ಸಂಪುಟ ವಿಸ್ತರಣೆ; ಸಚಿವ ಸ್ಥಾನ ಕೈತಪ್ಪಿದ ಶಾಸಕರ ಸ್ಟೇಟಸ್ಗಳು
ಬೆಂಗಳೂರು, ಆಗಸ್ಟ್ 04; ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟ ವಿಸ್ತರಣೆ ಮಾಡಿದರು. 29 ಶಾಸಕರು ಬುಧವಾರ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಹಲವು ಶಾಸಕರಿಗೆ ನಿರಾಸೆಯಾಗಿದೆ.
ಬಿ. ಎಸ್. ಯಡಿಯೂರಪ್ಪ ಸಂಪುಟದಲ್ಲಿ ಸಚಿವರಾಗಿದ್ದ ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿ, ಅರವಿಂದ ಲಿಂಬಾವಳಿ, ಎಸ್. ಸುರೇಶ್ ಕುಮಾರ್, ಆರ್. ಶಂಕರ್, ಶ್ರೀಮಂತ ಪಾಟೀಲ, ಸಿ. ಪಿ. ಯೋಗೀಶ್ವರ್ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಸ್ಥಾನ ಪಡೆದಿಲ್ಲ.
ಉಳಿದಂತೆ ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಹಲವಾರು ಶಾಸಕರಿಗೆ ನಿರಾಸೆಯಾಗಿದೆ. ಬೆಂಗಳೂರು ನಗರದ 7 ಶಾಸಕರು ಬಸವರಾಜ ಬೊಮ್ಮಾಯಿ ಸಂಪುಟ ಸೇರುತ್ತಿದ್ದಾರೆ. ತುಮಕೂರು ಜಿಲ್ಲೆಗೆ ಎರಡು ಸಚಿವ ಸ್ಥಾನ ಸಿಕ್ಕಿದೆ.
ರಾಮನಗರ, ಮೈಸೂರು, ಕೊಡಗು, ಚಾಮರಾಜನಗರ ಜಿಲ್ಲೆಗಳಿಗೆ ಯಾವುದೇ ಸಚಿವ ಸ್ಥಾನ ಸಿಕ್ಕಿಲ್ಲ. ಮೈಸೂರು ಭಾಗದಲ್ಲಿ ಎಸ್. ಎ. ರಾಮದಾಸ್ ಸಂಪುಟ ಸೇರುವ ನಿರೀಕ್ಷೆ ಇತ್ತು. ಹೊನ್ನಾಳಿ ಶಾಸಕ ಎಂ. ಪಿ. ರೇಣುಕಾಚಾರ್ಯಗೆ ಸಹ ಸಚಿವ ಸ್ಥಾನ ಸಿಕ್ಕಿಲ್ಲ. ಸಚಿವ ಸ್ಥಾನ ಕೈತಪ್ಪಿದ ಶಾಸಕರ ಟ್ವೀಟರ್, ಫೇಸ್ ಬುಕ್ ಸ್ಟೇಟಸ್ ಇಲ್ಲಿದೆ.
|
ಎಂ. ಪಿ. ರೇಣುಕಾಚಾರ್ಯ ಸ್ಟೇಟಸ್
ಹೊನ್ನಾಳಿ ಶಾಸಕ ಎಂ. ಪಿ. ರೇಣುಕಾಚಾರ್ಯ, "ಪಕ್ಷ ನನಗೆ ತಾಯಿ ಸಮಾನ, ನನ್ನ ಪಕ್ಷ, ಸಂಘಟನೆ ಹಾಗೂ ವರಿಷ್ಠರು ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ದ. ಜನ ಸೇವೆಯೇ ನನ್ನ ಕಾಯಕ, ನನ್ನ ಸಂಪೂರ್ಣ ಜೀವನವನ್ನು ನನ್ನ ಮತ ಕ್ಷೇತ್ರದ ಹೊನ್ನಾಳಿ-ನ್ಯಾಮತಿ ಅವಳಿ ತಾಲ್ಲೂಕಿನ ಜನತೆಯ ಸೇವೆಗೆ ಮುಡಿಪಿಟ್ಟಿದ್ದೇನೆ" ಎಂದು ಟ್ವೀಟ್ ಮಾಡಿದ್ದಾರೆ.
"ನಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ನಿರಾಶರಾಗದೆ ಮುಂಬರುವ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗೆ ಪಕ್ಷ ಸಂಘಟಿಸಲು ವಿನಂತಿಸುತ್ತೇನೆ" ಎಂದು ಹೇಳಿದ್ದಾರೆ.
|
ಎಸ್. ಎ. ರಾಮದಾಸ್ ಟ್ವೀಟ್
ಮೈಸೂರಿನ ಕೆ. ಆರ್. ನಗರ ಕ್ಷೇತ್ರ ಶಾಸಕ ಎಸ್. ಎ. ರಾಮದಾಸ್ ಸಚಿವರಾಗಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಸಚಿವರಾಗುವ ಶಾಸಕ ಪಟ್ಟಿ ಬಿಡುಗಡೆ ಬಳಿಕ ಅವರು ಟ್ವೀಟ್ ಮಾಡಿದ್ದಾರೆ. 'ಪಕ್ಷ ಕಟ್ಟಿ ಬೆಳೆಸಿ, ಅರ್ಹತೆ ಹೊಂದಿ ಸಚಿವರಾಗಿ ಪ್ರಮಾಣವಚನ ತೆಗೆದುಕೊಳ್ಳುತ್ತಿರುವ ನೂತನ ಸಚಿವರಿಗೆ ಅಭಿನಂದನೆಗಳು. ಕರ್ನಾಟಕವನ್ನು ದೇಶದಲ್ಲಿ ನಂ.1 ಮಾಡಲು ತಾವೆಲ್ಲ ಶ್ರಮಿಸುತ್ತೀರೆಂದು ನಂಬಿರುತ್ತೇನೆ. ತಮ್ಮೆಲ್ಲರಿಗೂ ತಾಯಿ ಚಾಮುಂಡೇಶ್ವರಿ ಶುಭವನ್ನುಂಟುಮಾಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ಎಂ. ಪಿ. ಕುಮಾರಸ್ವಾಮಿ ಫೇಸ್ಬುಕ್ ಪೋಸ್ಟ್
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಕ್ಷೇತ್ರದ ಶಾಸಕ ಎಂ. ಪಿ. ಕುಮಾರಸ್ವಾಮಿ, 'ಆತ್ಮೀಯ ನನ್ನ ವಿಧಾನಸಭಾ ಕ್ಷೇತ್ರದ ಬಂಧುಗಳೇ, ಈಗ ತಾನೇ ವಿಧಾನಸೌಧದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಅವರು ನನ್ನನ್ನು ಕರೆಸಿ ಇಂದಿನ ಸಂಪುಟದಲ್ಲಿ ಚಿಕ್ಕಮಗಳೂರು ಜಿಲ್ಲೆಗೆ ಯಾವುದೇ ಸಚಿವ ಸ್ಥಾನ ನೀಡಲಾಗುತ್ತಿಲ್ಲ ಹಾಗೂ ಸರ್ಕಾರಕ್ಕೆ ನನ್ನ ಬೆಂಬಲವನ್ನು ಕೋರಿದರು. ಹಾಗೆ ನನ್ನ ಕ್ಷೇತ್ರಕ್ಕೆ ಹಾಗೂ ಚಿಕ್ಕಮಗಳೂರು ಜಿಲ್ಲೆ ಅಭಿವೃದ್ಧಿಗೆ ಪ್ರಾಶಸ್ತ್ಯ ನೀಡುವುದಾಗಿಯೂ, ಮುಂದಿನ ಕೆಲ ದಿನಗಳಲ್ಲಿ ಸಂಪುಟ ವಿಸ್ತರಣೆ ನಡೆಯುವ ಸಂದರ್ಭದಲ್ಲಿ ನನ್ನನ್ನು ಪರಿಗಣಿಸುವುದಾಗಿಯೂ ಭರವಸೆ ನೀಡಿದ್ದಾರೆ. ಭರವಸೆ ನೀಡಿದ ಮಾನ್ಯ ಮುಖ್ಯಮಂತ್ರಿಗಳಿಗೆ, ನನಗಾಗಿ ಪ್ರಾರ್ಥನೆ ಸಲ್ಲಿಸಿ ನಿರೀಕ್ಷೆ ಇಟ್ಟುಕೊಂಡಿದ್ದ ಕ್ಷೇತ್ರದ ಜನತೆಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಈ ಸರ್ಕಾರ ಅತ್ಯಂತ ಸುಭದ್ರವಾಗಿ ಕೆಲಸ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ, ಹಾಗೂ ಕ್ಷೇತ್ರದ ಅಭಿವೃದ್ಧಿ ಮಾಡುತ್ತಾ ಮುಂದಿನ ದಿನಗಳಲ್ಲಿ ಪಕ್ಷವನ್ನು ಮತ್ತಷ್ಟು ಗಟ್ಟಿಗೊಳಿಸೋಣಾ, ನನ್ನ ಮೇಲಿನ ನಿಮ್ಮ ಪ್ರೀತಿಗೆ ನಿಮ್ಮೆಲ್ಲರಿಗೂ ಮತ್ತೊಮ್ಮೆ ಆಭಾರಿಯಾಗಿದ್ದೇನೆ' ಎಂದು ಫೇಸ್ಬುಕ್ ಪೋಸ್ಟ್ ಹಾಕಿದ್ದಾರೆ.

ಸೋಮಶೇಖರ್ ರೆಡ್ಡಿ ಸ್ಟೇಟಸ್
ಬಳ್ಳಾರಿ ನಗರ ಕ್ಷೇತ್ರದ ಶಾಸಕ ಸೋಮಶೇಖರ್ ರೆಡ್ಡಿ ಸಹ ಸಚಿವರಾಗಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಅವರು ಫೇಸ್ ಬುಕ್ ಪೋಸ್ಟ್ ಹಾಕಿದ್ದು, "ಪಕ್ಷ ನನಗೆ ತಾಯಿ ಸಮಾನ, ನನ್ನ ಪಕ್ಷ, ಸಂಘಟನೆ ಹಾಗೂ ವರಿಷ್ಠರು ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ದ. ಜನ ಸೇವೆಯೇ ನನ್ನ ಕಾಯಕ, ನನ್ನ ಸಂಪೂರ್ಣ ಜೀವನವನ್ನು ನನ್ನ ಬಳ್ಳಾರಿ ನಗರದ ಕ್ಷೇತ್ರದ ಜನತೆಯ ಸೇವೆಗೆ ಮುಡಿಪಿಟ್ಟಿದ್ದೇನೆ. ನಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ನಿರಾಶರಾಗದೆ ಮುಂಬರುವ ಜಿಲ್ಲಾ ಹಾಗೂ ಬಳ್ಳಾರಿ ನಗರ ಪಕ್ಷ ಸಂಘಟಿಸಲು ವಿನಂತಿಸುತ್ತೇನೆ" ಎಂದು ಹೇಳಿದ್ದಾರೆ.
|
ಎಸ್. ಸುರೇಶ್ ಕುಮಾರ್
ಬಿ. ಎಸ್. ಯಡಿಯೂರಪ್ಪ ಸಂಪುಟದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾಗಿದ್ದ ಎಸ್. ಸುರೇಶ್ ಕುಮಾರ್ ಬೊಮ್ಮಾಯಿ ಸಂಪುಟವನ್ನು ಸೇರುತ್ತಿಲ್ಲ. ಅವರು ಟ್ವೀಟ್ ಮೂಲಕ ಎಲ್ಲರಿಗೂ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.












Click it and Unblock the Notifications