ಜಾತಿಗಣತಿ ವರದಿ; ಬಿಜೆಪಿಗೆ ಸವಾಲು ಹಾಕಿದ ಸಿದ್ದರಾಮಯ್ಯ
ಬೆಂಗಳೂರು, ಆಗಸ್ಟ್ 29; "ಜಾತಿ ಗಣತಿ ವರದಿಯನ್ನು ಒಪ್ಪಿಕೊಳ್ಳುವುದಕ್ಕೆ ತಯಾರಿಲ್ಲದ ಬಿಜೆಪಿ ನಾಯಕರು, ಅದು ಸೋರಿಕೆ ಯಾಗಿದೆ, ವೈಜ್ಞಾನಿಕವಾಗಿಲ್ಲ ಎಂಬ ಕುಂಟು ನೆಪಗಳನ್ನು ಹೇಳುತ್ತಿದ್ದಾರೆ. ಸೋರಿಕೆ ಬಗ್ಗೆ ಖಚಿತ ಮಾಹಿತಿ ಮುಖ್ಯಮಂತ್ರಿಗಳ ಬಳಿ ಇದ್ದರೆ ಅದರ ಬಗ್ಗೆ ತನಿಖೆ ನಡೆಸಲಿ" ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.
ಭಾನುವಾರ ಸರಣಿ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತಿ ಗಣತಿ ವಿಚಾರವನ್ನು ಮುಂದಿಟ್ಟುಕೊಂಡು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿಯನ್ನು ನಡೆಸಿದ್ದಾರೆ. "ಜಾತಿ ಗಣತಿ ವರದಿಯನ್ನು ನಮ್ಮ ಪಕ್ಷದ ನಾಯಕರು ವಿರೋಧಿಸಿದ್ದರು ಎನ್ನುವುದು ಕಪೋಲ ಕಲ್ಪಿತ ಆರೋಪ. ಯಾರು? ಯಾವಾಗ? ವಿರೋಧಿಸಿದ್ದರು ಎನ್ನುವುದನ್ನು ಬಿಜೆಪಿ ನಾಯಕರು ಬಹಿರಂಗ ಪಡಿಸಬೇಕು" ಎಂದು ಬಿಜೆಪಿ ನಾಯಕರನ್ನು ಆಗ್ರಹಿಸಿದ್ದಾರೆ.
"ಜಾತಿಗಣತಿ ವರದಿಯನ್ನು ನಮ್ಮ ಸರ್ಕಾರದ ಅವಧಿಯಲ್ಲಿಯೇ ಪೂರ್ಣಗೊಳಿಸಿ ಸ್ವೀಕರಿಸಬೇಕೆಂಬುದು ನನ್ನ ಉದ್ದೇಶವಾಗಿತ್ತು. ಅಂಕಿಅಂಶಗಳ ಮಾಹಿತಿ ಸಂಗ್ರಹವಾಗಿದ್ದರೂ ವಿಶ್ಲೇಷಣೆಯ ಕೆಲಸ ಪೂರ್ಣಗೊಂಡಿರದ ಕಾರಣ ಸಾಧ್ಯವಾಗಿರಲಿಲ್ಲ" ಎಂದು ಸಿದ್ದರಾಮಯ್ಯ ಟ್ವೀಟ್ನಲ್ಲಿ ತಿಳಿಸಿದ್ದಾರೆ.
"ಸೋರಿಕೆ ಆಗಿದೆಯೆನ್ನಲಾದ ಜಾತಿಗಣತಿ ವರದಿಯ ಅಂಶಗಳೇ ಮೂಲ ವರದಿಯಲ್ಲಿ ಇವೆ ಎನ್ನುವುದನ್ನು ಬಿಜೆಪಿ ಅಷ್ಟೊಂದು ವಿಶ್ವಾಸದಿಂದ ಹೇಗೆ ಹೇಳಲು ಸಾಧ್ಯ?. ಸರ್ಕಾರದ ಬಳಿ ಇರಬೇಕಾದ ಮೂಲ ವರದಿ ಬಿಜೆಪಿಯ ರಾಜ್ಯ ಕಚೇರಿಯಲ್ಲಿದೆಯೇ?. ಮುಖ್ಯಮಂತ್ರಿಗಳ ಕಚೇರಿಯಿಂದ ಅದು ಸೋರಿಕೆಯಾಗಿದೆಯೇ?" ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.
|
ಅದೇನು ತನಿಖಾ ವರದಿಯೇ?
'ಜಾತಿ ಗಣತಿ ವರದಿ ಸೋರಿಕೆಯಾಗಿದ್ದರೂ ಅದರ ಪಾವಿತ್ರ್ಯವೇನು ಕಳೆದುಹೋಗುವುದಿಲ್ಲ. ಸೋರಿಕೆಯಿಂದಾಗಿ ಅಪರಾಧಿಗಳು ಓಡಿಹೋಗಲು ಅದೇನು ಅಪರಾಧದ ತನಿಖಾ ವರದಿಯೇ?. ಅದೊಂದು ಸಮೀಕ್ಷಾ ವರದಿ. ಪರಿಶೀಲನೆ ನಡೆಯಬೇಕಾಗಿರುವುದು ಸಮೀಕ್ಷೆಯ ವಿಶ್ವಾಸಾರ್ಹತೆ ಬಗ್ಗೆ. ಅದರ ಬಗ್ಗೆ ಚರ್ಚೆ ನಡೆಯಲಿ' ಎಂದು ಸಿದ್ದರಾಮಯ್ಯ ಟ್ವೀಟ್ನಲ್ಲಿ ತಿಳಿಸಿದ್ದಾರೆ.

