Government Employee; NPS ರದ್ದು ಗುರುವಾರವೇ ಘೋಷಣೆ?
ಬೆಂಗಳೂರು, ಜನವರಿ 17: ಕರ್ನಾಟಕದ ಸರ್ಕಾರಿ ನೌಕರರು ಕಾಂಗ್ರೆಸ್ ಸರ್ಕಾರದ ಮುಂದೆ ಹೊಸ ಪಿಂಚಣಿ ಯೋಜನೆ (NPS) ರದ್ದುಗೊಳಿಸಿ ಹಳೆಯ ಪಿಂಚಣಿ ಯೋಜನೆಯನ್ನು ಪುನಃ ಜಾರಿಗೆ ತರಬೇಕು ಎಂದು ಬೇಡಿಕೆ ಇಟ್ಟಿದ್ದಾರೆ. ಕಾಂಗ್ರೆಸ್ ಪಕ್ಷ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿಯೂ ಈ ಕುರಿತು ಬೇಡಿಕೆ ಇಟ್ಟಿತ್ತು.
ಎನ್ಪಿಎಸ್ ನೌಕರರ ಸಂಘದ ನೇತೃತ್ವದಲ್ಲಿ ವಿವಿಧ ನೌಕರರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿ ಮಾಡಿದ್ದರು. ಸುಧೀರ್ಘ ಸಭೆಯಲ್ಲಿ ಹಣಕಾಸು ಸಚಿವರೂ ಆಗಿರುವ ಸಿದ್ದರಾಮಯ್ಯ ಮಾಹಿತಿಯನ್ನು ಪಡೆದರು.

ಆದರೆ ಈ ಸಭೆಗೆ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಗೈರಾಗಿದ್ದರು. ಆದ್ದರಿಂದ ಸಿದ್ದರಾಮಯ್ಯ ಸಚಿವ ಸಂಪುಟ ಸಭೆಯಲ್ಲಿ ಎನ್ಪಿಎಸ್ ರದ್ದುಗೊಳಿಸುವ ಕುರಿತು ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ನೌಕರರ ಸಂಘಕ್ಕೆ ಭರವಸೆ ನೀಡಿದ್ದಾರೆ.
ಗುರುವಾರ ಸಂಪುಟ ಸಭೆ; ಮುಂದಿನ ಸಚಿವ ಸಂಪುಟ ಸಭೆಯಲ್ಲಿಯೂ ಎನ್ಪಿಎಸ್ ರದ್ದುಗೊಳಿಸುವ ಕುರಿತು ಚರ್ಚೆ ನಡೆಸಬೇಕು ಎಂದು ನೌಕರರ ಸಂಘ ಮುಖ್ಯಮಂತ್ರಿಗಳಿಗೆ ಮನವಿಯನ್ನು ಸಲ್ಲಿಕೆ ಮಾಡಿದೆ.
ಜನವರಿ 11ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ ನಿಗದಿಯಾಗಿತ್ತು. ಆದರೆ ಅಂದು ದೆಹಲಿಯಲ್ಲಿ ಸಚಿವರ ಸಭೆಯನ್ನು ಕಾಂಗ್ರೆಸ್ ಹೈಕಮಾಂಡ್ ನಡೆಸಿದ ಕಾರಣ ಸಚಿವ ಸಂಪುಟ ಸಭೆ ಮುಂದೂಡಿಕೆ ಮಾಡಲಾಗಿತ್ತು.
ಜನವರಿ 18ರ ಗುರುವಾರ ಸಚಿವ ಸಂಪುಟ ಸಭೆ ನಿಗಿದಿಯಾಗಿದೆ. ಈ ಸಭೆಯಲ್ಲಿಯೇ ಸರ್ಕಾರಿ ನೌಕರರ ಎನ್ಪಿಎಸ್ ರದ್ದು ಬೇಡಿಕೆಯ ಕುರಿತು ಚರ್ಚಿಸಿ ತೀರ್ಮಾನವನ್ನು ಘೋಷಣೆ ಮಾಡಲಾಗುತ್ತದೆಯೇ? ಎಂದು ಕಾದು ನೋಡಬೇಕಿದೆ.
ಈಗಾಗಲೇ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಆರ್ಥಿಕ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಎಲ್. ಕೆ. ಅತೀಕ್ ಭೇಟಿ ಮಾಡಿ ಹೊಸ ಪಿಂಚಣಿ ಯೋಜನೆಯ ಕುರಿತು ಮನವಿಯೊಂದನ್ನು ಸಲ್ಲಿಕೆ ಮಾಡಿದೆ.
