ರಾಷ್ಟ್ರೀಯ ಶಿಕ್ಷಣ ನೀತಿ; ಕೊಟ್ಟ ಮಾತಿಗೆ ನಾವು ಬದ್ಧ ಎಂದ ಡಿಕೆಶಿ!
ಬೆಂಗಳೂರು, ಆಗಸ್ಟ್ 18: ಕರ್ನಾಟಕದ ಕಾಂಗ್ರೆಸ್ ಸರ್ಕಾರ ಮುಂದಿನ ಶೈಕ್ಷಣಿಕ ವರ್ಷದಿಂದ 'ರಾಷ್ಟ್ರೀಯ ಶಿಕ್ಷಣ ನೀತಿ' ರದ್ದುಪಡಿಸುತ್ತೇವೆ ಎಂದು ಹೇಳಿರುವುದು ಚರ್ಚೆಗೆ ಕಾರಣವಾಗಿದೆ. ರಾಜ್ಯ ಮತ್ತು ರಾಷ್ಟ್ರೀಯ ಬಿಜೆಪಿ ನಾಯಕರು ರಾಜ್ಯ ಸರ್ಕಾರದ ನಿಲುವಿಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಶಿಕ್ಷಣ ನೀತಿ ವಿಚಾರದಲ್ಲಿ ರಾಜಕೀಯ ಮಾಡಬೇಡಿ ಎಂದು ಸಲಹೆ ನೀಡಿದ್ದಾರೆ.
ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಶುಕ್ರವಾರ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ಟ್ವೀಟ್ ಮಾಡಿದ್ದಾರೆ. 'ಅಧಿಕಾರಕ್ಕೆ ಬಂದ ನಂತರ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದು ಮಾಡುತ್ತೇವೆ ಎಂದು ಮಾತು ಕೊಟ್ಟಿದ್ದೆವು ಆ ಮಾತಿಗೆ ನಾವು ಬದ್ಧರಾಗಿದ್ದೇವೆ' ಎಂದು ಹೇಳಿದ್ದಾರೆ.

'ಕರ್ನಾಟಕದಲ್ಲೇ ಮೊದಲು ಎನ್ಇಪಿ ಜಾರಿ ಮಾಡುವ ತರಾತುರಿ ಏನಿದೆ?. ಗುಜರಾತ್, ಉತ್ತರ ಪ್ರದೇಶದಲ್ಲಿ ಏಕೆ ಎನ್ಇಪಿ ಜಾರಿ ಮಾಡಿಲ್ಲ?. ಕರ್ನಾಟಕದಲ್ಲಿರುವ ಶಿಕ್ಷಣ ವ್ಯವಸ್ಥೆ ದೇಶಕ್ಕೇ ಮಾದರಿಯಾಗಿದೆ' ಎಂದು ಡಿ. ಕೆ. ಶಿವಕುಮಾರ್ ಟ್ವೀಟ್ನಲ್ಲಿ ಉಲ್ಲೇಖಿಸಿದ್ದಾರೆ.
'ಅದರಿಂದಾಗಿಯೇ ಇಂದು ಬೆಂಗಳೂರು ಐಟಿ ರಾಜಧಾನಿಯಾಗಿರುವುದು. ರಾಜ್ಯದಲ್ಲಿನ ಅದೆಷ್ಟೋ ಜನ ವಿದೇಶದಲ್ಲಿ ಒಳ್ಳೆ ಸ್ಥಾನದಲ್ಲಿದ್ದಾರೆ, ಅದಕ್ಕೂ ನಮ್ಮ ಶಿಕ್ಷಣ ವ್ಯವಸ್ಥೆಯೇ ಕಾರಣ' ಎಂದು ಡಿ. ಕೆ. ಶಿವಕುಮಾರ್ ಸಮರ್ಥನೆ ಕೊಟ್ಟಿದ್ದಾರೆ.
ಅಧಿಕಾರಕ್ಕೆ ಬಂದ ನಂತರ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದು ಮಾಡುತ್ತೇವೆ ಎಂದು ಮಾತು ಕೊಟ್ಟಿದ್ದೆವು ಆ ಮಾತಿಗೆ ನಾವು ಬದ್ಧರಾಗಿದ್ದೇವೆ. ಕರ್ನಾಟಕದಲ್ಲೇ ಮೊದಲು ಎನ್ಇಪಿ ಜಾರಿ ಮಾಡುವ ತರಾತುರಿ ಏನಿದೆ? ಗುಜರಾತ್, ಉತ್ತರ ಪ್ರದೇಶದಲ್ಲಿ ಏಕೆ ಎನ್ಇಪಿ ಜಾರಿ ಮಾಡಿಲ್ಲ? ಕರ್ನಾಟಕದಲ್ಲಿರುವ ಶಿಕ್ಷಣ ವ್ಯವಸ್ಥೆ ದೇಶಕ್ಕೇ ಮಾದರಿಯಾಗಿದೆ.…
— DK Shivakumar (@DKShivakumar) August 18, 2023
ಸಿದ್ದರಾಮಯ್ಯ ಹೇಳಿಕೆ; ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ಮಾತನಾಡಿದ್ದರು. "ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) ರದ್ದುಗೊಳಿಸಲಾಗುವುದು. ಕಾಂಗ್ರೆಸ್ ಸರ್ಕಾರವು ಭಾರತೀಯ ಸಂವಿಧಾನಕ್ಕೆ ಅನುಗುಣವಾಗಿ ಶಿಕ್ಷಣ ನೀತಿಯನ್ನು ಬದಲಾಯಿಸುತ್ತದೆ ಮತ್ತು ರಾಜ್ಯ ಶಿಕ್ಷಣ ನೀತಿ (ಎಸ್ಇಪಿ) ಪರಿಚಯಿಸಲಿದೆ" ಎಂದು ಹೇಳಿದ್ದರು.
