ಜೆಡಿಎಸ್, ಬಿಜೆಪಿಯ ಶಾಸಕರು ಕಾಂಗ್ರೆಸ್ಗೆ ಬರ್ತಿನಿ ಅಂತಿದ್ದಾರೆ! ಎಲ್ಲರನ್ನು ಸೇರಿಸಿಕೊಳ್ಳುವುದು ಕಷ್ಟ: ಡಿಕೆ ಶಿವಕುಮಾರ್
ರಾಜ್ಯದಲ್ಲಿ ಬದಲಾವಣೆ ಗಾಳಿ ಬೀಸುತ್ತಿರುವುದಕ್ಕೆ ಈ ಪ್ರಮುಖ ನಾಯಕರುಗಳು ಕಾಂಗ್ರೆಸ್ ಪಕ್ಷ ಸೇರುತ್ತಿರುವುದೇ ಸಾಕ್ಷಿ ಎಂದು ಡಿ ಕೆ ಶಿವಕುಮಾರ್ ಹೇಳಿದರು.
ಬೆಂಗಳೂರು,ಫೆಬ್ರವರಿ20: ಬಿಜೆಪಿ ಮತ್ತು ಜೆಡಿಎಸ್ನ ಹಲವು ಹಾಲಿ ಶಾಸಕರು ಕಾಂಗ್ರೆಸ್ ಸೇರಲು ಉತ್ಸುಕರಾಗಿದ್ದಾರೆ. ಆದರೆ ಅವರಿಗೆ ಅವಕಾಶ ಕಲ್ಪಿಸುವುದು ಕಷ್ಟಕರವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ.
ಈ ಕುರಿತು ಭಾನುವಾರ ಕೆಪಿಸಿಸಿ ಕಚೇರಿಯಲ್ಲಿ ಅನ್ಯ ಪಕ್ಷದ ನಾಯಕರ ಪಕ್ಷ ಸೇರ್ಪಡೆ ಮಾಡಿಕೊಂಡ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಇನ್ನು ಹಾಲಿ ಶಾಸಕರು ನಮ್ಮ ಸಂಪರ್ಕದಲ್ಲಿದ್ದು, ಕೆಲವರಿಗೆ ನಮ್ಮ ಪಕ್ಷದಲ್ಲಿ ಸ್ಥಾನಮಾನ ನೀಡಲು ಕಷ್ಟವಾಗುತ್ತದೆ. ಮತ್ತೆ ಕೆಲವರನ್ನು ಸೇರ್ಪಡೆ ಮಾಡಿಕೊಳ್ಳಲಾಗುವುದು. ಈಗ ಆ ನಾಯಕರ ಹೆಸರು ಪ್ರಸ್ತಾಪ ಮಾಡುವುದಿಲ್ಲ. ನಾನು ಗಾಳಿಯಲ್ಲಿ ಗುಂಡು ಹೊಡೆದು ಅವರ ರಾಜಕೀಯ ಜೀವನಕ್ಕೆ ಅಡ್ಡಿಪಡಿಸುವುದಿಲ್ಲ ಎಂದು ಹೇಳಿದರು.
ರಾಜ್ಯದಲ್ಲಿ ಬದಲಾವಣೆ ಗಾಳಿ ಬೀಸುತ್ತಿರುವುದಕ್ಕೆ ಈ ಪ್ರಮುಖ ನಾಯಕರುಗಳು ಕಾಂಗ್ರೆಸ್ ಪಕ್ಷ ಸೇರುತ್ತಿರುವುದೇ ಸಾಕ್ಷಿ. ಬಿಜೆಪಿ ರಾಷ್ಟ್ರೀಯ ನಾಯಕರು ಕ್ಷೇತ್ರವಾರು ಪ್ರಚಾರ ಮಾಡುತ್ತಿದ್ದಾರೆ. ಅದು ತಪ್ಪಲ್ಲ. ಆದರೆ ಅವರು ಸೋಲುವ ಭಯದಲ್ಲಿ ಈ ರೀತಿ ಮಾಡುತ್ತಿರುವುದು ಸ್ಪಷ್ಟವಾಗಿದೆ. ಬಿಜೆಪಿ ಐದು ವರ್ಷಗಳ ಹಿಂದೆ ನೀಡಿದ್ದ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಈಡೇರಿಸಲು ಈ ಸರ್ಕಾರದಿಂದ ಸಾಧ್ಯವಾಗಲಿಲ್ಲ.

