Government employee; NPS ರದ್ದು, ಗುಡ್ ನ್ಯೂಸ್ ಕೊಟ್ಟ ಸಿಎಂ
ಬೆಂಗಳೂರು, ಅಕ್ಟೋಬರ್ 11: ಕರ್ನಾಟಕದ ಸರ್ಕಾರಿ ನೌಕರರು ಹೊಸ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ ಹಳೆಯ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸಬೇಕು ಎಂದು ಸರ್ಕಾರದ ಮುಂದೆ ಬೇಡಿಕೆ ಇಟ್ಟಿದ್ದಾರೆ. ಈ ಹಿಂದಿನ ಬಿಜೆಪಿ ಸರ್ಕಾರ ಈ ಕುರಿತು ಭರವಸೆ ನೀಡಿತ್ತು. ಆದರೆ ಈಗ ರಾಜ್ಯದಲ್ಲಿ ಚುನಾವಣೆ ಮುಗಿದು ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ.
ರಾಜ್ಯ ಎನ್ಪಿಎಸ್ ನೌಕರರ ಸಂಘದ ಅಧ್ಯಕ್ಷ ಶಾಂತರಾಮ ತೇಜ ನೇತೃತ್ವದಲ್ಲಿ ನಿಯೋಗ ಮುಖ್ಯಮಂತ್ರಿಗಳನ್ನು ಭೇಟಿಯಾಗಿತ್ತು. ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಳೆ ಪಿಂಚಣಿ ಯೋಜನೆ ಜಾರಿ ಕುರಿತು ಭರವಸೆಯೊಂದನ್ನು ನಿಯೋಗಕ್ಕೆ ನೀಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಸರ್ಕಾರಿ ನೌಕರರ ಎನ್ಪಿಎಸ್ ರದ್ದು ಮಾಡಿ ಒಪಿಎಸ್ ಅನ್ನು ಜಾರಿಗೊಳಿಸುವ ಕುರಿತು ಶೀಘ್ರದಲ್ಲಿಯೇ ಹಣಕಾಸು ಇಲಾಖೆ ಅಧಿಕಾರಿಗಳ ಸಭೆ ನಡೆಸುವುದಾಗಿ ಹೇಳಿದ್ದಾರೆ. 2023ರ ಮಾರ್ಚ್ನಲ್ಲಿ ಕರ್ನಾಟಕದ ಸರ್ಕಾರಿ ನೌಕರರು ಮುಷ್ಕರ ನಡೆಸಿದಾಗಲೂ ಎನ್ಪಿಎಸ್ ರದ್ದುಗೊಳಿಸಬೇಕು ಎಂದು ಬೇಡಿಕೆ ಇಟ್ಟಿದ್ದರು.
ಚುನಾವಣಾ ಭರವಸೆ; 2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಪ್ರಣಾಳಿಕೆ ಬಿಡುಗಡೆ ಮಾಡಿದ್ದ ಕರ್ನಾಟಕ ಕಾಂಗ್ರೆಸ್ ಎನ್ಪಿಎಸ್ ರದ್ದುಗೊಳಿಸಿ ಹಳೆಯ ಪಿಂಚಣಿ ವ್ಯವಸ್ಥೆ ಜಾರಿ ಮಾಡುತ್ತೇವೆ ಎಂದು ಭರವಸೆ ನೀಡಿತ್ತು. ದೇಶದ ಹಲವು ರಾಜ್ಯಗಳಲ್ಲಿ ಎನ್ಪಿಎಸ್ ರದ್ದು ಮಾಡಲಾಗಿದೆ. ಕರ್ನಾಟಕದ ಸರ್ಕಾರಿ ನೌಕರರು ಈ ಕುರಿತು ಬೇಡಿಕೆ ಇಟ್ಟಿದ್ದಾರೆ.
ಶಾಂತರಾಮ ತೇಜ ನೇತೃತ್ವದಲ್ಲಿ ನಿಯೋಗ ವಿಧಾನಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಎನ್ಪಿಎಸ್ ರದ್ದು ಮಾಡಿ ಹಳೆಯ ಪಿಂಚಣಿ ಯೋಜನೆ ಜಾರಿಗೆ ಕೊಡುವುದಾಗಿ ಭರವಸೆ ನೀಡಿದ್ದೀರಿ. ಅದರಂತೆ ಎನ್ಪಿಎಸ್ ನೌಕರರ ಸಮಾವೇಶ ಮಾಡಿ ಘೋಷಣೆ ಮಾಡುವಂತೆ ಸಿದ್ದರಾಮಯ್ಯಗೆ ಬೇಡಿಕೆ ಸಲ್ಲಿಸಿದರು.
ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿ, ಎನ್ಪಿಎಸ್ ರದ್ದು ಮಾಡುವ ಪಕ್ಷದ ಪ್ರಣಾಳಿಕೆಯ ಭರವಸೆ ಜಾರಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ನಿಮ್ಮ ಸಮಾವೇಶಕ್ಕೆ ಬರುವುದಕ್ಕೆ ಮುನ್ನ ಹಣಕಾಸು ಇಲಾಖೆಯ ಅಧಿಕಾರಿ ಗಳ ಜತೆ ಸಭೆ ನಡೆಸುತ್ತೇನೆ ಎಂದು ಹೇಳಿದರು.
ಈಗಾಗಲೇ ರಾಜಸ್ಥಾನ, ಛತ್ತೀಸ್ಗಢ ರಾಜ್ಯದಲ್ಲಿ ಎನ್ಪಿಎಸ್ ರದ್ದುಗೊಳಿಸಲಾಗಿದೆ. ಕರ್ನಾಟಕದಲ್ಲಿಯೂ ಇದೇ ಮಾದರಿಯಲ್ಲಿ ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕು ಎಂದು ಶಾಂತಾರಾಂ ತೇಜ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಕರ್ನಾಟಕದಲ್ಲಿ 2006ರ ಏಪ್ರಿಲ್ 1ರಂದು ಹೊಸ ಪಿಂಚಣಿ ಯೋಜನೆ ಜಾರಿಯಾಗಿದೆ. ಸುಮಾರು 2.98 ಲಕ್ಷ ನೌಕರರು ಇದರ ವ್ಯಾಪ್ತಿಗೆ ಒಳಪಡುತ್ತಾರೆ. ಎನ್ಪಿಎಸ್ ರದ್ದು ಮಾಡುವುದರಿಂದ ಯೋಜನೆಯಡಿ ಲಭ್ಯವಿರುವ ಒಟ್ಟು 19000 ಕೋಟಿ ಹಣವನ್ನು ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಬಳಕೆ ಮಾಡಬಹುದು. ನೌಕರರ ಪಾಲಿನ 9,000 ಕೋಟಿ ರೂಪಾಯಿ ಜಿಪಿಎಫ್ ಗೆ ಪರಿವರ್ತನೆ ಮಾಡಿಕೊಳ್ಳುಬಹುದು.
ಎನ್ಪಿಎಸ್ ರದ್ದುಗೊಳಿಸುವುದು ಕರ್ನಾಟಕದ ಸರ್ಕಾರಿ ನೌಕರರ ಪ್ರಮುಖ ಬೇಡಿಕೆಯಾಗಿದೆ. ಈ ಹಿಂದೆ ಹಲವು ಬಾರಿ ಸರ್ಕಾರಿ ನೌಕರರ ನಿಯೋಗ ಭೇಟಿಯಾದಗೂ ಈ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇನೆ ಎಂದು ಸಿದ್ದರಾಮಯ್ಯ ಭರವಸೆ ಕೊಟ್ಟಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಕರ್ನಾಟಕ ಸರ್ಕಾರ ಸಚಿವಾಲಯಗಳ ನೌಕರರ ಸಂಘ ಸೇರಿದಂತೆ ವಿವಿಧ ಸಂಘಗಳು ಸುಧಾಕರ್ ರಾವ್ ಅಧ್ಯಕ್ಷತೆಯ ರಾಜ್ಯ 7ನೇ ವೇತನ ಆಯೋಗಕ್ಕೆ ಮನವಿಗಳನ್ನು ಸಲ್ಲಿಕೆ ಮಾಡುವಾಗ ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಬೇಕು ಎಂದು ಬೇಡಿಕೆ ಇಟ್ಟಿವೆ. ವೇತನ ಆಯೋಗ ನವೆಂಬರ್ನಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡುವ ನಿರೀಕ್ಷೆ ಇದೆ. ಆಯೋಗ ಯಾವ ಶಿಫಾರಸು ಮಾಡಲಿದೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.












Click it and Unblock the Notifications