ಕೇಂದ್ರ ಸರ್ಕಾರದ ಮಾದರಿಯಲ್ಲಿ 2006ರ ಪೂರ್ವದಲ್ಲಿ ನೇಮಕಾತಿ ಅಧಿಸೂಚನೆಗೆ ಒಳಪಟ್ಟ ಸರ್ಕಾರಿ ನೌಕರರನ್ನು ಹಳೆಯ ಪಿಂಚಣಿ ಯೋಜನೆ ವ್ಯಾಪ್ತಿಗೆ ಪರಿಗಣಿಸಬೇಕು ಎಂದು ಮನವಿ ಸಲ್ಲಿಸಿದ್ದಾರೆ. ಈ ಮನವಿಗೆ ಮುಖ್ಯಮಂತ್ರಿಗಳು ಒಪ್ಪಿಗೆ ನೀಡಿದ್ದು, ಶೀಘ್ರವೇ ಆದೇಶ ಪ್ರಕಟವಾಗುವ ನಿರೀಕ್ಷೆ ಇದೆ.
ರಾಜ್ಯ ಸರ್ಕಾರಿ ಎನ್ಪಿಎಸ್ ನೌಕರರ ಸಂಘದ ರಾಜ್ಯಾಧ್ಯಕ್ಷ ಶಾಂತರಾಮ ತೇಜ ಸಹ ಈ ಕುರಿತು ಮಾತನಾಡಿದ್ದಾರೆ. "ಕಳೆದ 10 ವರ್ಷಗಳಿಂದ ಹಳೆಯ ಪಿಂಚಣಿ ಯೋಜನೆ ಜಾರಿಗೊಳಿಸಲು ನಿರಂತರವಾಗಿ ಹೋರಾಟವನ್ನು ಮಾಡಲಾಗುತ್ತಿದೆ" ಎಂದು ತಿಳಿಸಿದ್ದಾರೆ.
ಕರ್ನಾಟಕ ಸರ್ಕಾರ ಸರ್ಕಾರ ದಿನಾಂಕ 31/03/2006ರ ಆದೇಶದ ಅನ್ವಯ ದಿನಾಂಕ 01/04/2006 ರಂದು ಮತ್ತು ತದನಂತರ ಸರ್ಕಾರಿ ಸೇವೆಗೆ ಸೇರುವ ನೌಕರರಿಗೆ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಿದೆ.
ರಾಜ್ಯದ ಸ್ವಾಯತ್ತ ಸಂಸ್ಥೆಗಳು, ನಿಗಮ ಮಂಡಳಿಗಳು, ಸಂಘಗಳು, ವಿಶ್ವವಿದ್ಯಾನಿಲಯಗಳು, ರಾಜ್ಯದ ಅನುದಾನಿತ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೂ ಸಹ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ದಿನಾಂಕ 01/04/2006ರಿಂದ ಕಡ್ಡಾಯವಾಗಿ ಜಾರಿಗೆ ಬರುವಂತೆ ಸರ್ಕಾರದ ಸುತ್ತೋಲೆ ದಿನಾಂಕ 21/02/2015ರಲ್ಲಿ ವಿಸ್ತರಣೆ ಮಾಡಲಾಗಿದೆ.
ಆದರೆ ಹೊಸ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ ಹಳೆಯ ಪಿಂಚಣಿ ಯೋಜನೆಯನ್ನು ಮರು ಸ್ಥಾಪನೆ ಮಾಡಬೇಕು ಎಂದು ಸರ್ಕಾರಿ ನೌಕರರು ಬೇಡಿಕೆ ಇಟ್ಟಿದ್ದಾರೆ. ಕೆಲವು ರಾಜ್ಯಗಳಲ್ಲಿ ಈಗಾಗಲೇ ಹೊಸ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಲಾಗಿದೆ.
ಕರ್ನಾಟಕ ಸರ್ಕಾರ ಹಳೆ ಪಿಂಚಣಿ ಯೋಜನೆಯನ್ನು ಮರು ಜಾರಿ ಮಾಡಿರುವ ರಾಜ್ಯಗಳಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಿರುವ ಕುರಿತು, ಕೈಗೊಂಡಿರುವ ಕ್ರಮಗಳ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚನೆ ಮಾಡಿದೆ.
ಮಾಹಿತಿಗಳ ಪ್ರಕಾರ ರಾಜ್ಯದಲ್ಲಿ ಒಟ್ಟು 2,65,715 ಸರ್ಕಾರಿ ನೌಕರರು ಹೊಸ ಪಿಂಚಣಿ ಯೋಜನೆ ವ್ಯಾಪ್ತಿಯಲ್ಲಿ ಇದ್ದಾರೆ. 1169 ನೌಕರರು ಮರಣ ಹೊಂದಿದ್ದಾರೆ. 1463 ನೌಕರರು ನಿವೃತ್ತರಾಗಿದ್ದಾರೆ. ಕಾಂಗ್ರೆಸ್ ಪಕ್ಷ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಹೊಸ ಪಿಂಚಣಿ ಯೋಜನೆ ರದ್ದು ಮಾಡುವ ಭರವಸೆಯನ್ನು ಸರ್ಕಾರಿ ನೌಕರರಿಗೆ ನೀಡಿದೆ.












Click it and Unblock the Notifications