ಸಿದ್ದರಾಮಯ್ಯ ಮೊದಲಿನಿಂದಲೂ ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) ವಿರೋಧಿಸುತ್ತಿದ್ದಾರೆ. 2021ರಲ್ಲಿಯೇ ಅವರು ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸಿ ಹೊರಡಿಸಿರುವ ಆದೇಶವನ್ನು ಕೂಡಲೇ ವಾಪಸ್ ಪಡೆಯಬೇಕು, ಈ ಕುರಿತ ಯಾವುದೇ ಚರ್ಚೆಯಲ್ಲಿ ನಾನು ಭಾಗವಹಿಸುವುದಿಲ್ಲ ಎಂದು ಆಗ ಉನ್ನತ ಶಿಕ್ಷಣ ಸಚಿವರಾಗಿದ್ದ ಡಾ. ಅಶ್ವತ್ಥ ನಾರಾಯಣಗೆ ಪತ್ರವನ್ನು ಬರೆದಿದ್ದರು.
ಸಚಿವರಿಗೆ ಬರೆದಿದ್ದ ಪತ್ರದಲ್ಲಿ ಸಿದ್ದರಾಮಯ್ಯ ಅವರು, ರಾಷ್ಟ್ರೀಯ ಶಿಕ್ಷಣ ನೀತಿ-2020 ಅನ್ನು ಕರ್ನಾಟಕದಲ್ಲಿ ಪ್ರಪ್ರಥಮವಾಗಿ ಅನುಷ್ಠಾನಗೊಳಿಸಲು ಚಾಲನೆ ನೀಡಲಾಗಿದೆಯೆಂದು ಹಾಗೂ ಈ ಕುರಿತು ಚರ್ಚಿಸಲು ದಿನಾಂಕವನ್ನು ನೀಡುವಂತೆ ತಮ್ಮ ಕಛೇರಿಯಿಂದ ಪತ್ರ ಬರೆದು ಕೋರಲಾಗಿದೆ.
ಕರ್ನಾಟಕದಲ್ಲಿ ಈಗಾಗಲೇ ತರಾತುರಿಯಲ್ಲಿ ವಿದ್ಯಾರ್ಥಿಗಳು, ತಜ್ಞರು, ಪ್ರಾಧ್ಯಾಪಕರು, ಪೋಷಕರುಗಳ ಜೊತೆ ಚರ್ಚಿಸದೆ, ಸಾಧಕ-ಬಾಧಕಗಳನ್ನು ಪರಿಶೀಲಿಸದೆ ಈ ಶೈಕ್ಷಣಿಕ ವರ್ಷದಿಂದಲೇ ಎನ್ಇಪಿ ಅನುಷ್ಠಾನ ಮಾಡುವುದಾಗಿ ಹೇಳಿ ಉದ್ಘಾಟನೆಯನ್ನೂ ಮಾಡಲಾಗಿದೆ. ಉದ್ಘಾಟನೆಯನ್ನೂ ಮುಗಿಸಿ ಚರ್ಚೆ ಮಾಡಬೇಕು ಎಂದು ಕರೆಯುವುದು ಸಂಸದೀಯವಾಗಿ ಸರಿಯಲ್ಲ ಎಂದು ಹೇಳಿದ್ದರು.
ಒಂದು ಶಿಕ್ಷಣ ನೀತಿಯ ಅನುಷ್ಠಾನವೆಂದರೆ ಸಣ್ಣ ಸಂಗತಿಯೇ?. ತಾವೂ ಕೂಡ ಬೆವರಿನ ಸಂಸ್ಕೃತಿಯ ಹಿನ್ನೆಲೆಯ ಸಮುದಾಯದಿಂದ ಬಂದಿದ್ದೀರಿ. ರಾಷ್ಟ್ರಕವಿ ಕುವೆಂಪು ಅವರು ಶಿಕ್ಷಣ, ಅದರ ಗುಣಮಟ್ಟವನ್ನು ಸುಧಾರಣೆ, ಕಲಿಕೆಯ ಮಾಧ್ಯಮ ಹಾಗೂ ಸರ್ಕಾರದ ಜವಾಬ್ಧಾರಿಗಳ ಬಗ್ಗೆ ಮಾತನಾಡಿದ್ದಾರೆ. ಶಿಕ್ಷಣದ ಕುರಿತಂತೆ ಕೆಲಸ ಮಾಡುತ್ತಿರುವವರೆಲ್ಲರೂ ಕುವೆಂಪು ಅವರ ವಿಚಾರಗಳನ್ನು ಓದಿ, ಅದರಂತೆ ನಡೆದುಕೊಳ್ಳಬೇಕಾಗಿದೆ ಎಂದು ಸಿದ್ದರಾಮಯ್ಯ ಪತ್ರದಲ್ಲಿ ವಿವರಣೆ ನೀಡಿದ್ದರು.












Click it and Unblock the Notifications