ಸಂಪುಟ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಸೆ.24ರಂದು ಸಭೆ
ಬೆಂಗಳೂರು, ಸೆಪ್ಟೆಂಬರ್, 18 : ಬಿಬಿಎಂಪಿಗೆ ಮೇಯರ್, ಉಪಮೇಯರ್ ಆಯ್ಕೆಯಾಗುತ್ತಿದ್ದಂತೆ ಸಚಿವ ಸಂಪುಟ ವಿಸ್ತರಣೆ ಕಸರತ್ತು ಆರಂಭಗೊಂಡಿದೆ. ಸೆ.24ರಂದು ಸಂಪುಟ ವಿಸ್ತರಣೆ ಮತ್ತು ಪುನಾರಚನೆ ಬಗ್ಗೆ ದೆಹಲಿಯಲ್ಲಿ ಮಹತ್ವದ ಸಭೆ ನಡೆಯಲಿದೆ.
ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಲಿದ್ದು, ಸೆ.24ರಂದು ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ಸಭೆ ನಡೆಯಲಿದೆ. ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. [ಸಂಪುಟ ವಿಸ್ತರಣೆ ಕಾಲ ಸನ್ನಿಹಿತ : ಗುಟ್ಟು ಬಿಟ್ಟ ಸಿಎಂ]

ಪರಮೇಶ್ವರ ಸಂಪುಟ ಸೇರ್ತಾರಾ? : ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ಸಂಪುಟ ಸೇರಲಿದ್ದಾರೆಯೇ? ಎಂಬುದು ಕುತೂಹಲ ಮೂಡಿಸಿದೆ. ಸಚಿವ ಸಂಪುಟ ಪುನಾರಚನೆ ಮಾತುಗಳು ಕೇಳಿಬರುತ್ತಿದ್ದು, ಕೆಲವು ಸಚಿವರ ಖಾತೆ ಬದಾಲಾವಣೆಯಾಗಬಹುದು.[ಹಾಸನ ಜಿಲ್ಲೆಗೊಂದು ಸಚಿವ ಸ್ಥಾನ ನೀಡಿ]
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಸದ್ಯ 30 ಸಚಿವರಿದ್ದಾರೆ. ಇನ್ನೂ ನಾಲ್ಕು ಜನ ಸಚಿವರನ್ನು ಸೇರಿಸಿಕೊಳ್ಳಲು ಅವಕಾಶವಿದೆ. ಅಸಮರ್ಥರಾಗಿರುವ ಕೆಲವು ಸಚಿವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡಬೇಕು ಎಂಬುದು ಶಾಸಕರ ಒತ್ತಾಯವಾಗಿದೆ. [ಅಸಮರ್ಥ ಸಚಿವರನ್ನು ಕೈಬಿಡಿ, ಹೊಸಬರಿಗೆ ಅವಕಾಶ ಕೊಡಿ]
ಬೆಂಗಳೂರಿಗೆ ಸಚಿವರಾರು? : ಸಿದ್ದರಾಮಯ್ಯ ಅವರು ಬಿಬಿಎಂಪಿ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಬೆಂಗಳೂರಿನ ಅಭಿವೃದ್ಧಿಗೆ ಪ್ರತ್ಯೇಕ ಸಚಿವರನ್ನು ನೇಮಕ ಮಾಡುವುದಾಗಿ ಹೇಳಿದ್ದಾರೆ. ಬೆಂಗಳೂರಿನ ಅಭಿವೃದ್ಧಿ ಸಚಿವರು ಯಾರಾಗಲಿದ್ದಾರೆ? ಎಂಬುದು ಕುತೂಹಲ ಮೂಡಿಸಿದೆ.
ಕೆಪಿಸಿಸಿ ಅಧ್ಯಕ್ಷಗಾದಿಗೆ ಪೈಪೋಟಿ : ಒಂದು ವೇಳೆ ಪರಮೇಶ್ವರ ಅವರು ಸಂಪುಟ ಸೇರಿದರೆ ಕೆಪಿಸಿಸಿ ಅಧ್ಯಕ್ಷರು ಯಾರು? ಎಂಬ ಪ್ರಶ್ನೆ ಎದುರಾಗಲಿದೆ. ಸಚಿವರಾದ ಕೃಷ್ಣ ಭೈರೇಗೌಡ ಅಥವ ದಿನೇಶ್ ಗುಂಡೂರಾವ್ ಅವರು ಕೆಪಿಸಿಸಿ ಅಧ್ಯಕ್ಷರಾಗಬಹುದು ಎಂಬುದು ಸದ್ಯದ ಮಾಹಿತಿ.












Click it and Unblock the Notifications