Cauvery Dispute: ಕಾವೇರಿ ನೀರು ಹಂಚಿಕೆ ಬಗ್ಗೆ ಬೊಮ್ಮಾಯಿ, ಪಾಟೀಲ್ ನೀಡಿದ ಸಲಹೆಗಳು
ಬೆಂಗಳೂರು, ಆಗಸ್ಟ್ 31: ರಾಜ್ಯ ಸರ್ಕಾರ ಕೂಡಲೇ ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ನಿಲ್ಲಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಬೇಕು. ರಾಜ್ಯದ ಸಂಕಷ್ಟ ಕುರಿತು ತೀವ್ರವಾದಂತಹ ಮನವರಿಕೆ ಮಾಡುವ ಮೂಲಕ ಕಾನೂನು ಹೋರಾಟ ಮಾಡಬೇಕೆಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು.
ಗುರುವಾರ ಕಾವೇರಿ ನೀರು ಹಂಚಿಕೆ ವಿವಾದ ಕುರಿತು ಟ್ವೀಟ್ ಮಾಡಿರುವ ಅವರು, ರಾಜ್ಯ ಸರ್ಕಾರ ಕಾವೇರಿ ನೀರು ಹಂಚಿಕೆ ವಿಷಯದಲ್ಲಿ ಮೊದಲಿನಿಂದಲೂ ಎಡವುತ್ತಾ ಬಂದಿದೆ. ಈಗಾಗಲೇ ಸಿಡಬ್ಲುಎಂಎ ಆದೇಶದಂತೆ 10 ಸಾವಿರ ಕ್ಯೂಸೆಕ್ಸ್ ನಂತೆ ಸುಮಾರು 15 ಟಿಎಂಸಿ ನೀರು ಬಿಟ್ಟಿದೆ. ಆದರೂ, ಅದರ ವಿರುದ್ಧ ಯಾವುದೇ ಕಾನೂನಾತ್ಮಕ ಕ್ರಮ ತೆಗೆದುಕೊಳ್ಳಲಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಈಗ ಸಿಡಬ್ಲುಎಂಎ ಸೂಚನೆ ಮೇರೆಗೆ 5000 ಕ್ಯುಸೆಕ್ಸ್ ನೀರು ಬಿಡಲು ಪ್ರಾರಂಭ ಮಾಡಿದ ಮೇಲೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕಾನೂನು ತಜ್ಞರ ಜೊತೆ ಚರ್ಚೆ ಮಾಡುವುದರಲ್ಲಿ ಯಾವ ಅರ್ಥ ಇದೆ ಎಂದು ಬೊಮ್ಮಾಯಿ ಖಾರವಾಗಿ ಪ್ರಶ್ನೆ ಮಾಡಿದರು.
ಈ ಹಿಂದಿನ ಆದೇಶದ ವಿರುದ್ಧ ಈಗಾಗಲೇ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಬೇಕಾಗಿತ್ತು. ಅದನ್ನು ಸಹ ರಾಜ್ಯ ಸರ್ಕಾರ ಮಾಡಿಲ್ಲ. ಈಗ ನೀರು ಬಿಡುತ್ತಿರುವುದರಿಂದ ಕಾನೂನು ಹೋರಾಟಕ್ಕೆ ಅರ್ಥವಿಲ್ಲ. ಕೂಡಲೇ ನೀರು ನಿಲ್ಲಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿ ತೀವ್ರವಾದಂತಹ ಮನವರಿಕೆ ಮಾಡುವ ಮೂಲಕ ಕಾನೂನು ಹೋರಾಟ ಮಾಡಬೇಕೆಂದು ಅವರು ಸಲಹೆ ನೀಡಿದರು.
ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರವು ಕರ್ನಾಟಕ ರಾಜ್ಯದ ಕುಡಿಯುವ ನೀರು ಹಾಗೂ ರೈತರ ಹಿತಾಸಕ್ತಿ ಕಾಪಾಡಲು ವಿಫಲವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಕಾವೇರಿ ನೀರು ಹಂಚಿಕೆಯಲ್ಲಿ ಸಂಕಷ್ಟ ಸೂತ್ರ ಅಗತ್ಯ: ಎಂಬಿಪಾ
ಕರ್ನಾಟಕ ಮತ್ತು ತಮಿಳುನಾಡು ನಡುವೆ ಕಾವೇರಿ ನೀರು ಹಂಚಿಕೆ ಸಂಬಂಧವಾಗಿ ಬರಗಾಲದ ವರ್ಷಗಳಿಗೆ ಅನ್ವಯವಾಗುವಂತೆ ಸಂಕಷ್ಟ ಸೂತ್ರವನ್ನು ವಸ್ತುನಿಷ್ಠ ನೆಲೆಯಲ್ಲಿ ಮಾಡಬೇಕು. ಇದೊಂದೇ ನಿಜವಾದ ಪರಿಹಾರ ಎಂದು ಕೈಗಾರಿಕೆ ಸಚಿವ ಎಂಬಿ ಪಾಟೀಲ್ ತಿಳಿಸಿದರು.