ಸಿದ್ದರಾಮಯ್ಯ ಟ್ವೀಟ್
'ಹಿಂದುಳಿದ ಜಾತಿಗಳನ್ನು ಗುರುತಿಸುವ ಅಧಿಕಾರವನ್ನು ಮರಳಿ ರಾಜ್ಯ ಸರ್ಕಾರಕ್ಕೆ ನೀಡುವ ಸಂವಿಧಾನದ 127ನೇ ತಿದ್ದುಪಡಿ ಮಸೂದೆಯನ್ನು ಸಂಸತ್ ನಲ್ಲಿ ನಮ್ಮ ಪಕ್ಷದ ಸದಸ್ಯರು ಬೆಂಬಲಿಸಿರುವುದು ನಿಜ. ಆ ತಿದ್ದುಪಡಿ ಕಾಂಗ್ರೆಸ್ ಪಕ್ಷದ ಬೇಡಿಕೆಯ ಒತ್ತಡದಿಂದಾಗಿಯೇ ಮಂಡಿಸಲಾಗಿತ್ತು' ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ನಮ್ಮ ಪಕ್ಷ ವಿರೋಧಿಸಿತ್ತು
'ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಸಾಂವಿಧಾನಿಕ ಸ್ಥಾನಮಾನ ನೀಡುವ ನೆಪದಲ್ಲಿ ಸಂವಿಧಾನಕ್ಕೆ 123ನೇ ತಿದ್ದುಪಡಿ ಮಾಡಿ ಹಿಂದುಳಿದ ಜಾತಿಗಳನ್ನು ಗುರುತಿಸುವ ರಾಜ್ಯದ ಅಧಿಕಾರವನ್ನು ಕಿತ್ತುಕೊಳ್ಳುವ ಕೇಂದ್ರದ ಬಿಜೆಪಿ ಸರ್ಕಾರದ ಹುನ್ನಾರವನ್ನು 2017ರಲ್ಲಿಯೇ ನಮ್ಮ ಪಕ್ಷ ವಿರೋಧಿಸಿತ್ತು' ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಸಂವಿಧಾನದ 123ನೇ ತಿದ್ದುಪಡಿ ಮೂಲಕ ಹಿಂದುಳಿದ ಜಾತಿಗಳನ್ನು ಗುರುತಿಸುವ ಅಧಿಕಾರವನ್ನು ರಾಜ್ಯಗಳಿಂದ ಕಿತ್ತುಕೊಂಡದ್ದನ್ನು @BJP4India ಸರ್ಕಾರ
— Siddaramaiah (@siddaramaiah) August 29, 2021
127ನೇ ತಿದ್ದುಪಡಿ ಮೂಲಕ ಮರಳಿ ನೀಡಿದೆ.
ಇದೇನು ಹಿಂದುಳಿದ ಜಾತಿಗಳಿಗೆ ಮಾಡಿರುವ ಉಪಕಾರ ಅಲ್ಲ. ಮಾಡಿರುವ ತಪ್ಪನ್ನು ಒಪ್ಪಿ ಸರಿಪಡಿಸಿದೆಯಷ್ಟೆ.
8/8#CastCensus
ಬಿಜೆಪಿ ಮಾಡಿರುವ ಉಪಕಾರವಲ್ಲ
'ಸಂವಿಧಾನದ 123ನೇ ತಿದ್ದುಪಡಿ ಮೂಲಕ ಹಿಂದುಳಿದ ಜಾತಿಗಳನ್ನು ಗುರುತಿಸುವ ಅಧಿಕಾರವನ್ನು ರಾಜ್ಯಗಳಿಂದ ಕಿತ್ತುಕೊಂಡದ್ದನ್ನು ಬಿಜೆಪಿ
ಸರ್ಕಾರ 127ನೇ ತಿದ್ದುಪಡಿ ಮೂಲಕ ಮರಳಿ ನೀಡಿದೆ. ಇದೇನು ಹಿಂದುಳಿದ ಜಾತಿಗಳಿಗೆ ಮಾಡಿರುವ ಉಪಕಾರ ಅಲ್ಲ. ಮಾಡಿರುವ ತಪ್ಪನ್ನು ಒಪ್ಪಿ ಸರಿಪಡಿಸಿದೆಯಷ್ಟೆ' ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಸಿದ್ದರಾಮಯ್ಯ ಕನಸಿನ ಕೂಸು
ಜಾತಿ ಗಣತಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕನಸಿನ ಕೂಸು. ಮುಖ್ಯಮಂತ್ರಿಯಾಗುವ ಮೊದಲು ಸಹ ಅವರು ಈ ಬಗ್ಗೆ ಮಾತನಾಡುತ್ತಿದ್ದರು. ಮುಖ್ಯಮಂತ್ರಿಯಾದ ಬಳಿಕ ಜಾತಿಗಣತಿಗೆ ಚಾಲನೆ ನೀಡಿದ್ದರು. ಸಿದ್ದರಾಮಯ್ಯ ಅಧಿಕಾರದಲ್ಲಿ ಇದ್ದಾಗಲೇ ವರದಿ ಬಹಿರಂಗವಾಗಿದ್ದರೆ ರಾಜ್ಯದ ಜಾತಿ ಲೆಕ್ಕಾಚಾರವೇ ಬುಡಮೇಲಾಗುತ್ತಿತ್ತು. ಆದರೆ ಅದು ಬಿಡುಗಡೆ ಆಗಲಿಲ್ಲ. ಸರ್ಕಾರ ಜಾತಿಗಣತಿಗಾಗಿಯೇ 158.47 ಕೋಟಿ ರೂ. ಖರ್ಚು ಮಾಡಿದೆ.












Click it and Unblock the Notifications