ಇಂದು ಸಂಜೆ ಚುನಾವಣಾ ಪ್ರಚಾರಕ್ಕೆ ತೆರೆ, ಬೆಂಗಳೂರಿನಲ್ಲಿ ನಿಷೇಧಾಜ್ಞೆ
ಬೆಂಗಳೂರು, ಮೇ 10: ಕರ್ನಾಟಕ ವಿಧಾನಸಭೆ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ಇಂದು ಸಂಜೆ 5 ಗಂಟೆಗೆ ಬಹಿರಂಗ ಚುನಾವಣಾ ಪ್ರಚಾರ ಅಂತ್ಯವಾಗಲಿದೆ. ನಂತರ ಮನೆ ಮನೆ ಪ್ರಚಾರವಷ್ಟೇ ನಡೆಸಬಹುದಾಗಿದೆ.
ಇಂದು ಬಹಿರಂಗ ಪ್ರಚಾರಕ್ಕೆ ಕೊನೆಯ ದಿನವಾದ ಹಿನ್ನಲೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಅಂತಿಮ ಹಂತದ ಬಹಿರಂಗ ಪ್ರಚಾರ ನಡೆಸುತ್ತಿವೆ. ಬಿಜೆಪಿ ಸುಮಾರು 100 ನಾಯಕರಿಂದ ಇಂದು ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಇನ್ನು ಕಾಂಗ್ರೆಸ್ ಮತ್ತು ಜೆಡಿಎಸ್ ಕೂಡ ಅಂತಿಮ ಕೊನೆಯ ಹಂತದಲ್ಲಿ ಪ್ರಚಾರದಲ್ಲಿ ತೊಡಗಿಸಿಕೊಂಡಿದೆ.
ಕರ್ನಾಟಕ ವಿಧಾನಸಭೆ ಚುನಾವಣೆಯ ಮುಖ್ಯ ದಿನಾಂಕಗಳು
ಇಂದು ಸಂಜೆ 5 ಗಂಟೆ ಬಳಿಕ ರಾಜಕೀಯ ನಾಯಕರು ತಮ್ಮ ಸ್ವಂತ ಕ್ಷೇತ್ರ ಬಿಟ್ಟು ಹೊರಗಿನ ಪ್ರದೇಶಗಳಲ್ಲಿ ಮತ ಕೇಳುವಂತಿಲ್ಲ. ಅಭ್ಯರ್ಥಿಗಳು ಮನೆ ಮನೆಗೆ ತೆರಳಿ ಮಾತ್ರ ಮತ ಕೇಳಬಹುದಾಗಿದೆ. ಮತದಾರರಲ್ಲದವರು ವಿಧಾನಸಭಾ ಕ್ಷೇತ್ರ ಬಿಟ್ಟು ಹೊರಗೆ ಹೋಗಬೇಕು.
ಬೆಂಗಳೂರಿನಲ್ಲಿ ನಿಷೇಧಾಜ್ಞೆ
ಚುನಾವಣಾ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದು ಸಂಜೆ ಅಂದರೆ ಗುರುವಾರ ಸಂಜೆ 6 ಗಂಟೆಯಿಂದ ಭಾನುವಾರ (ಮೇ 13) ಸಂಜೆ 6 ಗಂಟೆವರೆಗೆ ನಿಷೇಧಾಜ್ಞೆ ಘೋಷಿಸಲಾಗಿದೆ.
ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸ್ ಆಯುಕ್ತ ಟಿ. ಸುನಿಲ್ ಕುಮಾರ್ ಆದೇಶ ಹೊರಡಿಸಿದ್ದಾರೆ.
ಯಾವುದಕ್ಕೆಲ್ಲಾ ನಿರ್ಬಂಧ?
- ಇಂದು ಸಂಜೆ 5 ಗಂಟೆಯಿಂದ ಹತ್ತು ಜನಕ್ಕಿಂತ ಹೆಚ್ಚು ರಾಜಕೀಯ ಪಕ್ಷಗಳ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ ಮತ ಕೇಳುವಂತಿಲ್ಲ.
- ಯಾವುದೇ ಸಂಘಟನೆಗಳು, ರಾಜಕೀಯ ಪಕ್ಷಗಳು, ಧಾರ್ಮಿಕ ಸಂಸ್ಥೆಗಳು ಮೆರವಣಿಗೆ ಹಾಗೂ ಪ್ರತಿಭಟನೆ ಹಮ್ಮಿಕೊಳ್ಳುವಂತಿಲ್ಲ.
- ಕತ್ತಿ, ಖಡ್ಗ, ಚೂರಿ, ಬಂದೂಕು, ಸ್ಫೋಟಕ ವಸ್ತುಗಳನ್ನು ಸಾಗಾಟ ಮಾಡುವಂತಿಲ್ಲ.
- ಶವ ಸಂಸ್ಕಾರ, ಮದುವೆ, ಧಾರ್ಮಿಕ ಆಚರಣೆ, ದೇವಸ್ಥಾನ, ಮಸೀದಿ, ಚರ್ಚ್ಗಳಿಗೆ ಹೋಗುವವರಿಗೆ ಹಾಗೂ ಅನುಮತಿ ಪಡೆದ ಸಮಾರಂಭಗಳಿಗೆ ನಿಷೇಧಾಜ್ಞೆ ಅನ್ವಯಿಸುವುದಿಲ್ಲ.