Karnataka Caste Census Report: ಈ ಗ್ಯಾಂಗ್ ನಿಂದ ಜಾತಿಗಣತಿ ವರದಿ ರೆಡಿಯಾಗಿದೆ: ಬಹಿರಂಗ ಪಡಿಸಿದ ಆರ್ ಅಶೋಕ್
ಬೆಂಗಳೂರು, ಏಪ್ರಿಲ್ 18: ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯನವರ ಗ್ಯಾಂಗ್ ಎಲ್ಲೋ ಕುಳಿತು ಸಿದ್ಧಪಡಿಸಿದ ಜಾತಿ ಗಣತಿ ವರದಿಯನ್ನು ಯಾರೂ ಒಪ್ಪಬೇಕಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸಿದ್ದರಾಮಯ್ಯನವರ ಗ್ಯಾಂಗ್ ಎಲ್ಲೋ ಕುಳಿತು ಸಿದ್ಧಪಡಿಸಿದ ವರದಿಯನ್ನು ಯಾರೂ ಒಪ್ಪಬೇಕಿಲ್ಲ. 10 ವರ್ಷದಲ್ಲಿ ಒಂದು ಕೋಟಿ ಮಕ್ಕಳು ಹುಟ್ಟಿದ್ದಾರೆ ಎಂದುಕೊಂಡರೆ, ಇವರನ್ನು ಯಾವ ವರ್ಗಕ್ಕೆ ಸೇರಿಸುತ್ತಾರೆ? ಹೊಸ ಪೀಳಿಗೆಯ ಭವಿಷ್ಯವೇನು? ಮೀಸಲಾತಿಯ ಮಾನದಂಡವೇನು? ಎಂದು ಪ್ರಶ್ನಿಸಿದರು.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಆರ್ ಅಶೋಕ್ ಅವರು, ವರದಿಯಲ್ಲಿ ಸಹಿ ಹಾಕದೆ ಕಾಂತರಾಜು ಓಡಿಹೋಗಿದ್ದಾರೆ. ಜಯಪ್ರಕಾಶ್ ಹೆಗ್ಡೆ ವರದಿಯನ್ನು ತೆಗೆದು ನೋಡಿದಾಗ ಅದು ಅಸಲಿ ಅಲ್ಲ, ಕೇವಲ ಒಂದು ಪ್ರತಿ ಎಂದು ತಿಳಿದುಬಂದಿದೆ. ಈ ಬಗ್ಗೆ ಹೆಗ್ಡೆ ಪತ್ರ ಬರೆದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ವ್ಯರ್ಥವಾಗಿದೆ. ಸಚಿವರು ಅಭಿಪ್ರಾಯ ನೀಡುವಂತೆ ಸೂಚಿಸಲಾಗಿದೆ. ಸಂಪುಟದ ಸಚಿವರನ್ನೇ ಜಾತಿಯ ಬಲೆಯಲ್ಲಿ ಸಿಕ್ಕಿ ಹಾಕಿಸಿ ಅಪಮಾನ ಮಾಡಲಾಗುತ್ತಿದೆ. ನವೆಂಬರ್ನಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕಾಗಿದ್ದು, ಆ ಸಮಯದಲ್ಲಿ ಇದನ್ನು ಬಳಸಿಕೊಳ್ಳಲಾಗುತ್ತದೆ. ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವಿದ್ದಾಗ ಸಿಎಂ ಸಿದ್ದರಾಮಯ್ಯ ಬಾಯಿಗೆ ಹೊಲಿಗೆ ಹಾಕಿಕೊಂಡಿದ್ದರು. ಆಗಲೇ ಜಾತಿ ಗಣತಿ ವರದಿ ಬಿಡುಗಡೆ ಮಾಡಬಹುದಿತ್ತು ಎಂದು ಹೇಳಿದರು.

ಶ್ರೇಷ್ಠವಾದ ಸಿದ್ದಗಂಗಾ ಮಠಕ್ಕೆ ಸಮೀಕ್ಷೆ ಮಾಡುವವರು ಹೋಗಿಲ್ಲ. ದಾವಣಗೆರೆಯ ಶಾಸಕರು ಕೂಡ ಅದನ್ನೇ ಹೇಳಿದ್ದಾರೆ. ಜಾತಿ ಗಣತಿ ಮಾಡಿರುವ ವಿಧಾನವೇ ಅವೈಜ್ಞಾನಿಕವಾಗಿದೆ. ಸಮೀಕ್ಷೆಯಲ್ಲಿ ಶಾಲಾ ಮಕ್ಕಳನ್ನು ಬಳಸಲಾಗಿದೆ. ಒಂದೇ ಕಡೆ ಕುಳಿತು ದತ್ತಾಂಶ ಬರೆಯಲಾಗಿದೆ. ಇದಕ್ಕಾಗಿ ಖರ್ಚು ಮಾಡಿದ 165 ಕೋಟಿ ರೂ. ಯಾರ ಜೇಬಿಗೆ ಹೋಗಿದೆ? ಮುಸ್ಲಿಮರು ಬಹುಸಂಖ್ಯಾತರೆಂದು ವರದಿಯಲ್ಲಿ ತಿಳಿದುಬಂದಿರುವುದರಿಂದ ಅವರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ಕೂಡಲೇ ತೆಗೆದುಹಾಕಬೇಕು ಎಂದು ಒತ್ತಾಯ ಮಾಡಿದರು.
