ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಅಘಾತ ನೀಡಿದ ಯಡಿಯೂರಪ್ಪ
Recommended Video
ಬೆಂಗಳೂರು, ಡಿಸೆಂಬರ್ 18: ಉಪ ಚುನಾವಣೆ ಫಲಿತಾಂಶದ ಬಳಿಕ ರಾಜ್ಯದಲ್ಲಿ ಸಂಪುಟ ವಿಸ್ತರಣೆಯ ಕಸರತ್ತು ತೀವ್ರವಾಗಿದೆ. ಸಮ್ಮಿಶ್ರ ಸರ್ಕಾರ ಪತನವಾಗಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದಲೂ ಕೆಲವು ಸಚಿವ ಸ್ಥಾನಗಳು ಖಾಲಿ ಉಳಿದಿದ್ದವು. ಅವುಗಳ ಮೇಲೆ ಸಚಿವ ಸ್ಥಾನದ ಆಕಾಂಕ್ಷಿಗಳು ಕಣ್ಣಿಟ್ಟಿದ್ದರು. ಉಪ ಚುನಾವಣೆ ಬಳಿಕ ಗೆದ್ದ ಶಾಸಕರ ಜತೆಗೆ ಸಂಪುಟದೊಳಗೆ ಸೇರಿಕೊಳ್ಳಲು ತಮಗೂ ಅವಕಾಶ ಸಿಗಲಿದೆ ಎಂಬ ನಿರೀಕ್ಷೆಯಲ್ಲಿದ್ದರು. ಆದರೆ ಅವರ ಆಸೆಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಣ್ಣೀರೆರಚಿದ್ದಾರೆ.
ಹಾಲಿ ಸಚಿವರನ್ನು ಹೊರತುಪಡಿಸಿ, ಉಪ ಚುನಾವಣೆಯಲ್ಲಿ ಗೆದ್ದು 'ಅನರ್ಹ'ರಿಂದ 'ಅರ್ಹ'ರಾದ ಶಾಸಕರಿಗೆ ಮಾತ್ರ ಸಚಿವ ಸ್ಥಾನ ನೀಡಲಾಗುವುದು. ಉಳಿದಂತೆ ಸಂಪುಟದಲ್ಲಿ ಯಾವ ಬದಲಾವಣೆಯೂ ಆಗುವುದಿಲ್ಲ ಎಂದು ಯಡಿಯೂರಪ್ಪ ತಿಳಿಸಿದ್ದಾರೆ. ಇದು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು, ಸಚಿವ ಸ್ಥಾನ ಸಿಗದೆ ಸಂಪುಟ ವಿಸ್ತರಣೆಯ ಮುಹೂರ್ತಕ್ಕಾಗಿ ಕಾಯುತ್ತಿದ್ದ ಆಕಾಂಕ್ಷಿಗಳಿಗೆ ಮತ್ತೆ ನಿರಾಶೆ ಮೂಡಿಸಿದೆ.
ಸಂಪುಟ ವಿಸ್ತರಣೆ; ಒಂದೇ ಖಾತೆಗೆ ಇಬ್ಬರು ನಾಯಕರ ಪೈಪೋಟಿ!
ಡಿಸೆಂಬರ್ ಅಂತ್ಯದಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು. ಉಪ ಚುನಾವಣೆಯಲ್ಲಿ ಗೆದ್ದವರನ್ನು ಮಾತ್ರ ಸಚಿವರನ್ನಾಗಿ ಮಾಡಲಾಗುವುದು ಎಂದು ಯಡಿಯೂರಪ್ಪ ಮಂಗಳವಾರ ತಿಳಿಸಿದ್ದಾರೆ.
ಭರವಸೆ ಈಡೇರಿಸುವ ಒತ್ತಡದಲ್ಲಿ ಬಿಎಸ್ವೈ
ಚುನಾವಣೆಗೂ ಮುನ್ನ ಯಡಿಯೂರಪ್ಪ ಎಲ್ಲ 17 ಮಂದಿ ಅನರ್ಹ ಶಾಸಕರಿಗೂ ಸಚಿವ ಸ್ಥಾನ ನೀಡುವ ಭರವಸೆ ನೀಡಿದ್ದರು. ಇಬ್ಬರು ಶಾಸಕರ ಕ್ಷೇತ್ರಗಳಿಗೆ ಚುನಾವಣೆ ನಡೆದಿಲ್ಲ. ಉಪ ಚುನಾವಣೆಯಲ್ಲಿ 14 'ಅನರ್ಹ' ಶಾಸಕರು ಸ್ಪರ್ಧಿಸಿದ್ದರು. ಅದರಲ್ಲಿ ಸೋಲು ಕಂಡಿರುವ ಎಂ.ಟಿ.ಬಿ. ನಾಗರಾಜ್ ಮತ್ತು ಎಚ್. ವಿಶ್ವನಾಥ್ ಅವರಿಗೂ ಸಚಿವ ಸ್ಥಾನ ನೀಡಲೇಬೇಕು ಎಂದು ಉಳಿದ ಶಾಸಕರು ಒತ್ತಡ ಹೇರಿದ್ದಾರೆ. ಹೀಗಾಗಿ ಈ ಹಿಂದೆ ನೀಡಿದ್ದ ಭರವಸೆಗೆ ಬದ್ಧರಾಗಿರುವ ಇಕ್ಕಟ್ಟಿನಲ್ಲಿ ಬಿಎಸ್ ಯಡಿಯೂರಪ್ಪ ಸಿಲುಕಿದ್ದಾರೆ.
