ಸಿದ್ದರಾಮಯ್ಯ ಹೊಸ ಪೀಪಿ ಊದುತ್ತಿದ್ದಾರೆ: ಟ್ವೀಟ್ ಬಾಣ ಬಿಟ್ಟ ಕುಮಾರಣ್ಣ!
ಬೆಂಗಳೂರು, ಏಪ್ರಿಲ್ 17: ಎಚ್.ಕಾಂತರಾಜು ಅಧ್ಯಕ್ಷತೆಯ ಹಿಂದುಳಿದ ವರ್ಗಗಳ ಆಯೋಗವು ರಾಜ್ಯ ಸರ್ಕಾರಕ್ಕೆ ಸಲ್ಲಿಸಿರುವ ಜಾತಿ ಜನಗಣತಿ ವರದಿ ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವಿರೋಧ ಪಕ್ಷಗಳು ವರದಿಯ ಅಂಕಿ ಅಂಶಗಳನ್ನು ಮುಂದಿಟ್ಟುಕೊಂಡು ಸರ್ಕಾರವನ್ನು ಪ್ರಶ್ನಿಸುತ್ತಿದೆ. ಗುರುವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಈ ವರದಿ ಬಗ್ಗೆ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ ಎಂದು ಅಂದಾಜಿಸಲಾಗಿದೆ.
ಮಂಡ್ಯ ಸಂಸದ, ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್. ಡಿ. ಕುಮಾರಸ್ವಾಮಿ ಗುರುವಾರ ಸಾಮಾಜಿಕ ಜಾಲತಾಣದ ಪೋಸ್ಟ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಟೀಕೆಗಳನ್ನು ಮಾಡಿದ್ದಾರೆ. "ಸರ್ವ ಜನಾಂಗದ ಶಾಂತಿಯ ತೋಟಕ್ಕೆ ಕೊಳ್ಳಿ ಇಟ್ಟ ಪಾಪ ಸುಮ್ಮನೆ ಬಿಡುವುದಿಲ್ಲ" ಎಂದು ಎಚ್ಚರಿಕೆ ನೀಡಿದ್ದಾರೆ.

ಕುಮಾರಸ್ವಾಮಿ ಟ್ವೀಟ್: ಎಚ್. ಡಿ. ಕುಮಾರಸ್ವಾಮಿ, 'ಅಂತೂ ಅನುಮಾನ ನಿಜವಾಯಿತು!
ರಾಜ್ಯ ಕಾಂಗ್ರೆಸ್ ಮಾಡಿದ್ದು ಜಾತಿ ಗಣತಿ!. ಮುಖ್ಯಮಂತ್ರಿ ಮಹೋದಯರ ಪ್ರಕಾರ ಅದು ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ!' ಎಂದು ದೂರಿದ್ದಾರೆ.
'ಶ್ರೀ ಸಿದ್ದರಾಮಯ್ಯನವರು ಈಗ ಉಲ್ಟಾ ಹೊಡೆದಿದ್ದಾರೆ! 'ಅದು ಜಾತಿ ಸಮೀಕ್ಷೆ ಅಲ್ಲ.. ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ' ಎಂದು ಹೊಸ ಪೀಪಿ ಊದುತ್ತಿದ್ದಾರೆ' ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ.
'ಹಾಗಾದರೆ ಹಾದಿ ಬೀದಿಯಲ್ಲಿ ತೇಲಾಡುತ್ತಿರುವ, ಬಿದ್ದೂಬಿದ್ದು ಹೊರಳಾಡುತ್ತಿರುವ ಅಂಕಿ ಸಂಖ್ಯೆಗಳು ಏನು?. ಸೋರಿಕೆಯಾಗಿರುವ ದತ್ತಾಂಶ ಮತ್ತು ಸಿಎಂ ಅವರು ಹೇಳಿದ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ದತ್ತಾಂಶವು ಎರಡೂ ಒಂದೇನಾ? ಅಥವಾ ಅಲ್ಲವಾ?. ವರದಿ ಬಹಿರಂಗಕ್ಕೆ ಮೊದಲೇ ವ್ಯವಸ್ಥಿತವಾಗಿ ಸೋರಿಕೆ ಮಾಡಿದ್ದು ಯಾರು? ಅದರ ಹಿಂದಿರುವ ಕಳ್ಳ ಕೈ ಯಾವುದು? ಬೀದಿಪಾಲಾದ ದತ್ತಾಂಶ ಇಟ್ಟುಕೊಂಡು ಏನು ಮಾಡುತ್ತೀರಿ?' ಎಂದು ಸರ್ಕಾರ, ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಾರೆ.
