ರಾಜಕೀಯ ದುರುದ್ದೇಶಕ್ಕೆ ಬಲಿಯಾಗಬೇಡಿ: ಪ್ರತಿಭಟನಾಕಾರರಲ್ಲಿ ಸಿಎಂ ಸಿದ್ದರಾಮಯ್ಯ ಮನವಿ
ಬೆಂಗಳೂರು, ಸೆಪ್ಟೆಂಬರ್ 30: ಕರ್ನಾಟಕದಲ್ಲಿ ಕಾವೇರಿ ವಿವಾದ ತಾರಕ್ಕೇರಿದೆ. ಶುಕ್ರವಾರ ಕರ್ನಾಟಕ ಬಂದ್ ಆಗಿದ್ದು, ರಾಜ್ಯಾದ್ಯಂತ ಹೋರಾಟಗಳು ಮುಂದುವರಿದಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೋರಾಟಗಾರಿಗೆ ಮನವಿ ಮಾಡಿಕೊಂಡಿದ್ದಾರೆ.
ಮಳೆ ಕೊರತೆಯಿಂದಾಗಿ ಉದ್ಭವವಾಗಿರುವ ಕಾವೇರಿ ನೀರು ಹಂಚಿಕೆ ವಿವಾದವನ್ನು ರಾಜ್ಯದ ರೈತರ ಹಿತರಕ್ಷಣೆಗೆ ಅಡ್ಡಿಯಾಗದಂತೆ ಬಗೆಹರಿಸಲು ನಮ್ಮ ಸರ್ಕಾರ ಬದ್ದವಾಗಿದೆ. ಈ ವಿವಾದ ಈಗ ನ್ಯಾಯಾಂಗದ ಅಂಗಳದಲ್ಲಿರುವುದರಿಂದ ಸಂವಿಧಾನಕ್ಕೆ ಬದ್ದವಾಗಿರುವ ಸರ್ಕಾರ ಜವಾಬ್ದಾರಿಯುತವಾಗಿ ವರ್ತಿಸಬೇಕಾಗುತ್ತದೆ.

ಈವರೆಗಿನ ಎಲ್ಲ ಪಕ್ಷಗಳ ಸರ್ಕಾರಗಳು ಅನಿವಾರ್ಯವಾಗಿ ನ್ಯಾಯಾಲಯದ ಆದೇಶ ಪಾಲನೆ ಮಾಡಿರುವ ಇತಿಹಾಸ ಕೂಡಾ ನಮ್ಮ ಕಣ್ಣ ಮುಂದಿದೆ. ಈಗಿನ ವಿವಾದವನ್ನು ರಾಜ್ಯದ ಹಿತ ಮತ್ತು ನ್ಯಾಯಾಂಗದ ಗೌರವಕ್ಕೆ ಧಕ್ಕೆಯಾಗದಂತೆ ಸೂಕ್ಷ್ಮವಾಗಿ ನಿರ್ವಹಿಸಬೇಕಾಗಿದೆ. ರಾಜ್ಯ ಸರ್ಕಾರ ಆ ಪ್ರಯತ್ನದಲ್ಲಿದೆ.
ನಾವು ಈಗಾಗಲೇ ಕಾನೂನು ಮತ್ತು ನೀರಾವರಿ ತಜ್ಞರ ಜೊತೆ ನಿರಂತರ ಸಂಪರ್ಕದಲ್ಲಿದ್ದು ಅವರ ಸಲಹೆ ಮೇರೆಗೆ ಮುಂದಿನ ನಿರ್ಧಾರವನ್ನು ಕೈಗೊಳ್ಳುತ್ತೇವೆ. ರೈತರ ಆಕ್ರೋಶವನ್ನು ನಾನು ಅರ್ಥಮಾಡಿಕೊಳ್ಳಬಲ್ಲೆ.