ಈ ಸರ್ಕಾರದ ಕೊನೆಯ ಬಜೆಟ್ ನಲ್ಲಿ ಭರವಸೆ ಈಡೇರಿಸುವ ಪ್ರಯತ್ನ ಮಾಡುವ ನಿರೀಕ್ಷೆ ಇತ್ತು. ಅಧಿಕಾರ ಇದ್ದಾಗ ಇವರಿಂದ ಏನು ಮಾಡಲು ಆಗಲಿಲ್ಲ. ಈ ಸರ್ಕಾರ ಕಳೆದ ವರ್ಷ ಮಂಡಿಸಿದ ಬಜೆಟ್ ಅನ್ನು ಜಾರಿಗೊಳಿಸಲು ಸಾಧ್ಯವಾಗಿಲ್ಲ. ಈ ಬಾರಿ ಬಜೆಟ್ ನಲ್ಲಿ ಮತ್ತೆ ಘೋಷಣೆಗಳನ್ನು ನೀಡಿ ಸರ್ಕಾರ ರಾಜ್ಯದ ಜನರ ಕಿವಿಗೆ ಹೂವಿಡುವ ಪ್ರಯತ್ನ ಮಾಡಡಿದೆ. ಇದನ್ನು ಖಂಡಿಸಿ ನಾನು, ನಮ್ಮ ಪಕ್ಷದ ನಾಯಕರು ಕಿವಿಗೆ ಹೂವ ಇಟ್ಟುಕೊಂಡು ಬಜೆಟ್ ಮಂಡನೆ ವೇಳೆ ಸಾಂಕೇತಿಕ ಪ್ರತಿಭಟನೆ ಮಾಡಿದೆವು.
ನಾನು ರಾಜ್ಯ ಕಾಂಗ್ರೆಸ್ ಅಧ್ಯಕ್ಷನಾಗಿ ಪ್ರತಿಜ್ಞೆ ಸ್ವೀಕಾರ ಮಾಡಿದಾಗ ಒಂದು ಮಾತು ಹೇಳಿದ್ದೆ. ಜತೆಗೂಡುವುದು ಆರಂಭ, ಜತೆಗೂಡಿ ಚರ್ಚಿಸುವುದು ಪ್ರಗತಿ, ಜತೆಗೂಡಿ ಕೆಲಸ ಮಾಡುವುದು ಯಶಸ್ಸು. ಆ ರೀತಿ ಶಂಕರ್ ಅವರು ಕಳೆದ ಬಾರಿ ಚುನಾವಣೆ ನಂತರ ಚಿಕ್ಕಮಗಳೂರು ಜಿಲ್ಲೆಯ ವೈಎಸ್.ವಿ ದತ್ತಾ, ಹರೀಶ್, ಗೋಪಿಕೃಷ್ಣ, ಶಿವಶಂಕರಪ್ಪ ಸೇರಿದಂತೆ ಬೇರೆ ಪಕ್ಷದ ನಾಯಕರು ಹಾಗೂ ಬಂಡಾಯ ನಾಯಕರು ಸೇರಿ ಒಬ್ಬೊಬ್ಬರಾಗಿ ಪಕ್ಷ ಸೇರುತ್ತಿದ್ದಾರೆ ಎಂದು ಹೇಳಿದರು.

ಸರ್ಕಾರದ ಈ ವೈಫಲ್ಯಗಳಿಂದ ಹಳ್ಳಿ ಹಾಗೂ ಬೂತ್ ಮಟ್ಟದಲ್ಲಿನ ಜನರು ಬದಲಾವಣೆ ಬಯಸಿದ್ದಾರೆ. ಈಗ ಪಕ್ಷ ಸೇರುತ್ತಿರುವ ನಾಯಕರು ಕೂಡ ರಾಷ್ಟ್ರೀಯ ನಾಯಕರಲ್ಲ, ಆಯಾ ಕ್ಷೇತ್ರಗಳಲ್ಲಿ ತಳಮಟ್ಟದಲ್ಲಿ ಶ್ರಮಿಸುವ ನಾಯಕರು. ಇವರಿಂದಲೇ ನಾವು ದೊಡ್ಡ ನಾಯಕರಾಗಿ ಬೆಳೆಯಲು ಸಾಧ್ಯ.
ಚಿಕ್ಕಮಗಳೂರು ಭಾಗದ ಸಾಕಷ್ಟು ನಾಯಕರು ನಮ್ಮ ಪಕ್ಷವನ್ನ ಸೇರುತ್ತಿದ್ದಾರೆ. ಚಿಕ್ಕಮಗಳೂರಿನಲ್ಲಿ ದತ್ತಪೀಠ ವಿಚಾರವನ್ನು ಇಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ. ಆದರೆ ಈಗ ಜನರಿಗೆ ಬದುಕು ಕಟ್ಟಿಕೊಳ್ಳಬೇಕಿದೆ. ಬಿಜೆಪಿ ಕೇವಲ ಭಾವನೆ ಮೇಲೆ ರಾಜಕೀಯ ಮಾಡುತ್ತಿದ್ದು, ನಾವು ಬದುಕಿನ ವಿಚಾರವಾಗಿ ರಾಜಕೀಯ ಮಾಡುತ್ತೇವೆ. ಜನ ಕೂಡ ಅವರ ಹೊಟ್ಟೆಪಾಡು ಏನು ಎಂದು ಪ್ರಶ್ನಿಸುತ್ತಿದ್ದಾರೆ ಎಂದು ಹೇಳಿದರು.












Click it and Unblock the Notifications