ಡಿಸೆಂಬರ್ 22ರಂದು ಸಂಪುಟ ವಿಸ್ತರಣೆಯೋ?, ಪುನರ್ ರಚನೆಯೋ?
Recommended Video

ಬೆಂಗಳೂರು, ಡಿಸೆಂಬರ್ 18 : 'ದತ್ತಾತ್ರೇಯ ಜಯಂತಿ ದಿನವಾದ ಇದೇ 22ರಂದು ಸಂಪುಟ ವಿಸ್ತರಣೆ ಖಚಿತ. ಸಿಎಲ್ಪಿ ಸಭೆಯಲ್ಲಿ ಈ ಬಗ್ಗೆ ಚರ್ಚೆ ಇಲ್ಲ' ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಡಿಸೆಂಬರ್ 22ರಂದು ಸಂಪುಟ ವಿಸ್ತರಣೆ ಖಚಿತ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ. ಆದರೆ, ಕೆಲವು ಶಾಸಕರು ಸಂಪುಟ ಪುನಾರಚನೆಗೂ ಬೇಡಿಕೆ ಇಟ್ಟಿದ್ದಾರೆ. ಇದು ಪಕ್ಷದ ನಾಯಕರಿಗೆ ಬಿಸಿತುಪ್ಪವಾಗಿದೆ.
ಸಚಿವ ಸಂಪುಟ ವಿಸ್ತರಣೆಯೋ? ಅಥವ ಪುನರ್ ರಚನೆಯೋ? ಎಂಬ ಬಗ್ಗೆ ಕಾಂಗ್ರೆಸ್ ವಲಯದಲ್ಲಿ ಚರ್ಚೆ ನಡೆಯುತ್ತಿದೆ. ಸಂಪುಟ ಸೇರಲು ಹೆಚ್ಚು ಶಾಸಕರು ಆಕಾಂಕ್ಷಿಗಳಾಗಿರುವ ಕಾರಣ ಪುನರ್ ರಚನೆ ಮಾಡಬೇಕು ಎಂದು ಶಾಸಕರು ಬೇಡಿಕೆ ಇಟ್ಟಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, 'ಸಂಪುಟ ಪುನರ್ ರಚನೆಯೋ?, ವಿಸ್ತರಣೆಯೋ? ಎಂದು ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ' ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಹೇಳುವುದೇನು?
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 'ಡಿಸೆಂಬರ್ 22ರಂದು ಸಂಪುಟ ವಿಸ್ತರಣೆ ಖಚಿತ. ಸಚಿವರು ಯಾರಾಗಬೇಕು ಎಂದು ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ. ಆ ತೀರ್ಮಾನಕ್ಕೆ ನಾವೆಲ್ಲ ಬದ್ಧ. ಎಲ್ಲಾ ಆರು ಸ್ಥಾನಗಳನ್ನು ತುಂಬುತ್ತೇವೆ' ಎಂದು ಹೇಳಿದರು.

ಸಂಪುಟ ವಿಸ್ತರಣೆ ಖಚಿತ
'ದತ್ತಾತ್ರೇಯ ಜಯಂತಿ ದಿನವಾದ ಡಿಸೆಂಬರ್ 22ರಂದು ಸಂಪುಟ ವಿಸ್ತರಣೆ ಖಚಿತ. ಸಿಎಲ್ಪಿ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಯುವುದಿಲ್ಲ. ನಿಗಮ ಮಂಡಳಿಗಳಿಗೂ ನೇಮಕ ಮಾಡುತ್ತೇವೆ. 8 ರಿಂದ 10 ಸಂಸದೀಯ ಕಾರ್ಯದರ್ಶಿಗಳನ್ನು ನೇಮಕ ಮಾಡುತ್ತೇವೆ' ಎಂದು ಸಿದ್ದರಾಮಯ್ಯ ಹೇಳಿದರು.

8 ಸಚಿವ ಸ್ಥಾನಗಳು ಖಾಲಿ
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಸಂಪುಟದಲ್ಲಿ 8 ಸಚಿವ ಸ್ಥಾನಗಳು ಖಾಲಿ ಇವೆ. ಇವುಗಳಲ್ಲಿ 6 ಸ್ಥಾನಗಳು ಕಾಂಗ್ರೆಸ್ ಪಕ್ಷಕ್ಕೆ ಸಿಗಲಿವೆ. 6 ಸ್ಥಾನಗಳಿಗೆ 12ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದಾರೆ. ಆದ್ದರಿಂದ, ಕೆಲವು ಶಾಸಕರು ಸಂಪುಟ ಪುನರ್ ರಚನೆಗೂ ಬೇಡಿಕೆ ಮುಂದಿಟ್ಟಿದ್ದಾರೆ.

ಡಿಸೆಂಬರ್ 21ರಂದು ಸಭೆ
ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಲು ಡಿಸೆಂಬರ್ 21ರಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಜೊತೆ ಸಭೆ ನಡೆಯಲಿದೆ. ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್, ಡಾ.ಜಿ.ಪರಮೇಶ್ವರ ಮುಂತಾದವರು ದೆಹಲಿಯಲ್ಲಿ ನಡೆಯಲಿರುವ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.












Click it and Unblock the Notifications