ಬಂದ್-ಪ್ರತಿಭಟನೆ ಮಾಡುವ ರೈತರು ಮತ್ತು ಕನ್ನಡ ಹೋರಾಟಗಾರರ ಹಕ್ಕನ್ನೂ ನಾನು ಗೌರವಿಸುತ್ತೇನೆ. ಇದೇ ವೇಳೆ ಕೆಲವು ರಾಜಕೀಯ ನಾಯಕರು ತಪ್ಪು ಮಾಹಿತಿ ಮೂಲಕ ಜನರನ್ನು ಪ್ರಚೋದಿಸುವ ಕೆಲಸವನ್ನೂ ಮಾಡುತ್ತಿರುವುದೂ ಸರ್ಕಾರದ ಗಮನಕ್ಕೆ ಬಂದಿದೆ.
ನಮ್ಮ ಪ್ರಜ್ಞಾವಂತ ರೈತ ಮತ್ತು ಕನ್ನಡ ಹೋರಾಟಗಾರರು ಇಂತಹ ರಾಜಕೀಯ ದುರುದ್ದೇಶಪೂರಿತ ಅಪಪ್ರಚಾರಕ್ಕೆ ಬಲಿಯಾಗದೆ, ಬಂದ್ -ಪ್ರತಿಭಟನೆಯನ್ನು ಸಾರ್ವಜನಿಕರಿಗೆ ತೊಂದರೆಯಾಗದಂತೆ ಶಾಂತಿಯುತವಾಗಿ ನಡೆಸಬೇಕೆಂದು ಕೋರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಸಾರ್ವಜನಿಕರಿಗೆ ಸಿಎಂ ಅಭಿನಂದನೆ
ಶುಕ್ರವಾರ ಕರ್ನಾಟಕ ಬಂದ್ ಬಳಿಕ ಸಿಎಂ ಸಿದ್ದರಾಮಯ್ಯ ಸಾರ್ವಜನಿಕರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ರಾಜ್ಯದಲ್ಲಿ ಶಾಂತಿಯುತ ಬಂದ್ ನಡೆದಿದ್ದು, ಇದಕ್ಕೆ ಸಹಕರಿಸಿದ ಸಾರ್ವಜನಿಕರನ್ನು ಮತ್ತು ಸಂಘ ಸಂಸ್ಥೆಗಳನ್ನು ಸಿಎಮ ಅಭಿನಂದಿಸಿದರು.
ಹಾಗೇ ಎಲ್ಲೂ ಅಹಿತಕರ ಘಟನೆ ನಡೆಯದಂತೆ ಕಾನೂನು ಸುವ್ಯವಸ್ಥೆ ಕಾಪಾಡಿದ ಅಧಿಕಾರಿಗಳನ್ನು ಕೂಡ ಅಭಿನಂದಿಸಿದ್ದಾರೆ. ಮತ್ತೊಂದು ಕಡೆ ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರು, ಮಾಜಿ ಅಡ್ವೊಕೇಟ್ ಜನರಲ್ ಇಂದಿನ ಸಭೆಯಲ್ಲಿ ಭಾಗವಹಿಸಿದ್ದರು ಎಂದು ಮಾಹಿತಿ ನೀಡಿದ್ದಾರೆ. ಹಾಗೇ ಅವರ ಅನುಭವದ ಆಧಾರದ ಮೇಲೆ ಕೆಲ ಅಭಿಪ್ರಾಯ, ಸಲಹೆಗಳನ್ನು ನೀಡಿದ್ದಾರೆ. ಅವರ ಸಲಹೆ ಪರಿಗಣಿಸಿ ಕಾವೇರಿ ವಿವಾದದ ಬಗ್ಗೆ ಮುಂದಿನ ತೀರ್ಮಾನ ನಾವು ತೆಗೆದುಕೊಳ್ಳುತ್ತೇವೆ ಎಂದು ಸಿಎಂ ತಿಳಿಸಿದ್ದಾರೆ.












Click it and Unblock the Notifications