ಎಲ್ಲ ಸಮುದಾಯದವರು ಜಾತಿ ಗಣತಿ ವರದಿ ವಿರುದ್ಧ ಪ್ರತಿಭಟನೆ ಮಾಡಲಿದ್ದಾರೆ. ಎಲ್ಲರಿಗೂ ಇದರಲ್ಲಿ ನಂಬಿಕೆ ಹೋಗಿದೆ. ಕಾಂಗ್ರೆಸ್ನ ಶಾಸಕರು ಯಾವುದಾದರೂ ಒಂದು ಕಡೆ ನಿಲ್ಲಬೇಕು. ಕೆಲವು ಶಾಸಕರು ಈ ವರದಿ ಒಪ್ಪಿಲ್ಲ. ಸಂಕಟ ಬಂದಾಗ ವೆಂಕಟರಮಣ ಎಂಬಂತೆ, ಸಿಎಂ ಸಿದ್ದರಾಮಯ್ಯ ಜಾತಿ ಗಣತಿ ವರದಿಯನ್ನು ಹಿಡಿದುಕೊಂಡಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಜಾತಿ ಗಣತಿ ವರದಿ ಬಗ್ಗೆ ʼನಾಳೆ ಬಾʼ ಎಂಬ ಸ್ಥಿತಿ ಇದೆ. ಯಾವುದನ್ನೂ ನಿರ್ಧಾರ ಮಾಡಲು ಸರ್ಕಾರಕ್ಕೆ ಸಾಧ್ಯವಾಗಿಲ್ಲ. ನನ್ನ ಸೀಟು ಉಳಿದರೆ ಸಾಕು ಎಂಬ ಉದ್ದೇಶದಿಂದ ಸಿಎಂ ಸಿದ್ದರಾಮಯ್ಯ ವರದಿ ಬಿಡುಗಡೆ ಮಾಡಿದ್ದಾರೆ. ಈ ಮೂಲಕ ಜಾತಿಗಳನ್ನು ಒಡೆದುಹಾಕಿದ್ದಾರೆ. ಸಂಪುಟದಲ್ಲಿ ಕೈ ಮಿಲಾಯಿಸುವ ಮಟ್ಟಿಗೆ ಜಗಳವಾಗಿದೆ ಎಂದರು.
ಸಿಇಟಿ ಪರೀಕ್ಷೆಯಲ್ಲಿ ಬ್ರಾಹ್ಮಣರಿಗೆ ಜನಿವಾರಕ್ಕೆ ಅವಕಾಶ ನೀಡದ ಮೂಲಕ ಸರ್ಕಾರ ಅಪಮಾನ ಮಾಡಿದೆ. ಹಿಂದೂಗಳ ಬಗ್ಗೆ ಎಷ್ಟು ಕೋಪ ಇದೆ ಎಂಬುದು ಗೊತ್ತಾಗುತ್ತದೆ. ಬ್ರಾಹ್ಮಣರು ಮಾತ್ರವಲ್ಲದೆ, ಮರಾಠರು, ವೈಶ್ಯ ಸಮಯದಾಯದವರು ಕೂಡ ಜನಿವಾರ ಹಾಕುತ್ತಾರೆ. ಈ ಎಲ್ಲ ಸಮುದಾಯಗಳಿಗೆ ಅಪಮಾನ ಮಾಡಲಾಗಿದೆ. ಮುಸ್ಲಿಮ್ ಹುಡುಗಿಯರು ಹಿಜಾಬ್ ಹಾಕಲು ಅವಕಾಶ ನೀಡಲಾಗಿದೆ. ಸಿಎಂ ಸಿದ್ದರಾಮಯ್ಯ ಕ್ಷಮೆ ಕೇಳಿ, ಅಧಿಕಾರಿಗಳನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿದರು. ವಕ್ಫ್ ಹೆಸರಲ್ಲಿ ಜನರ ಜಮೀನುಗಳನ್ನು ನುಂಗಿ ಹಾಕಲಾಗಿದೆ. ಮಂಗಳೂರಿನಲ್ಲಿ ಸಿದ್ದರಾಮಯ್ಯ ಪ್ರಾಯೋಜಿತ ಪ್ರತಿಭಟನೆ ನಡೆದಿದೆ. ಮುಸ್ಲಿಮರಿಗೆ ಪ್ರತ್ಯೇಕ ಕಾನೂನು ನೀಡಲು ಸಾಧ್ಯವಿಲ್ಲ. ನೆಲದ ಕಾನೂನನ್ನು ಎಲ್ಲರೂ ಪಾಲಿಸಬೇಕು ಎಂದರು.












Click it and Unblock the Notifications