ ಚುನಾವಣೆಯ ಮತದಾನ ಪೂರ್ಣಗೊಂಡಿದ್ದು ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆ ಸೇರಿದೆ. ಜೂನ್ 5ರ ಶುಕ್ರವಾರ ಫಲಿತಾಂಶ ಪ್ರಕಟಗೊಳ್ಳಲಿದೆ. ಪಂಚಾಯಿತಿ ಚುನಾವಣೆ ಬಳಿಕ ಸಚಿವ ಸಂಪುಟ ವಿಸ್ತರಣೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು. [ಸಂಪುಟ ವಿಸ್ತರಣೆ : ಖಾತೆ, ವ್ಯಕ್ತಿಯೂ ಬದಲಾಗಬಹುದು!]

ಆದರೆ, ಸುಪ್ರೀಂಕೋರ್ಟ್ ಮೇ 5ರಂದು ನೀಡಿದ ಆದೇಶದಂತೆ ಸರ್ಕಾರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯನ್ನು ಮೂರು ತಿಂಗಳಿನಲ್ಲಿ ನಡೆಸಬೇಕಾಗಿದೆ. ಆಗಸ್ಟ್ 5ರೊಳಗೆ ಪಾಲಿಕೆ ಚುನಾವಣೆ ಮುಗಿಯಬೇಕು. ಜೂನ್ 15ರ ವೇಳೆಗೆ ಚುನಾವಣೆ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ. ಆದ್ದರಿಂದ ಸಂಪುಟ ವಿಸ್ತರಣೆ ಮುಂದಕ್ಕೆ ಹೋಗುವ ಸಾಧ್ಯತೆ ಇದೆ. [ಪರಮೇಶ್ವರಗೆ ಡಿಸಿಎಂ ಪಟ್ಟ, ಸಿಎಂ ಘೋಷಣೆ]
ಸಿಎಂ, ರಾಹುಲ್ ಭೇಟಿ : ಜೂನ್ 9ರಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಲಿದ್ದು, ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಮತ್ತು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲಿದ್ದಾರೆ. [ಮೂರು ತಿಂಗಳಲ್ಲಿ ಬಿಬಿಎಂಪಿ ಚುನಾವಣೆ ನಡೆಸಿ]
ಸರ್ಕಾರ ಎರಡು ವರ್ಷ ಪೂರ್ಣಗೊಳಿಸಿರುವ ಬಗ್ಗೆ, ನಿಗಮ ಮಂಡಳಿ ನೇಮಕಾತಿ, ಸಚಿವ ಸಂಪುಟ ವಿಸ್ತರಣೆ ಬಗ್ಗೆ ರಾಹುಲ್ ಗಾಂಧಿ ಜೊತೆ ಉಭಯ ನಾಯಕರು ಚರ್ಚೆ ನಡೆಸುವ ಸಾಧ್ಯತೆ ಇದೆ. ಈ ಭೇಟಿಯ ಬಳಿಕ ಸಂಪುಟ ವಿಸ್ತರಣೆಯಾಗಲಿದೆಯೇ? ಎಂಬ ಬಗ್ಗೆ ಅಂತಿಮ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ.
ಶಾಸಕರಿಗೆ ನಿರಾಸೆ : ಸಂಪುಟ ವಿಸ್ತರಣೆ ಬಗ್ಗೆ ಹಲವು ದಿನಗಳಿಂದ ಮಾತುಕತೆಗಳು ನಡೆಯುತ್ತಿವೆ. ಖಾಲಿ ಇರುವ 4 ಸಚಿವ ಸ್ಥಾನಗಳನ್ನು ಭರ್ತಿ ಮಾಡಬೇಕು ಎಂದು ಹಲವು ಶಾಸಕರು ದೆಹಲಿಗೂ ಹೋಗಿ ಬಂದರು. ಆದರೆ, ಇದುವರೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಪುಟ ವಿಸ್ತರಣೆಯನ್ನು ಮುಂದಕ್ಕೆ ಹಾಕುತ್ತಲೇ ಬಂದಿದ್ದಾರೆ.












Click it and Unblock the Notifications