ಇತ್ತೀಚೆಗೆ ಸುದ್ದಿಗಾರರ ಜೊತೆಗೆ ಪ್ರಶ್ನೆಗಳಿಗೆ ಉತ್ತರಿಸಿದ್ದ ಸಚಿವ ಎಂಬಿ ಪಾಟೀಲ್ ಅವರು, ಇದು ನನ್ನ ವೈಯಕ್ತಿಕ ಅಭಿಪ್ರಾಯ. ಹಿಂದೆ ನಾನೂ ನೀರಾವರಿ ಸಚಿವನಾಗಿದ್ದ ಅನುಭವದ ಮೇಲೆ ಈ ಸಲಹೆ ನೀಡುತ್ತಿದ್ದೇನೆ ಎಂದರು.
ತಮಿಳುನಾಡಿನ ಕೋರಿಕೆ ಪ್ರಕಾರ ಈಗ ನೀರು ಬಿಡುವುದು ಅಸಾಧ್ಯ. ಇದನ್ನು ಮನವರಿಕೆ ಮಾಡುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಯಾವ ರೀತಿಯ ತೀರ್ಮಾನ ಮಾಡಬೇಕು ಎನ್ನುವುದಕ್ಕೆ ಯಾವುದೇ ಆಧಾರ ಇಲ್ಲ. ಹೀಗಾಗಿಯೇ ಎರಡೂ ರಾಜ್ಯಗಳ ತಜ್ಞರು ಸೇರಿಕೊಂಡು ಪರಿಹಾರ ಕಂಡುಕೊಳ್ಳುವ ಅಗತ್ಯವಿದೆ.
ಹಿಂದೆ ರಾಜ್ಯವು ಪ್ರತಿ ವರ್ಷ ತಮಿಳುನಾಡಿಗೆ 192 ಟಿಎಂಸಿ ನೀರು ಬಿಡುಗಡೆ ಮಾಡಬೇಕಿತ್ತು. ಆದರೆ, ಆಗ ತುಂಬಾ ಕಾನೂನು ಹೋರಾಟ ಮಾಡಿದ್ದರಿಂದ ಇದರಲ್ಲಿ 14 ಟಿಎಂಸಿಯಷ್ಟು ಹೊರೆ ನಮಗೆ ಕಡಿಮೆಯಾಗಿ, ಹೆಚ್ಚುವರಿಯಾಗಿ ಬೆಂಗಳೂರಿಗೆ 4.5 ಟಿಎಂಸಿ ಸಿಕ್ಕಿತು. ಇದರಿಂದಾಗಿ ನಾವು ಈಗ ಹೇಳುತ್ತಿರುವ ಮೇಕೆದಾಟು ಯೋಜನೆಯ ವಿಚಾರಕ್ಕೆ ಬಲ ಬಂದಿತು ಎಂದು ಅವರು ವಿವರಿಸಿದರು.
ರಾಜ್ಯದ ಪರವಾಗಿ ಹಿಂದೆ ನಾರಿಮನ್ ಅವರಂತಹ ಪರಿಣತರು ವಾದ ಮಂಡಿಸುತ್ತಿದ್ದರು. ಈಗ ಅವರಿಗೆ ವೃದ್ಧಾಪ್ಯದ ಸಮಸ್ಯೆಗಳಿವೆ. ಆದ್ದರಿಂದ ಬೇರೆ ವಕೀಲರು ರಾಜ್ಯವನ್ನು ಪ್ರತಿನಿಧಿಸುತ್ತಿದ್ದು, ಇವರು ಸಹ ಸಮರ್ಥರಾಗಿದ್ದಾರೆ ಎಂದು ತಿಳಿಸಿದರು.












Click it and Unblock the Notifications