Government Employee; NPS ಸದನದಲ್ಲಿ ಉತ್ತರ ಕೊಟ್ಟ ಸಿಎಂ
ಬೆಂಗಳೂರು, ಡಿಸೆಂಬರ್ 06; ಕರ್ನಾಟಕದ ಸರ್ಕಾರಿ ನೌಕರರು ಹೊಸ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ ಹಳೆಯ ಪಿಂಚಣಿ ಯೋಜನೆಯನ್ನು ಪುನಃ ಜಾರಿಗೆ ತರಬೇಕು ಎಂದು ಕರ್ನಾಟಕ ಸರ್ಕಾರದ ಮುಂದೆ ಬೇಡಿಕೆ ಇಟ್ಟಿದ್ದಾರೆ. ಕಾಂಗ್ರೆಸ್ ಪಕ್ಷ ಚುನಾವಣಾ ಪ್ರಣಾಳಿಕೆಯಲ್ಲಿಯೂ ಈ ಕುರಿತು ಭರವಸೆಯನ್ನು ನೀಡಿತ್ತು.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ವಿಧಾನಸಭೆಯಲ್ಲಿ ತರೀಕೆರೆಯ ಶಾಸಕ ಶ್ರೀನಿವಾಸ ಜಿ. ಹೆಚ್. ಕೇಳಿದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಹಣಕಾಸು ಸಚಿವರು ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ನೀಡಿದ್ದಾರೆ.

ಸರ್ಕಾರಿ ನೌಕರರ ಹೊಸ ಪಿಂಚಣಿ ಯೋಜನೆ ಮತ್ತು ಹಳೆ ಪಿಂಚಣಿ ಯೋಜನೆಯ ಕುರಿತಾದ ಪ್ರಶ್ನೆ ಇದಾಗಿದೆ. ಮೊದಲನೇ ಪ್ರಶ್ನೆಯಲ್ಲಿ ದಿನಾಂಕ 1/4/2006 ರಿಂದ ಸರ್ಕಾರಿ ಸೇವೆಗೆ ಸೇರಿರುವ ನೌಕರರಿಗೆ ಹಾಗೂ ಅನುದಾನಿತ ಮತ್ತು ನಿಗಮ ಮಂಡಳಿಗಳಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿರುವ ನೌಕರರಿಗೆ ಹಳೆ ಪಿಂಚಣಿ ವ್ಯವಸ್ಥೆಯನ್ನು ಜಾರಿಗೊಳಿಸಲು ಸರ್ಕಾರ ಕೈಗೊಂಡಿರುವ ಕ್ರಮವೇನು? ಎಂದು ಕೇಳಿದ್ದಾರೆ.
ಅಲ್ಲದೇ ಎನ್ಪಿಎಸ್ ಯೋಜನೆಯನ್ನು ರದ್ದುಗೊಳಿಸುವುದರಿಂದ ಸರ್ಕಾರಿ/ ಅರೆ ಸರ್ಕಾರಿ ನೌಕರರಿಗೆ ಸಾಮಾಜಿಕ ಮತ್ತು ಆರ್ಥಿಕ ಭದ್ರತೆ ಒದಗಿಸಿದಂತಾಗುತ್ತದೆ ಹಾಗೂ ಪ್ರತಿ ತಿಂಗಳು ಸರ್ಕಾರಕ್ಕೆ ಸುಮಾರು 150 ಕೋಟಿ ಹಣ ಉಳಿತಾಯವಾಗುತ್ತದೆ ಎಂಬುದು ಸರ್ಕಾರದ ಗಮನಕ್ಕೆ ಬಂದಿದೆಯೇ? ಎಂದು ಪ್ರಶ್ನಿಸಿದ್ದಾರೆ.
ಸಿದ್ದರಾಮಯ್ಯ ಉತ್ತರ; ಮುಖ್ಯಮಂತ್ರಿಗಳು ಉತ್ತರದಲ್ಲಿ ಹಳೆಯ ಪಿಂಚಣಿ ಯೋಜನೆಯ ಆರ್ಥಿಕ ಹೊರೆಯನ್ನು ನಿಭಾಯಿಸಲು ಸಾಕಷ್ಟು ನಿಧಿಯ ಆಧಾರ ಇಲ್ಲದಿರುವುದರಿಂದ ಹಾಗೂ ರಿಸರ್ವ್ ಬ್ಯಾಂಆಕ್ ರವರು ರಚಿಸಿದ ಸಮಿತಿಯ ವರದಿಯ ಶಿಫಾರಸ್ಸಿನ ಆಧಾರದ ಮೇಲೆ ಕೇಂದ್ರ ಸರ್ಕಾರವು ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ದಿನಾಂಕ 01/01/2004ರಿಂದ ಜಾರಿಗೊಳಿಸಿರುತ್ತದೆ.
ಅದರಂತೆಯೇ ಇತರ ರಾಜ್ಯಗಳು ಈ ಯೋಜನೆಯನ್ನು ಅಳವಡಿಸಿಕೊಂಡ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯವು ಕೂಡಾ ಸರ್ಕಾರದ ಆದೇಶ 31/03/2006 ರನ್ವಯ ದಿನಾಂಕ 01/04/2006ರಂದು ಮತ್ತು ತದನಂತರ ಸರ್ಕಾರಿ ಸೇವೆಗೆ ಸೇರುವ ನೌಕರರಿಗೆ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಿರುತ್ತದೆ ಎಂದು ಸಿದ್ದರಾಮಯ್ಯ ಉತ್ತರಿಸಿದ್ದಾರೆ.