ಗೆದ್ದಿರುವ ಎಲ್ಲರಿಗೂ ಸಚಿವ ಸ್ಥಾನ
'ಸಚಿವ ಸಂಪುಟ ವಿಸ್ತರಣೆ ವಿಚಾರದಲ್ಲಿ ಯಾವುದೇ ಒತ್ತಡವಿಲ್ಲ. ಚುನಾವಣೆಯಲ್ಲಿ ಗೆದ್ದಿರುವ ಎಲ್ಲರೂ ಸಚಿವರಾಗುತ್ತಾರೆ. ಜತೆಗೆ ಒಂದಿಬ್ಬರಿಗೆ ಸಚಿವ ಸ್ಥಾನ ನೀಡಬೇಕು ಎಂಬ ಚಿಂತನೆ ಸಹ ಇದೆ. ಈ ಕುರಿತು ಹೈಕಮಾಂಡ್ ಜತೆ ಚರ್ಚಿಸಲಾಗುತ್ತದೆ. ಬಳಿಕವೇ ಸಚಿವರ ಅಂತಿಮ ಪಟ್ಟಿ ಸಿದ್ಧಪಡಿಸಲಾಗುವುದು. ಮಾಧ್ಯಮಗಳಲ್ಲಿ ಬರುವ ಊಹಾಪೋಹದ ವರದಿಗಳಿಗೆ ಪ್ರತಿಕ್ರಿಯೆ ನೀಡುವುದಿಲ್ಲ' ಎಂದು ಯಡಿಯೂರಪ್ಪ ಹೇಳಿದ್ದಾರೆ.
ನಾನು ಜನರ ಇಚ್ಚೆಗೆ ಮುಜುಗರ ಮಾಡಲ್ಲ: ಶ್ರೀರಾಮುಲು
ವರಿಷ್ಠರ ಜತೆ ಚರ್ಚೆ
'ಡಿ. 21 ಅಥವಾ 22ರಂದು ದೆಹಲಿಗೆ ಹೋಗಲಿದ್ದೇನೆ. ಅಲ್ಲಿ ಪಕ್ಷದ ವರಿಷ್ಠರ ಜತೆ ಸಚಿವ ಸಂಪುಟ ವಿಸ್ತರಣೆಯ ಕುರಿತು ಮಾತುಕತೆ ನಡೆಸಲಿದ್ದೇನೆ. ಡಿಸೆಂಬರ್ ಅಂತ್ಯದೊಳಗೆ ಸಂಪುಟ ವಿಸ್ತರಣೆಯಾಗಿ ನೂತನ ಸಚಿವರ ಪ್ರಮಾಣವಚನ ಸಮಾರಂಭ ನಡೆಯಲಿದೆ ಎಂದು ತಿಳಿಸಿದ್ದಾರೆ.
ಸಚಿವ ಸ್ಥಾನಕ್ಕಾಗಿ ಭೇಟಿ
ಬಿಜೆಪಿಯಲ್ಲಿ ಸಚಿವ ಸ್ಥಾನದ ಆಕಾಂಕ್ಷಿಗಳ ದಂಡು ದೊಡ್ಡದಿದೆ. ಯಡಿಯೂರಪ್ಪ ಮತ್ತು ಇತರೆ ನಾಯಕರನ್ನು ಭೇಟಿ ಮಾಡಿ ಸಚಿವ ಸ್ಥಾನಕ್ಕೆ ಲಾಬಿ ನಡೆಸುವ ಪ್ರಯತ್ನ ಮುಂದುವರಿಸಿದ್ದಾರೆ. ಸೋಮಶೇಖರ್ ರೆಡ್ಡಿ, ರಮೇಶ್ ಜಾರಕಿಹೊಳಿ, ಉಮೇಶ್ ಕತ್ತಿ ಮತ್ತು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಮಂಗಳವಾರ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಸಂಪುಟ ವಿಸ್ತರಣೆ ಕುರಿತು ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಡಿಸಿಎಂ ಹುದ್ದೆಯ ಮೇಲೆ ಶ್ರೀರಾಮುಲು ಮತ್ತು ರಮೇಶ್ ಜಾರಕಿಹೊಳಿ ಕಣ್ಣಿರಿಸಿದ್ದಾರೆ. ಹೀಗಾಗಿ ಮೂವರು ಡಿಸಿಎಂಗಳಲ್ಲಿ ಇಬ್ಬರು ಸ್ಥಾನ ತ್ಯಾಗ ಮಾಡಬೇಕಾಗುವ ಸಾಧ್ಯತೆ ಇದೆ.
ಯಾವುದೂ ನಿರೀಕ್ಷೆಯಂತೆ ನಡೆಯುವುದಿಲ್ಲ ಎಂದು ಹಿಂದೆಯೂ ಸಾಬೀತಾಗಿದೆ: ಸಿಟಿ ರವಿ
ಬಿಎಸ್ವೈ ನಿರ್ಧಾರವೇ ಅಂತಿಮ
ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸಂಪೂರ್ಣ ಅಧಿಕಾರ ನೀಡಲಾಗಿದೆ. ಈ ಸಂಬಂಧ ಅವರು ತೆಗೆದುಕೊಳ್ಳುವ ನಿರ್ಧಾರವೇ ಅಂತಿಮವಾಗಿರಲಿದೆ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.