ಜಾತಿ ನಿಂದನೆ ಪ್ರಕರಣ: ಬಸವರಾಜ ಹೊರಟ್ಟಿ ವಿರುದ್ಧ ತನಿಖಾ ವರದಿ ಸಲ್ಲಿಕೆ
ಬೆಂಗಳೂರು, ಜೂ.27: ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧ ಪೊಲೀಸರು ವಿಧಾನಪರಿಷತ್ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ವಿರುದ್ಧದ ತನಿಖಾ ವರದಿಯನ್ನು ಹೈಕೋರ್ಟ್ಗೆ ಸೋಮವಾರ ಸಲ್ಲಿಸಿದ್ದಾರೆ.
ಪ್ರಕರಣದ ಸಂಬಂಧ ತಮ್ಮ ವಿರುದ್ಧದ ಎಫ್ಐಆರ್ ರದ್ದು ಕೋರಿ ಬಸವರಾಜ ಹೊರಟ್ಟಿ ಸಲ್ಲಿಸಿದ್ದ ಅರ್ಜಿ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.
ಆ ವೇಳೆ ಸರ್ಕಾರಿ ವಕೀಲರು, ಧಾರವಾಡ ಗಾಮೀಣಾ ಠಾಣಾ ಪೊಲೀಸರು ಮುಚ್ಚಿದ ಲಕೋಟೆಯಲ್ಲಿ ತನಿಖಾ ವರದಿಯನ್ನು ನ್ಯಾಯಪೀಠಕ್ಕೆ ಸಲ್ಲಿಸಲಾಗಿದೆ ಎಂದರು.

ಆ ಅಂಶವನ್ನು ದಾಖಲಿಸಿಕೊಂಡ ನ್ಯಾಯಪೀಠ ವಿಚಾರಣೆಯನ್ನು ಜುಲೈ 11ಕ್ಕೆ ಮುಂದೂಡಿತು. ಅಲ್ಲಿಯವರೆಗೆ ಅರ್ಜಿದಾರರ ವಿರುದ್ಧದ ವಿಚಾರಣೆ/ತನಿಖೆಗೆ ನೀಡಲಾಗಿರುವ ಮಧ್ಯಂತರ ತಡೆ ಮುಂದುವರಿಸುವುದಾಗಿ ಆದೇಶಿಸಿತು.
ಪ್ರಕರಣದ ಹಿನ್ನೆಲೆ: ಪರಿಶಿಷ್ಟ ಪಂಗಡದ ವಾಲ್ಮೀಕಿ ಜನಾಂಗಕ್ಕೆ ಸೇರಿದ ಮೋಹನ್ ಚಂಬಪ್ಪ ಗುಂಡಿಸಲ್ಮಾನಿ 2022ರ ಜ.25ರಂದು ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು. ಮುಗದಾ ಗ್ರಾಮದ ಸರ್ವೋದಯ ಶಿಕ್ಷಣ ಶಿಕ್ಷಣ ಸಂಸ್ಥೆಗೆ ಸಂಬಂಧ ಬಸವರಾಜ ಹೊರಟ್ಟಿ ಯಾವುದೇ ಅಧಿಕಾರ ಹೊಂದಿಲ್ಲ. ಆದ ಕಾರಣ ಸಂಸ್ಥೆಯಲ್ಲಿ ಅಳವಡಿಸಿರುವ ಅವರ ನಾಮಫಲಕ ತೆಗೆಯಬೇಕು ಎಂದು ಶಾಲಾ ಸಿಬ್ಬಂದಿಗೆ ವಿನಂತಿಸಿಕೊಂಡಿದ್ದೆ.
ಈ ವೇಳೆ ಮೊದಲ ನಾಲ್ಕು ಆರೋಪಿಗಳಾದ ವೆಂಕಟೇಶ ಲಕ್ಸಾಣಿ, ಚೈತ್ರ ಮೇಟಿ, ನಿರ್ಮಲಾ ಚವ್ಹಾಣ ಮತ್ತು ದೊಡ್ಡಪ್ಪ ಕೆಂಗಪ್ಪ ಅವರು ಸಿಟ್ಟಾಗಿ, ಬಸವರಾಜ ಹೊರಟ್ಟಿ ಅವರ ಪ್ರಚೋದನೆ ಮೇರೆಗೆ ನನ್ನ ಮೇಲೆ ಹಲ್ಲೆ ನಡೆಸಿ ಜಾತಿ ನಿಂದಿಸಿದರು. ಕೊಠಡಿಯಲ್ಲಿ ಅಕ್ರಮವಾಗಿ ಕೂಡಿ ಹಾಕಿ, ನನ್ನ ಕಾರು ಮೇಲೆ ಕಲ್ಲು ತೂರಿ ಹಾನಿಗೊಳಿಸಿದರು ಎಂದು ಆರೋಪಿಸಿದ್ದರು.
ಇದರಿಂದ ಬಸವರಾಜ ಹೊರಟ್ಟಿ ಹಾಗೂ ಇತರೆ ನಾಲ್ವರ ವಿರುದ್ಧ ಹಲ್ಲೆ, ಉದ್ದೇಶಪೂರ್ವಕ ಅವಮಾನ, ಜೀವ ಬೆದರಿಕೆ, ಅಕ್ರಮವಾಗಿ ಕೂಡಿ ಹಾಕಿದ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಡಗಳ ಕಾಯಿದೆಯಡಿ ಜಾತಿ ನಿಂದನೆ ಪ್ರಕರಣ ಸಂಬಂಧ ಎಫ್ಐಆರ್ ದಾಖಲಿಸಿದ್ದರು. ಅದರ ರದ್ದು ಕೋರಿ ಪ್ರಕರಣದ ಐದನೇ ಆರೋಪಿ ಹೊರಟ್ಟಿ ಹೈಕೋರ್ಟ್ಗೆ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದರು.
ಅರ್ಜಿಯನ್ನು 2022ರ ಜ.31ರಂದು ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ಬಸವರಾಜ ಹೊರಟ್ಟಿ ಘಟನೆ ನಡೆದ ಸ್ಥಳದಲ್ಲಿ ಇರಲಿಲ್ಲ. ಎಫ್ಐಆರ್ನಲ್ಲೂ ಅವರ ವಿರುದ್ಧ ಗಂಭೀರ ಆರೋಪಗಳಿಲ್ಲ ಎಂದು ತಿಳಿಸಿ ಅವರ ವಿರುದ್ಧದ ವಿಚಾರಣೆ/ತನಿಖೆಗೆ ಮಧ್ಯಂತರ ತಡೆ ನೀಡಿತ್ತು.












Click it and Unblock the Notifications