ರಾಜ್ಯದ ಸ್ವಾಯತ್ತ ಸಂಸ್ಥೆಗಳು, ನಿಗಮ-ಮಂಡಳಿಗಳು, ಸಂಘಗಳು, ವಿಶ್ವವಿದ್ಯಾನಿಲಯಗಳು, ರಾಜ್ಯದ ಅನುದಾನಿತ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೂ ಸಹ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ದಿನಾಂಕ 01/04/2006ರಿಂದ ಜಾರಿಗೆ ಬರುವಂತೆ ಸರ್ಕಾರದ ಸುತ್ತೋಲೆ ದಿನಾಂಕ 21/2/2015ರಲ್ಲಿ ವಿಸ್ತರಿಸಲಾಗಿದೆ ಎಂದು ಹೇಳಿದ್ದಾರೆ.
ಮುಂದುವರೆದ ಉತ್ತರದಲ್ಲಿ ಮುಖ್ಯಮಂತ್ರಿಗಳು ಸರ್ಕಾರದ ಆದೇಶ ದಿನಾಂಕ 1/3/2023ರಲ್ಲಿ ರಾಜ್ಯದಲ್ಲಿ ಜಾರಿ ಇರುವ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ರದ್ದುಪಡಿಸುವ ಸಂಬಂಧ ಈಗಾಗಲೇ ಹಳೆ ಪಿಂಚಣಿ ಯೋಜನೆಯನ್ನು ಮರು ಜಾರಿ ಮಾಡಿರುವ ರಾಜ್ಯಗಳಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಿರುವ ಕುರಿತು ಕೈಗೊಂಡಿರುವ ಕ್ರಮಗಳ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಆದೇಶಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹೊಸ ಪಿಂಚಣಿ ಯೋಜನೆ ರದ್ದುಗೊಳಿಸುವ ಕುರಿತು ಶೀಘ್ರದಲ್ಲಿಯೇ ಆರ್ಥಿಕ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸುವ ನಿರೀಕ್ಷೆ ಇದೆ. ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿಗಳು ಆರ್ಥಿಕ ಇಲಾಖೆಗೆ ಈ ಕುರಿತು ಪತ್ರವನ್ನು ಬರೆದಿದ್ದಾರೆ. ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ, ಹಳೆಯ ಪಿಂಚಣಿ ಯೋಜನೆ ಜಾರಿಗೆ ಅಗತ್ಯವಾದ ಪ್ರಕ್ರಿಯೆಗಳನ್ನು ಪ್ರಾರಂಭಿಸುವಂತೆ ಸೂಚನೆ ಕೊಟ್ಟಿದ್ದಾರೆ.
ಕರ್ನಾಟಕ ಸರ್ಕಾರದ ಆದೇಶದಂತೆ 2006ರ ಏಪ್ರಿಲ್ 1ರಂದು ಹೊಸ ಪಿಂಚಣಿ ಯೋಜನೆ ಜಾರಿಯಾಗಿದೆ. ಸುಮಾರು 2,65,715 ನೌಕರರು ಈ ವ್ಯಾಪ್ತಿಗೆ ಸೇರಿದ್ದಾರೆ. ಅಲ್ಲದೇ ಎನ್ಪಿಎಸ್ ಅಡಿ ಬರುವ 1169 ನೌಕರರು ಮೃತಪಟ್ಟಿದ್ದಾರೆ. 1463 ನೌಕರರು ನಿವೃತ್ತಿ ಹೊಂದಿದ್ದಾರೆ. ಸರ್ಕಾರಿ ನೌಕರರು, ವಿವಿಧ ನೌಕರರ ಸಂಘಗಳ ಮೂಲಕ ಎನ್ಪಿಎಸ್ ರದ್ದುಗೊಳಿಸಬೇಕು ಎಂದು ಹೋರಾಟ ಮಾಡುತ್ತಲೇ ಬಂದಿವೆ.
2023ರ ಮಾರ್ಚ್ನಲ್ಲಿ ಸರ್ಕಾರಿ ನೌಕರರು ಮುಷ್ಕರ ಆರಂಭಿಸಿದಾಗ 7ನೇ ವೇತನ ಆಯೋಗದ ವರದಿ ಜಾರಿ, ಎನ್ಪಿಎಸ್ ರದ್ದುಗೊಳಿಸಬೇಕು ಎಂಬ ಎರಡು ಪ್ರಮುಖ ಬೇಡಿಕೆಯನ್ನು ಸರ್ಕಾರದ ಮುಂದೆ ಇಟ್ಟಿದ್ದರು. 7ನೇ ರಾಜ್ಯ ವೇತನ ಆಯೋಗಕ್ಕೆ ಸಹ ಎನ್ಪಿಎಸ್ ರದ್ದುಗೊಳಿಸಲು ಶಿಫಾರಸು ಮಾಡಬೇಕು ಎಂದು ನೌಕರರು ಮನವಿ ಮಾಡಿದ್ದಾರೆ.












Click it and Unblock the Notifications