'ಸಿಎಂ ಸಾಹೇಬರೇ.. ಸೋರಿಕೆ ಬಗ್ಗೆ ತಪ್ಪದೇ ತನಿಖೆ ಮಾಡಿಸಿ. ಅದು ಆಯೋಗದಿಂದ ಸೋರಿಕೆ ಆಯಿತಾ? ಅಥವಾ ಸಂಪುಟದಲ್ಲಿ ಸಚಿವರ ಕೈ (!?) ಸೇರಿದ ಮೇಲೆ ಸೋರಿಕೆ ಆಯಿತಾ? ಅಥವಾ ನಿಮ್ಮ ಗ್ಯಾಂಗ್ ಕೈ ಚಳಕವಾ?. ತನಿಖೆ ಬಗ್ಗೆ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡುತ್ತೀರಾ? ನೀವೇ ಹೇಳಬೇಕು' ಎಂದು ಸಲಹೆ ನೀಡಿದ್ದಾರೆ.
'ಸೋರಿಕೆಗೆ ನಿಮ್ಮ ಸರಕಾರವೇ ಹೊಣೆ, ಸಂಶಯವೇ ಇಲ್ಲ. ಯಾವುದೇ ಕಾರಣಕ್ಕೂ ಸೋರಿಕೆಯಾದ ಈ ವರದಿಯನ್ನು ಸಂಪುಟದಲ್ಲಿ ಮಂಡಿಸಲೇಬಾರದು. ಮಂಡಿಸಿ ಸಂಪುಟದ ಪಾವಿತ್ರ್ಯತೆ ಹಾಳು ಮಾಡಬೇಡಿ' ಎಂದು ಕುಮಾರಸ್ವಾಮಿ ಪೋಸ್ಟ್ ಹಾಕಿದ್ದಾರೆ.
'ನೆಮ್ಮದಿಯಾಗಿದ್ದ ರಾಜ್ಯಕ್ಕೆ ಬೆಂಕಿ ಹಾಕಿದ್ದೀರಿ, ಜಾತಿಗಳ ಮಧ್ಯೆ ವಿಷಬೀಜ ಬಿತ್ತಿದ್ದೀರಿ. ನಿಮ್ಮ ದುರುದ್ದೇಶ, ದುಷ್ಟತನದ ಪರಾಕಾಷ್ಠೆ ಇದು. ಸರ್ವ ಜನಾಂಗದ ಶಾಂತಿಯ ತೋಟಕ್ಕೆ ಕೊಳ್ಳಿ ಇಟ್ಟ ಪಾಪ ಸುಮ್ಮನೆ ಬಿಡುವುದಿಲ್ಲ' ಎಂದು ಎಚ್ಚರಿಸಿದ್ದಾರೆ.
ಏಪ್ರಿಲ್ 14ರಂದು ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತಿ ಗಣತಿ ವರದಿ ಪ್ರತಿಪಕ್ಷಗಳು ಮಾಡುತ್ತಿರುವ ಅರೋಪಗಳಿಗೆ ಸಮರ್ಪಕ ಉತ್ತರವನ್ನು ನೀಡಲಿಲ್ಲ. ಗುರುವಾರ ಸಚಿವ ಸಂಪುಟ ಸಭೆಯಲ್ಲಿ ವರದಿಯ ಬಗ್ಗೆ ಚರ್ಚೆ ನಡೆಸಲಾಗುವುದು. ಅದಾದ ಬಳಿಕವೇ ಪ್ರತಿಪಕ್ಷಗಳು ಕೇಳುತ್ತಿರುವ ಪ್ರಶ್ನೆಗಳಿಗೆ ಉತ್ತರಿಸುತ್ತೇನೆ ಎಂದು ಹೇಳಿದರು.












Click it and Unblock the Notifications