ನನ್ನನ್ನು ಅಧಿಕಾರದಿಂದ ಇಳಿಸಲು ಸಾಧ್ಯವಿಲ್ಲ: ಬಿಜೆಪಿಗರಿಗೆ ಎಚ್ಚರಿಕೆ ಕೊಟ್ಟ ಸಿದ್ದರಾಮಯ್ಯ
ಬೆಳಗಾವಿ, ಆಗಸ್ಟ್ 26: ರಾಜ್ಯ ಸರ್ಕಾರವನ್ನು ಇನ್ನಾರು ತಿಂಗಳಲ್ಲಿ ಅಸ್ಥಿರಗೊಳಿಸಲು ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಪ್ರಯತ್ನಿಸುತ್ತಿದ್ದಾರೆ ಎಂಬ ಮಾತು ಕೇಳಿ ಬಂದಿದೆ. ನಿಮ್ಮ ಆಶೀರ್ವಾದ ಇರುವವರೆಗೂ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ಗೆ ಸ್ಪಷ್ಟ ಎಚ್ಚರಿಕೆ ಕೊಟ್ಟಿದ್ದಾರೆ.
ಕೌಜಲಗಿಯಲ್ಲಿ ಆಯೋಜಿಸಿದ್ದ ಅದ್ದೂರಿ ಕಾರ್ಯಕ್ರಮದಲ್ಲಿ ಸಂಗೊಳ್ಳಿ ರಾಯಣ್ಣ ಮತ್ತು ರಾಯಣ್ಣ ಕೋಟೆಯನ್ನು ಉದ್ಘಾಟಿಸಿ ಮಾತನಾಡಿದ ಸಿಎಂ, ರಾಣಿ ಚನ್ನಮ್ಮನ ಬಲಗೈ ಬಂಟ ರಾಯಣ್ಣ ಅತ್ಯಂತ ಪರಾಕ್ರಮಿ. ಬ್ರಿಟೀಷರು ರಾಣಿ ಚನ್ನಮ್ಮನ ಆಸ್ಥಾನದ ಮೇಲೆ ದಾಳಿ ನಡೆಸಿದಾಗ ರಾಯಣ್ಣನ ಹೋರಾಟದಿಂದ, ಶೌರ್ಯದಿಂದ ಗೆಲುವು ಸಾಧ್ಯವಾಯಿತು. ಎರಡನೇ ಯುದ್ಧದಲ್ಲಿ ಸೋಲಾದರೂ ಬ್ರಿಟೀಷರ ಕೈಗೆ ಸಿಗದೆ ತಪ್ಪಿಸಿಕೊಂಡ ರಾಯಣ್ಣ ಗೆರಿಲ್ಲಾ ಸೈನ್ಯ ಕಟ್ಟಿ, ಗೆರಿಲ್ಲಾ ಯುದ್ಧ ಮಾಡಿ ಬ್ರಿಟೀಷರಿಗೆ ಚಳ್ಳೆಹಣ್ಣು ತಿನ್ನಿಸಿದರು. ಇದರಿಂದ ಬ್ರಿಟೀಷರು ನೆಮ್ಮದಿ ಕೆಡಿಸಿಕೊಂಡಿದ್ದರು. ಆದರೆ ನಮ್ಮವರೇ ರಾಯಣ್ಣನನ್ನು ಬ್ರಿಟೀಷರಿಗೆ ಹಿಡಿದುಕೊಟ್ಟರು.

