ಯಡಿಯೂರಪ್ಪ ಸಂಪುಟ ಸೇರಿದ ಸಿದ್ದರಾಮಯ್ಯ ಆಪ್ತ ಎಂಬಿಟಿ ನಾಗರಾಜ್ ವ್ಯಕ್ತಿಚಿತ್ರಣ!
ಬೆಂಗಳೂರು, ಜ. 13: ಅತ್ಯಂತ ಶ್ರೀಮಂತ ರಾಜಕಾರಣಿ, ಕಲರ್ಫುಲ್ ವ್ಯಕ್ತಿತ್ವದ, ಹೊಸಕೋಟೆ ಮಾಜಿ ಶಾಸಕ ಎಂ.ಟಿ.ಬಿ. ನಾಗರಾಜ್ ಅವರು ಎರಡನೇ ಬಾರಿ ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ಹೊಸಕೋಟೆಯಿಂದ ಸ್ಪರ್ಧಿಸಿ ಕಾಂಗ್ರೆಸ್ ಪಕ್ಷದ ಶಾಸಕರಾಗಿ ಆಯ್ಕೆಯಾಗಿದ್ದರು. ಜೊತೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಆಪ್ತರೂ ಹೌದು. ಆದರೆ ಬದಲಾದ ಪರಿಸ್ಥಿತಿಯಲ್ಲಿ ಶಾಸಕಸ್ಥಾನಕ್ಕೆ ರಾಜೀನಾಮೆ ಕೊಟ್ಟು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು.
ಬಿಜೆಪಿ ಸೇರಿದ್ದರೂ, ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಶರತ್ ಬಚ್ಚೇಗೌಡ ಅವರ ಎದುರು ಸೋಲನ್ನು ಅನುಭವಿಸಿದ್ದರು. ಆದರೂ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿ, ಇದೀಗ ಮಂತ್ರಿ ಪದವಿ ಪಡೆದುಕೊಂಡಿದ್ದಾರೆ. ವಿಶೇಷ ಎಂದರೆ ಮೈತ್ರಿ ಸರ್ಕಾರದಲ್ಲಿ ಸಚಿವಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಿಜೆಪಿ ಸೇರಿದ್ದರು. ಆಗ ಸಿದ್ದರಾಮಯ್ಯ ಅವರ ಆಪ್ತರಾಗಿದ್ದರಿಂದ ಯಾವುದೇ ಕಾರಣಕ್ಕೂ ಎಂಟಿಬಿ ನಾಗರಾಜ್ ಅವರು ಬಿಜೆಪಿಗೆ ಹೋಗುವುದಿಲ್ಲ ಎನ್ನಲಾಗಿತ್ತು. ಎಲ್ಲರ ನಿರೀಕ್ಷೆ ತಲೆಕೆಳಗಾಗಿಸಿ ಬಿಜೆಪಿ ಸೇರಿ ಅಂತಂತ್ರರಾಗಿದ್ದ ಎಂಟಿಬಿ ನಾಗರಾಜ್ ಅವರು ಇದೀಗ ಎರಡನೇ ಬಾರಿ ಸಚಿವರಾಗಿದ್ದಾರೆ.
ನಾಲ್ಕನೇ ಬಾರಿ ಸಚಿವರಾದ ಅರವಿಂದ್ ಲಿಂಬಾವಳಿ ವ್ಯಕ್ತಿಚಿತ್ರಣ!
ಕುರುಬ ಸಮುದಾಯಕ್ಕೆ ಸೇರಿರುವ ಎಂಬಿಟಿ ನಾಗರಾಜ್ ಅವರು ಐಟಿಐ ಶಿಕ್ಷಣ ಪಡೆದಿದ್ದಾರೆ. ಅವರ ರಾಜಕೀಯ ಜೀವನದ ವಿವರ ಹೀಗಿದೆ.
ಎಂಟಿಬಿ ನಾಗರಾಜ್ ರಾಜಕೀಯ ಜೀವನ
* 2013 - ಹೊಸಕೋಟೆ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕರಾಗಿ ಆಯ್ಕೆ
* 2018 - 2019ರವರೆಗೆ ವಸತಿ ಸಚಿವರಾಗಿ ಕಾರ್ಯ ನಿರ್ವಹಣೆ
* 2019 - ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ
* 2019 - ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆ
* 2019 - ಉಪಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ, ಬಿಜೆಪಿ ಬಂಡಾಯ ಅಭ್ಯರ್ಥಿ ಶರತ್ ಬಚ್ಚೇಗೌಡ ವಿರುದ್ಧ ಸೋಲು
* 2020 - ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆ
* 2021 - ನೂತನ ಸಚಿವರಾಗಿ ಪ್ರಮಾಣವಚನ ಸ್ಪೀಕಾರ