ಬಗೆಹರಿಯದ ಖಾತೆ ಹಂಚಿಕೆ ಬಿಕ್ಕಟ್ಟು, ಪಟ್ಟಿ ಹೈಕಮಾಂಡ್ಗೆ ರವಾನೆ
ಬೆಂಗಳೂರು, ಡಿಸೆಂಬರ್ 26 : ಸಂಪುಟ ವಿಸ್ತರಣೆ ಮಾಡಿ ನಿಟ್ಟುಸಿರು ಬಿಟ್ಟ ಕಾಂಗ್ರೆಸ್ ನಾಯಕರು ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲು ವಿಫಲರಾಗಿದ್ದಾರೆ. ಸಚಿವರಿಗೆ ಖಾತೆ ಹಂಚಿಕೆ ಮಾಡುವ ಹೊಣೆಯನ್ನು ಹೈಕಮಾಂಡ್ ನಾಯಕರಿಗೆ ನೀಡಲಾಗಿದೆ.
ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಬುಧವಾರ ಪಕ್ಷದ ನಾಯಕರ ಜೊತೆ ಸರಣಿ ಸಭೆ ನಡೆಸಿದರು. ಆದರೆ, ಸಭೆಯಲ್ಲಿ ಖಾತೆ ಹಂಚಿಕೆ ಬಗ್ಗೆ ಒಮ್ಮತ ಮೂಡದ ಕಾರಣ ಖಾತೆಯ ಪಟ್ಟಿಯನ್ನು ಹಿಡಿದು ದೆಹಲಿಗೆ ತೆರಳಿದರು.
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಒಪ್ಪಿಗೆ ನೀಡಿದ ಬಳಿಕ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗುತ್ತದೆ. ಎರಡು ಖಾತೆಗಳನ್ನು ಹೊಂದಿರುವ ಕೆಲವು ಸಚಿವರು ಪ್ರಮುಖ ಖಾತೆಗಳನ್ನು ಬಿಟ್ಟುಕೊಡಲು ಹಿಂದೇಟು ಹಾಕುತ್ತಿದ್ದು, ವಿಳಂಬಕ್ಕೆ ಕಾರಣವಾಗಿದೆ.
ಖಾತೆ ಹಂಚಿಕೆ ಕುರಿತು ಕೆ.ಸಿ.ವೇಣುಗೋಪಾಲ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಪಾಲ್ಗೊಂಡಿದ್ದರು. ಆದರೆ, ಸಚಿವ ಡಿ.ಕೆ.ಶಿವಕುಮಾರ್ ಸಭೆಯಲ್ಲಿ ಪಾಲ್ಗೊಳ್ಳದಿರುವುದು ಕುತೂಹಲಕ್ಕೆ ಕಾರಣವಾಗಿದೆ....
ಕೆ.ಸಿ.ವೇಣುಗೋಪಾಲ್ ಹೇಳಿದ್ದೇನು?
ಸಭೆಯ ಬಳಿಕ ಮಾತನಾಡಿದ ಕೆ.ಸಿ.ವೇಣುಗೋಪಾಲ್ ಅವರು, 'ಖಾತೆಗಳ ಹಂಚಿಕೆ ಫೈನಲ್ ಮಾಡಿದ್ದೇವೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅಂತಿಮ ತೀರ್ಮಾನಕ್ಕೆ ಬಿಡಲಾಗಿದೆ. ಆದಷ್ಟು ಬೇಗನೆ ಖಾತೆಗಳ ಹಂಚಿಕೆ ಆಗಲಿದೆ' ಎಂದು ಹೇಳಿದರು.
ಪ್ರಭಾವಿ ಖಾತೆಗಳಿವೆ
ಡಾ.ಜಿ.ಪರಮೇಶ್ವರ, ಡಿ.ಕೆ.ಶಿವಕುಮಾರ್, ಯು.ಟಿ.ಖಾದರ್ ಅವರ ಬಳಿ ಎರಡೆರಡು ಪ್ರಭಾವಿ ಖಾತೆಗಳಿವೆ. ಅವುಗಳನ್ನು ಬಿಟ್ಟುಕೊಡಲು ಅವರು ಹಿಂದೇಟು ಹಾಕುತ್ತಿದ್ದಾರೆ. ಆದ್ದರಿಂದ, ಖಾತೆಗಳ ಹಂಚಿಕೆ ಕಗ್ಗಂಟಾಗಿದೆ. ಯಾರಿಗೆ ಯಾವ ಖಾತೆ? ಎಂಬುದನ್ನು ಹೈಕಮಾಂಡ್ ನಿರ್ಧರಿಸಲಿದೆ.
ಖಾತೆಗಳ ಹಂಚಿಕೆ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವ ಸಚಿವರಿಗೆ ಯಾವ ಖಾತೆ ನೀಡಬೇಕು ಎಂದು ಪಟ್ಟಿಯನ್ನು ಫೈನಲ್ ಮಾಡಿದ್ದಾರೆ. ಈ ಪಟ್ಟಿ ಹಿಡಿದುಕೊಂಡು ಕೆ.ಸಿ.ವೇಣುಗೋಪಾಲ್ ಅವರು ದೆಹಲಿಗೆ ತೆರಳಿದ್ದಾರೆ.
ನಮ್ಮ ಜೊತೆಯೇ ಇದ್ದಾರೆ
'ರಾಮಲಿಂಗಾ ರೆಡ್ಡಿ ಪಕ್ಷದ ಹಿರಿಯ ನಾಯಕರು, ಪಕ್ಷ ಅವರ ಜೊತೆ ಇದೆ. ರಮೇಶ್ ಜಾರಕಿಹೊಳಿ ಅವರು ಸಹ ಎಲ್ಲೂ ಹೋಗುವುದಿಲ್ಲ. ನಮ್ಮರೆಲ್ಲಾ ನಮ್ಮ ಜೊತೆಯೇ ಇದ್ದಾರೆ' ಎಂದು ಕೆ.ಸಿ.ವೇಣುಗೋಪಾಲ್ ಹೇಳಿದರು.