ಡಿಸೆಂಬರ್ 22ಕ್ಕೆ ಸಂಪುಟ ವಿಸ್ತರಣೆ: ಸಮನ್ವಯ ಸಮಿತಿ ನಿರ್ಣಯ
ಬೆಂಗಳೂರು, ಡಿಸೆಂಬರ್ 05: ಸಂಪುಟ ವಿಸ್ತರಣೆಯನ್ನು ಡಿಸೆಂಬರ್ 22 ಕ್ಕೆ ಮಾಡಲಾಗುವುದು ಎಂದು ಇಂದು ನಡೆದ ಸಮನ್ವಯ ಸಮಿತಿಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.
ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದ್ದು, ಸಭೆಯ ಬಳಿಕ ಸಿದ್ದರಾಮಯ್ಯ ಹಾಗೂ ಜೆಡಿಎಸ್ ವಕ್ತಾರ ಡ್ಯಾನಿಶ್ ಅಲಿ ಅವರು ಸುದ್ದಿಗಾರರಿಗೆ ವಿಷಯ ತಿಳಿಸಿದ್ದಾರೆ.
ಡಿಸೆಂಬರ್ 22 ಕ್ಕೆ ಸಂಪುಟ ವಿಸ್ತರಣೆ ಮಾಡಲು ರಾಹುಲ್ ಗಾಂಧಿ ಒಪ್ಪಿದ್ದಾರೆ ಎಂದ ಸಿದ್ದರಾಮಯ್ಯ, ನಿಗಮ ಮಂಡಳಿಗೆ ಶಾಸಕರನ್ನು ಮಾತ್ರವೇ ನೇಮಿಸಲಾಗುವುದು ಯಾವುದೇ ಇತರ ಜನಪ್ರತಿನಿಧಿಗಳನ್ನು ನೇಮಿಸುವುದು ಬೇಡ ಎಂಬ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಡಿಸೆಂಬರ್ 9ಕ್ಕೆ ನಿಗದಿಯಾಗಿದ್ದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಡಿಸೆಂಬರ್ 10ಕ್ಕೆ ಮುಂದೂಡಲಾಗಿದ್ದು, ಬೆಳಗಾವಿಯಲ್ಲಿ ಅದೇ ದಿನ ಅಧಿವೇಶನ ಪ್ರಾರಂಭವಾಗುವುದಕ್ಕೆ ಮುನ್ನಾ ಸಭೆ ನಡೆಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಪಕ್ಷದಲ್ಲಿ ಯಾರಿಗೂ ಅಸಮಾಧಾನ ಇಲ್ಲ, ಜಾರಕಿಹೊಳಿ ಸೇರಿದಂತೆ ಯಾರೂ ಪಕ್ಷ ಬಿಟ್ಟು ಹೋಗುತ್ತಿಲ್ಲ, ಸಂಪುಟ ಸಭೆಗೆ ಗೈರಾದರು ಎಂದ ಮಾತ್ರಕ್ಕೆ ಅಸಮಾಧಾನ ಇದೆಯೆಂದು ಅರ್ಥವಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

ಸಿಎಂ ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಪರಮೇಶ್ವರ್, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್, ಸಿದ್ದರಾಮಯ್ಯ, ಡ್ಯಾನಿಶ್ ಅಲಿ ಅವರುಗಳು ಸಭೆಯಲ್ಲಿ ಭಾಗವಹಿಸಿದ್ದರು.











Click it and Unblock the Notifications