ನಾಲ್ವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುತ್ತೇನೆ : ಸಿದ್ದರಾಮಯ್ಯ
ಬೆಂಗಳೂರು, ಅಕ್ಟೋಬರ್ 28 : 'ಸಚಿವ ಸಂಪುಟ ಪುನಾರಚನೆ ಇಲ್ಲ. ಸಂಪುಟ ವಿಸ್ತರಣೆ ಮಾಡಿ ನಾಲ್ವರು ಸಚಿವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುತ್ತೇನೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಸ್ಪಷ್ಟಪಡಿಸಿದ್ದಾರೆ.
ನವದೆಹಲಿಯ ಕರ್ನಾಟಕ ಭವನದಲ್ಲಿ ಬುಧವಾರ ಮಾಧ್ಯಮಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ ಅವರು, 'ಸಚಿವ ಸಂಪುಟ ಪುನಾರಚನೆ ಮಾಡುವುದಿಲ್ಲ. ಸಂಪುಟದಲ್ಲಿ ಖಾಲಿ ಇರುವ 4 ಸ್ಥಾನಗಳನ್ನು ಶೀಘ್ರದಲ್ಲಿಯೇ ಭರ್ತಿ ಮಾಡಲಾಗುತ್ತದೆ' ಎಂದು ಹೇಳಿದರು. [ಸಂಪುಟಕ್ಕೆ ಸೇರುವವರು ಯಾರು?]

'ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ಸಂಪುಟ ಸೇರಬೇಕು ಎಂಬುದು ನನ್ನ ಆಸೆಯಾಗಿದೆ. ಹೈಕಮಾಂಡ್ ನಾಯಕರು ಈ ಕುರಿತು ನಿರ್ಧಾರವನ್ನು ತೆಗೆದುಕೊಳ್ಳಲಿದ್ದಾರೆ ಎಂದು ಹೇಳಿದ ಸಿದ್ದರಾಮಯ್ಯ ಅವರು, ಕಾಗೋಡು ತಿಮ್ಮಪ್ಪ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಕುರಿತು ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. [ಪರಮೇಶ್ವರ ಅವರು ಸಂಪುಟ ಸೇರಲಿದ್ದಾರೆಯೇ?]
ಸದ್ಯ, ಸಿದ್ದರಾಮಯ್ಯ ಅವರ ಸಂಪುಟದಲ್ಲಿ 4 ಸಚಿವ ಸ್ಥಾನಗಳು ಖಾಲಿ ಇದೆ. ಒಬ್ಬರು ಸಚಿವರಿಂದ ರಾಜೀನಾಮೆ ಪಡೆದು ಐವರನ್ನು ಸೇರಿಸಿಕೊಳ್ಳಲಾಗುತ್ತದೆ ಎಂಬ ಸುದ್ದಿ ಹಬ್ಬಿತ್ತು. ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿರುವ ಸಿದ್ದರಾಮಯ್ಯ ಅವರು ನಾಲ್ವರನ್ನು ಸೇರಿಸಿಕೊಳ್ಳುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.
'ನಾನು ಸಚಿವನಾಗಿಯೇ ಇರುವೆ' : ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರನ್ನು ಸಂಪುಟಕ್ಕೆ ಸೇರಿಸಿಕೊಂಡು ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರನ್ನು ಸ್ಪೀಕರ್ ಮಾಡಲಾಗುತ್ತದೆ ಎಂಬ ಸುದ್ದಿ ಹಬ್ಬಿದೆ. ದೆಹಲಿಯಲ್ಲಿ ಈ ಕುರಿತು ಪ್ರತಿಕ್ರಿಯೆ ನೀಡಿರುವ ಟಿ.ವಿ.ಜಯಚಂದ್ರ ಅವರು 'ನನ್ನನ್ನು ಸ್ಪೀಕರ್ ಮಾಡುವ ಚರ್ಚೆ ನಡೆದಿಲ್ಲ. ಸಚಿವನಾಗಿ ಜನರ ಜೊತೆಯೇ ನಾನು ಕೆಲಸ ಮಾಡುತ್ತೇನೆ' ಎಂದು ಹೇಳಿದ್ದಾರೆ.
ಯಾರ ಬಳಿ ಯಾವ ಖಾತೆಗಳಿವೆ : ಟಿ.ಬಿ.ಜಯಚಂದ್ರ ಅವರ ಬಳಿ ಕಾನೂನು ಮತ್ತು ಸಂಸದೀಯ ವ್ಯವಹಾರ, ಪಶುಸಂಗೋಪನೆ ಮತ್ತು ಮುಜರಾಯಿ ಖಾತೆಗಳಿವೆ. ಆರ್.ವಿ.ದೇಶಪಾಂಡೆ ಅವರ ಬಳಿ ಪ್ರವಾಸೋದ್ಯಮ ಮತ್ತು ಬೃಹತ್ ಕೈಗಾರಿಕೆ ಖಾತೆಗಳಿವೆ. ಸಚಿವ ಸಂಪುಟ ವಿಸ್ತರಣೆಯಾದ ನಂತರ ಈ ಖಾತೆಗಳು ಹಂಚಿಕೆಯಾಗುವ ಸಾಧ್ಯತೆ ಇದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಹಣಕಾಸು, ಗಣಿ ಮತ್ತು ಭೂ ವಿಜ್ಞಾನ, ಅಬಕಾರಿ, ಉನ್ನತ ಶಿಕ್ಷಣ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ, ಬೆಂಗಳೂರು ಅಭಿವೃದ್ಧಿ ಸೇರಿ ಒಟ್ಟು 8 ಖಾತೆಗಳಿವೆ. ಇವುಗಳ ಪೈಕಿ ಅಬಕಾರಿ ಮತ್ತು ಉನ್ನತ ಶಿಕ್ಷಣ ಖಾತೆಗಳು ಹಂಚಿಕೆಯಾಗುವ ಸಾಧ್ಯತೆ ಇದೆ.












Click it and Unblock the Notifications