ನಮ್ಮವರ ದೇಶದ್ರೋಹದಿಂದ ರಾಯಣ್ಣ ಬ್ರಿಟೀಷರ ವಶವಾದರು. ರಾಯಣ್ಣ ಈಜಾಡುವಾಗ ಅವರ ಕೈಯಲ್ಲಿ ಆಯುಧ ಇರುವುದಿಲ್ಲ . ಈ ವೇಳೆ ಅವರನ್ನು ಬಂಧಿಸುವುದು ಸುಲಭ ಎಂದು ಬ್ರಿಟೀಷರಿಗೆ ಐಡಿಯಾ ಕೊಟ್ಟು ಬಂಧನಕ್ಕೆ ಕಾರಣರಾದವರು ನಮ್ಮವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ಇಂಥಾ ದೇಶದ್ರೋಹಿಗಳು ನಮ್ಮಲ್ಲೇ ಇದ್ದಾರೆ. ಈ ಬಿಜೆಪಿಯವರು ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸಬೇಕು ಎಂದು ಷಡ್ಯಂತ್ರ ಮಾಡುತ್ತಲೇ ಇದ್ದಾರೆ. ಆದರೆ ಎಲ್ಲಿಯವರೆಗೂ ನಿಮ್ಮ ಆಶೀರ್ವಾದ ನನ್ನ ಮೇಲೆ ಇರುತ್ತದೋ ಅಲ್ಲಿಯವರೆಗೂ ನನ್ನನ್ನು ಕೆಳಗಿಳಿಸಲು ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ ಅವರು ತಿಳಿಸಿದರು.
ಹಿಂದುಳಿದ ಸಮುದಾಯದವರು ಸಿಎಂ ಆಗಬಾರದು, ಅಧಿಕಾರದಲ್ಲಿರಬಾರದು ಎನ್ನುವುದು ಬಿಜೆಪಿಯ ಪುರಾತನ ಸಿದ್ಧಾಂತ. ಅದಕ್ಕೇ ಯಾವುದೇ ತಪ್ಪಿಲ್ಲದಿದ್ದರೂ ನನ್ನ ವಿರುದ್ಧ ಬಿಜೆಪಿಯವರು ಭಯಾನಕ ಷಡ್ಯಂತ್ರ ರಚಿಸಿದ್ದಾರೆ. ಜನರ ಆಶೀರ್ವಾದ ನನ್ನ ಮೇಲೆ ಇರುವವರೆಗೂ ಷಡ್ಯಂತ್ರ ಗೆಲ್ಲುವುದಿಲ್ಲ ಎಂದು ಸ್ಪಷ್ಟ ಎಚ್ಚರಿಕೆ ನೀಡಿದರು.
ಸಂಗೊಳ್ಳಿ ರಾಯಣ್ಣನವರ ಚಿಂತನೆಗಳನ್ನು ಶಾಶ್ವತಗೊಳಿಸಲು ಸಂಗೊಳ್ಳಿ ಸೈನಿಕ ಶಾಲೆ ಆರಂಬಿಸಿದ್ದು, ಈ ಪ್ರದೇಶವನ್ನು ಪ್ರವಾಸೋದ್ಯಮ ಕೇಂದ್ರವಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಕಿತ್ತೂರು ರಾಣಿ ಚೆನ್ನಮ್ಮನವರ ಆಸ್ಥಾನದಲ್ಲಿ ಸೈನಿಕರಾಗಿದ್ದ ಸಂಗೊಳ್ಳಿ ರಾಯಣ್ಣನವರನ್ನು ರಾಣಿ ಚೆನ್ನಮ್ಮನ ಬಲಗೈ ಬಂಟ ರಾಗಿದ್ದರು. ಆಗಸ್ಟ್ 15 ರಂದು ಹುಟ್ಟಿದ್ದ ರಾಯಣ್ಣನವರು ಜನವರಿ 26 ರಂದು ಹುತಾತ್ಮರಾಗಿದ್ದು ಕಾಕತಾಳೀಯ. ಬ್ರಿಟೀಷರನ್ನು ತೊಲಗಿಸಲು ಹೋರಾಟ ನಡೆಸಿದ ಅಪ್ರತಿಮ ದೇಶಪ್ರೇಮಿ. ಕಿತ್ತೂರು ಸಂಸ್ಥಾನವನ್ನು ಪಡೆಯಲು ಪ್ರಯತ್ನಿಸಿದ ಬ್ರಿಟೀಷರನ್ನು ಸದೆಬಡಿದ ಪರಾಕ್ರಮಿ. ರಾಣಿ ಚೆನ್ನಮ್ಮನನ್ನು ಬಂಧಿಸಿದ್ದ ಬ್ರಿಟೀಷರೊಂದಿಗೆ ಸೆಣೆಸಲು ಗೆರಿಲ್ಲಾ ಸೈನ್ಯವನ್ನು ಕಟ್ಟಿ ಹೋರಾಡಿದರು ಎಂದರು.
