ವಿಜಯಪುರದಲ್ಲಿ ₹250 ಕೋಟಿ ಬಂಡವಾಳ ಹೂಡಲಿದೆ ಕೆನಡಾ ಕಂಪನಿ: ಎಂಬಿ ಪಾಟೀಲ್
ಬೆಂಗಳೂರು, ಆಗಸ್ಟ್ 30: ವಿಜಯಪುರ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಕೈಗಾರಿಕೆ ಅಭಿವೃದ್ಧಿಗೆ ಕೈಗಾರಿಕೆ ಇಲಾಖೆ ಹಲವು ಕ್ರಮ ಕೈಗೊಂಡಿದೆ. ಈ ಪೈಕಿ ವಿಜಯಪುರ ಜಿಲ್ಲೆಯಲ್ಲಿ ಕೃಷಿ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಕೆನಡಾದ ಕೃಷಿ ಉತ್ಪನ್ನ ತಯಾರಿಕಾ ಪ್ರಮುಖ ಕಂಪನಿಯಾಗಿರುವ ವಿಟೆರಾ ₹250 ಕೋಟಿ ಮೊತ್ತದ ಬಂಡವಾಳ ಹೂಡಲಿದೆ' ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ.
ಶುಕ್ರವಾರ ಬೆಂಗಳೂರಿನಲ್ಲಿ ವಿಟೆರಾ ಕಂಪನಿಯ ಪ್ರತಿನಿಧಿಗಳ ಜತೆ ಸಚಿವರು ಇಲ್ಲಿನ ಖನಿಜ ಭವನದಲ್ಲಿ ನಡೆಸಿದ ಸಭೆಯಲ್ಲಿ ಈ ಬಂಡವಾಳ ಹೂಡಿಕೆ ನಿರ್ಧಾರ ಕೈಗೊಳ್ಳಲಾಯಿತು ಎಂದು ಸಚಿವರು ಮಾಹಿತಿ ನೀಡಿದರು.

ವಿಜಯಪುರ ಜಿಲ್ಲೆಯ ಕೃಷಿ ಸಮುದಾಯದ ಬಳಕೆಗೆ ಅತ್ಯಾಧುನಿಕ ಶೈತ್ಯಾಗಾರಗಳನ್ನು ನಿರ್ಮಿಸಿ ರೈತರು ಸುಗ್ಗಿಯ ನಂತರ ಎದುರಿಸುವ ನಷ್ಟ ತಗ್ಗಿಸಲು ಮತ್ತು ಕೃಷಿ ಉತ್ಪನ್ನಗಳ ಉತ್ಪಾದನೆ, ಪೂರೈಕೆ ಹಾಗೂ ಮಾರಾಟ ಪ್ರಕ್ರಿಯೆಯಲ್ಲಿ ದಕ್ಷತೆ ತರಲು ವಿಟೆರಾ ನೆರವಾಗಲಿದೆ.
ವಿಟೆರಾ ಕಂಪನಿಯು ಸುಧಾರಿತ ಉತ್ಪಾದನಾ ತಂತ್ರಜ್ಞಾನ ಬಳಸಲಿದೆ. ರಾಜ್ಯದಲ್ಲಿ ಕೆನಡಾದ ಆಧುನಿಕ ಕೃಷಿ ತಂತ್ರಜ್ಞಾನ ಬಳಕೆ ಹಾಗೂ ಈ ಬಂಡವಾಳ ಹೂಡಿಕೆಯಿಂದ ಕೃಷಿ ಕ್ಷೇತ್ರದ ಉತ್ಪಾದನೆ ಹೆಚ್ಚಲಿದ್ದು, ಅದರಿಂದ ರಾಜ್ಯದ ಒಟ್ಟಾರೆ ಆರ್ಥಿಕತೆಗೂ ಉತ್ತೇಜನ ದೊರೆಯಲಿದೆʼ ಎಂದೂ ಸಚಿವರು ಹೇಳಿದ್ದಾರೆ.
ಸಭೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಡಾ.ಮಹೇಶ ಹಾಗೂ ಇತರ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಮಾನ ನಿಲ್ದಾಣ ಯೋಜನೆಗಳು: ಅಡಚಣೆ ನಿವಾರಣೆಗೆ ಸೂಚನೆ
ರಾಜ್ಯದಲ್ಲಿ ನಡೆಯುತ್ತಿರುವ ವಿಜಯಪುರ, ಹಾಸನ ಸೇರಿ ವಿವಿಧ ವಿಮಾನ ನಿಲ್ದಾಣಗಳು ಮತ್ತು ಏರ್-ಸ್ಟ್ರಿಪ್ ಅಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನೆಯನ್ನು ಇತ್ತೀಚೆಗೆ ಸಚಿವ ಎಂಬಿ ಪಾಟೀಲ್ ಅವರು ನಡೆಸಿದ್ದರು.
ಈ ವೇಳೆ ಹಲವು ಯೋಜನೆಗಳಿಗೆ ತಾಂತ್ರಿಕ ಅಡಚಣೆಗಳು ಎದುರಾಗಿವೆ. ಇನ್ನು ಕೆಲ ಯೋಜನೆಗಳಿಗೆ ಅಗತ್ಯ ಪ್ರಮಾಣದ ಭೂಮಿ ಸಿಕ್ಕಿಲ್ಲ. ಇವೆಲ್ಲವನ್ನೂ ತ್ವರಿತವಾಗಿ ಬಗೆಹರಿಸುವಂತೆ ಅಧಿಕಾರಿಗಳಿಗೆ ಸಚಿವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
219 ಕೋಟಿ ರೂ. ವೆಚ್ಚದಲ್ಲಿ, 322 ಎಕರೆ ಜಾಗದಲ್ಲಿ ನಿರ್ಮಿಸಲು ಉದ್ದೇಶಿಸಿರುವ ರಾಯಚೂರು ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣದ ಕಾಮಗಾರಿ ಆರಂಭಕ್ಕೆ ತಾಂತ್ರಿಕ ಅಡಚಣೆಗಳಿದ್ದು ತಕ್ಷಣ ಅವುಗಳನ್ನು ಬಗೆಹರಿಸಬೇಕು. ಅಗತ್ಯ ಬಿದ್ದರೆ ದೆಹಲಿಗೂ ಹೋಗಿ ಬರಬೇಕು ಎನ್ನುವ ಕಟ್ಟಾಜ್ಣೆ ಹೊರಡಿಸಿದರು.
ರಾಚಯೂರು ಏರ್ಪೋರ್ಟ್ ಡಿಪಿಆರ್ ಸಿದ್ಧ
ರಾಯಚೂರು ವಿಮಾನ ನಿಲ್ದಾಣ ಯೋಜನೆಗೆ ಈಗಾಗಲೇ ಡಿಪಿಆರ್ ಸಿದ್ಧವಾಗಿದೆ. ಯೋಜನೆಗೆ ಬೇಕಾಗಿರುವ ಪರಿಸರ ಇಲಾಖೆಯ ಅನುಮತಿಯನ್ನು ಕೂಡ ಬೇಗನೆ ಪಡೆಯಬೇಕು. ಹಾಸನ ವಿಮಾನ ನಿಲ್ದಾಣದ ಕಾಮಗಾರಿ ಚುರುಕಾಗಿ ಮುಗಿಸಬೇಕು. ಭೂಸ್ವಾಧೀನದ ಸಮಸ್ಯೆ ಇದ್ದು ತಕ್ಷಣ ಬಗೆಹರಿಸುವಂತೆ ಅವರು ತಿಳಿಸಿದರು.
ಉಡಾನ್ ಯೋಜನೆ ಸ್ಥಗಿತವಾಗಿರುವ ಕಾರಣ ಬೀದರ್ ವಿಮಾನ ನಿಲ್ದಾಣದಿಂದ ವಿಮಾನಗಳ ಹಾರಾಟ ನಿಲ್ಲಿಸಲಾಗಿದೆ. ಈ ಸಂಬಂಧ ವಿಮಾನಯಾನ ಸಂಸ್ಥೆಗಳ ಜತೆ ಮಾತುಕತೆ ನಡೆಸಿ, ಪರ್ಯಾಯ ಕ್ರಮಗಳ ಬಗ್ಗೆ ತೀರ್ಮಾನಿಸಬೇಕು. ಪುನಃ ಉಡಾನ್ ಯೋಜನೆ ಚಾಲನೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದರು.












Click it and Unblock the Notifications