ಸಂಪುಟ ವಿಸ್ತರಣೆ : ಕೆ.ಜೆ.ಜಾರ್ಜ್ ಮತ್ತೆ ಸಿದ್ದರಾಮಯ್ಯ ಸಂಪುಟಕ್ಕೆ?
ಬೆಂಗಳೂರು, ಆಗಸ್ಟ್ 31 : ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ಸಂಪುಟ ವಿಸ್ತರಣೆಯತ್ತ ಗಮನ ಹರಿಸಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆದರೆ ಸೆಪ್ಟೆಂಬರ್ನಲ್ಲಿ ಕೆ.ಜೆ.ಜಾರ್ಜ್, ಎಂ.ಕೃಷ್ಣಪ್ಪ ಮತ್ತು ಸಿ.ಪಿ.ಯೋಗೇಶ್ವರ ಅವರು ಸಂಪುಟಕ್ಕೆ ಸೇರಲಿದ್ದಾರೆ.
ನಿಗಮ-ಮಂಡಳಿಗಳ ನೇಮಕಾತಿ ವಿಚಾರದ ಕುರಿತು ಚರ್ಚೆ ನಡೆಸಲು ಸೆಪ್ಟೆಂಬರ್ 3ರ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರು ದೆಹಲಿಗೆ ತೆರಳಿದ್ದಾರೆ.[ಸಿದ್ದರಾಮಯ್ಯ ಸಚಿವ ಸಂಪುಟಕ್ಕೆ 13 ಹೊಸಮುಖಗಳ ಸೇರ್ಪಡೆ]
ಹೈಕಮಾಂಡ್ ನಾಯಕರನ್ನು ಭೇಟಿಯಾದಾಗ ಸಿದ್ದರಾಮಯ್ಯ ಅವರು, ಸಂಪುಟ ವಿಸ್ತರಣೆ ಬಗ್ಗೆಯೂ ಮಾತುಕತೆ ನಡೆಸಲಿದ್ದಾರೆ ಎಂಬುದು ಸದ್ಯದ ಮಾಹಿತಿ. ಸಂಪುಟದಲ್ಲಿ ಎರಡು ಸ್ಥಾನಗಳು ಖಾಲಿ ಇವೆ. ಕೆ.ಜೆ.ಜಾರ್ಜ್ ಮತ್ತು ವಿಜಯನಗರ ಶಾಸಕ ಎಂ.ಕೃಷ್ಣಪ್ಪ ಅವರು ಸಂಪುಟ ಸೇರಲಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ.[ಹೊಸ ಸಚಿವರಿಗೆ ಜವಾಬ್ದಾರಿ: ಯಾರಿಗೆ ಯಾವ ಖಾತೆ?]
ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಲಿದ್ದು, ಅವರ ರಾಜೀನಾಮೆಯಿಂದ ತೆರವಾಗುವ ಸ್ಥಾನಕ್ಕೆ ಸಿ.ಪಿ.ಯೋಗೇಶ್ವರ್ ಅವರನ್ನು ಸೇರಿಸಿಕೊಳ್ಳಲಾಗುತ್ತದೆ ಎಂದು ತಿಳಿದುಬಂದಿದೆ. ಆದರೆ, ಇದಕ್ಕೆ ಮೊದಲು ಹೈಕಮಾಂಡ್ ನಾಯಕರ ಒಪ್ಪಿಗೆ ಬೇಕಾಗಿದೆ....[ಕೆಪಿಸಿಸಿ ನೂತನ ಸಾರಥಿಯಾಗಿ ಡಿಕೆ ಶಿವಕುಮಾರ್?]
ಸಂಪುಟ ಪುನಾರಚನೆ ನಡೆದಿತ್ತು
ಜೂನ್ 19ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಚಿವ ಸಂಪುಟ ಪುನಾರಚನೆ ಮಾಡಿದ್ದರು. 14 ಸಚಿವರನ್ನು ಸಂಪುಟದಿಂದ ಕೈ ಬಿಟ್ಟು, 13 ಹೊಸ ಶಾಸಕರನ್ನು ಸಂಪುಟಕ್ಕೆ ಸೇರಿಸಿಕೊಂಡಿದ್ದರು. ಇದರಿಂದಾಗಿ ಒಂದು ಸಚಿವ ಸ್ಥಾನ ಖಾಲಿ ಉಳಿದಿತ್ತು.
ಕೆ.ಜೆ.ಜಾರ್ಜ್ ರಾಜೀನಾಮೆ
ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ಕೆ.ಜೆ.ಜಾರ್ಜ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದರು. ಇದರಿಂದಾಗಿ ಸಂಪುಟದಲ್ಲಿ ಎರಡು ಸ್ಥಾನಗಳು ಖಾಲಿ ಆಗಿದ್ದು, ಅವುಗಳನ್ನು ಭರ್ತಿ ಮಾಡಲು ಸಿದ್ದರಾಮಯ್ಯ ನಿರ್ಧರಿಸಿದ್ದಾರೆ.
ಸಂಪುಟ ಸೇರಲಿದ್ದಾರೆ ಸಿ.ಪಿ.ಯೋಗೇಶ್ವರ
ಶೀಘ್ರದಲ್ಲೇ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷರಾಗಿ ನೇಮಿಸಲಾಗುತ್ತದೆ ಎಂಬ ಸುದ್ದಿ ಹಬ್ಬಿದೆ. ಅವರಿಂದ ತೆರವಾಗುವ ಸ್ಥಾನಕ್ಕೆ ಸಿ.ಪಿ.ಯೋಗೇಶ್ವರ ಅವರನ್ನು ಸೇರಿಸಿಕೊಳ್ಳಲಾಗುತ್ತದೆ ಎಂಬ ಸುದ್ದಿ ಹಬ್ಬಿದೆ.
ಎಂ.ಕೃಷ್ಣಪ್ಪ ಸಂಪುಟಕ್ಕೆ?
ಕಳೆದ ಬಾರಿ ಸಂಪುಟ ಪುನಾರಚನೆ ಸಂದರ್ಭದಲ್ಲಿ ವಿಜಯನಗರ ಶಾಸಕ ಎಂ.ಕೃಷ್ಣಪ್ಪ ಅವರ ಹೆಸರು ಕೇಳಿಬಂದಿತ್ತು. ಆದರೆ, ಕೊನೆ ಕ್ಷಣದಲ್ಲಿ ಅವರಿಗೆ ಸಚಿವ ಸ್ಥಾನ ಕೈತಪ್ಪಿತ್ತು. ಆದ್ದರಿಂದ, ಈ ಬಾರಿ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಗುತ್ತದೆ ಎನ್ನುವ ಸುದ್ದಿ ಹಬ್ಬಿದೆ.
ಕೆ.ಜೆ.ಜಾರ್ಜ್ ಸಂಪುಟಕ್ಕೆ?
ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ತನಿಖೆ ಪೂರ್ಣಗೊಳ್ಳುತ್ತಾ ಬಂದಿದ್ದು, ಮಾಜಿ ಸಚಿವ ಕೆ.ಜೆ.ಜಾರ್ಜ್ ಅವರಿಗೆ ಕ್ಲೀನ್ ಚಿಟ್ ಸಿಗುವ ಸಾಧ್ಯತೆ ಇದೆ. ಆದ್ದರಿಂದ, ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಸಿದ್ದರಾಮಯ್ಯ ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.