ನಾಡನ್ನು ಪ್ರೀತಿಸುತ್ತಿದ್ದ ಸಂಗೊಳ್ಳಿ ರಾಯಣ್ಣನವರ ದೇಶಪ್ರೇಮವನ್ನು ಎಲ್ಲರೂ ಬೆಳೆಸಿಕೊಳ್ಳಬೇಕು. ರಾಯಣ್ಣನವರ ತತ್ವಾದರ್ಶಗಳನ್ನು ಶಾಶ್ವತಗೊಳಿಸಲು ಅವರ ಜನ್ಮಸ್ಥಳ ಸಂಗೊಳ್ಳಿ ಯನ್ನು ಅಭಿವೃದ್ಧಿಪಡಿಸುವ ಜೊತೆಗೆ ಸಂಗೊಳ್ಳಿ ಸೈನಿಕ ಶಾಲೆಯನ್ನು ಆರಂಭಿಸಿದ್ದೇವೆ. ಜಾತಿ ಧರ್ಮ ಬೇಧಗಳನ್ನು ಮರೆತು ದೇಶವನ್ನು ಪ್ರೀತಿಸುವ ಹಾಗೂ ಮನುಜಪ್ರೀತಿಯನ್ನು ಬೆಳೆಸಿಕೊಳ್ಳುವ ಮೂಲಕ ಸಂಗೊಳ್ಳಿ ರಾಯಣ್ಣನಿಗೆ ಗೌರವ ಸೂಚಿಸಿದಂತಾಗುತ್ತದೆ ಎಂದರು.
ಸ್ವಂತ ಜನರ ಪಿತೂರಿಯಿಂದಲೇ ರಾಯಣ್ಣ ಬ್ರಿಟೀಷರಿಗೆ ಸೆರೆಸಿಕ್ಕರು. ಬ್ರಿಟೀಷರಿಗೆ ಸಹಾಯ ಮಾಡಿದಂತೆ ದೇಶದ್ರೋಹಿಗಳು ಎಲ್ಲ ಕಾಲದಲ್ಲಿಯೂ ಇದ್ದಾರೆ. ಅಂತೆಯೇ ನನ್ನ ಮೇಲೆಯೂ ಅಪಪ್ರಚಾರ ಮಾಡಿ ಸರ್ಕಾರವನ್ನು ಅಭದ್ರಗೊಳಿಸುವ ಪ್ರಯತ್ನವನ್ನು ಇಂದು ಮಾಡಲಾಗುತ್ತಿದೆ. ಈ ಪಿತೂರಿಯನ್ನು ನಡೆಸುತ್ತಿರುವ ಬಿಜೆಪಿಯವರು ನಂಬಿಕೆಗೆ ಅನರ್ಹರು ಎಂದರು.
ಬಾಗೋಜಿಕೊಪ್ಪ ಮಠದ ಶಿವಲಿಂಗ ಮುರುಘರಾಜೇಂದ್ರ ಸ್ವಾಮಿಗಳ ದಿವ್ಯ ಸಾನ್ನಿದ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಸತೀಶ್ ಜಾರಕಿಹೊಳಿ, ಶಾಸಕರಾ ಬಾಲಚಂದ್ರ ಜಾರಕಿಹೊಳಿ ಹಾಗೂ ಮುಖ್ಯ ಸಚೇತಕರಾದ ಅಶೋಕ್ ಪಟ್ಟಣ್ ಸೇರಿ ಹಲವು ನಾಯಕರು ಉಪಸ್ಥಿತರಿದ್ದರು.











Click it and Unblock the Notifications