Cauvery Dispute; ಪ್ರಹ್ಲಾದ್ ಜೋಶಿ ಭೇಟಿಯಾದ ಡಿಕೆಶಿ
ಬೆಂಗಳೂರು, ಸೆಪ್ಟೆಂಬರ್ 20; ತಮಿಳುನಾಡಿಗೆ ಪ್ರತಿದಿ 5 ಸಾವಿರ ಕ್ಯುಸೆಕ್ ನೀರು ಹರಿಸಬೇಕು ಎಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶಿಸಿದೆ. ಬರಗಾಲ ಎದುರಿಸುತ್ತಿರುವ ಕರ್ನಾಟಕ ಮುಂದಿನ ಕಾನೂನು ಹೋರಾಟದ ಕುರಿತು ಚರ್ಚಿಸಲು ನವದೆಹಲಿಯಲ್ಲಿ ಬುಧವಾರ ಸಭೆಯನ್ನು ನಡೆಸಲಿದೆ.
ಉಪ ಮುಖ್ಯಮಂತ್ರಿ, ಜಲಸಂಪನ್ಮೂಲ ಖಾತೆ ಸಚಿವ ಡಿ. ಕೆ. ಶಿವಕುಮಾರ್ ಮಂಗಳವಾರ ಮಧ್ಯಾಹ್ನವೇ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾತ್ರಿ ದೆಹಲಿಗೆ ತೆರಳಿದರು. ವಿವಿಧ ಸಚಿವರು ಸಹ ದೆಹಲಿಯಲ್ಲಿದ್ದಾರೆ.

ಮಂಗಳವಾರ ರಾತ್ರಿ ಡಿ. ಕೆ. ಶಿವಕುಮಾರ್ ಧಾರವಾಡ ಸಂಸದ, ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಶಿ ಭೇಟಿ ಮಾಡಿದರು. ಕಾವೇರಿ ನೀರು ಹರಿಸುವ ವಿಚಾರದಲ್ಲಿನ ಬೆಳವಣಿಗೆಗಳ ಕುರಿತು ಚರ್ಚೆಯನ್ನು ನಡೆಸಿದರು. ಟಿ. ಬಿ. ಜಯಚಂದ್ರ, ಸಂಸದ ಡಿ.ಕೆ. ಸುರೇಶ್, ಜಿ. ಸಿ. ಚಂದ್ರಶೇಖರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಬುಧವಾರ ಸಭೆ; ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್, ವಿವಿಧ ಖಾತೆಗಳ ಸಚಿವರು ನವದೆಹಲಿಯ ಖಾಸಗಿ ಹೋಟೆಲ್ನಲ್ಲಿ ಕಾವೇರಿ ವಿವಾದ ಕಾನೂನು ಹೋರಾಟದ ಕುರಿತು ಕಾನೂನು ತಜ್ಞರ ಜೊತೆ ಸಭೆಯನ್ನು ನಡೆಸಲಿದ್ದಾರೆ.
ತಮಿಳುನಾಡಿಗೆ ಪ್ರತಿದಿ 5 ಸಾವಿರ ಕ್ಯುಸೆಕ್ ನೀರು ಹರಿಸಬೇಕು ಎಂದು ಆದೇಶಿಸಿದ ಬಳಿಕ ನಡೆಯುತ್ತಿರುವ ಸಭೆ ಇದಾಗಿದೆ. ಈ ಸಭೆಗೆ ಕರ್ನಾಟಕವನ್ನು ಪ್ರತಿನಿಧಿಸುವ ಸಂಸದರು, ರಾಜ್ಯಸಭಾ ಸದಸ್ಯರನ್ನು ಆಹ್ವಾನಿಸಲಾಗಿದೆ. ಕರ್ನಾಟಕ ಮೂಲದ ಕೇಂದ್ರ ಸಚಿವರು ಸಹ ಪಾಲ್ಗೊಳ್ಳುವ ನಿರೀಕ್ಷೆ ಇದೆ.
ಈಗಾಗಲೇ ರಾಜ್ಯದಲ್ಲಿ ನೈಋತ್ಯ ಮುಂಗಾರು ಮಳೆ ಕೈಕೊಟ್ಟು ಕಾವೇರಿ ಕಣಿವೆ ಜಲಾಶಯಗಳು ತುಂಬಿಲ್ಲ. ಕರ್ನಾಟಕ ಸರ್ಕಾರ ಈಗಾಗಲೇ ಸುಪ್ರೀಂಕೋರ್ಟ್ಗೆ ತಮಿಳುನಾಡಿಗೆ ನೀರು ಹರಿಸಲು ಸಾಧ್ಯವಿಲ್ಲ ಎಂದು ಪ್ರಮಾಣ ಪತ್ರ ಸಲ್ಲಿಸಿದೆ. ಇಂತಹ ಸಮಯದಲ್ಲೇ ಮತ್ತೆ ಕಾವೇರಿ ನೀರು ಹರಿಸಲು ಆದೇಶಿಸಲಾಗಿದೆ.
ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಸ್ಥಗಿತಗೊಳಿಸಿ ಸುಪ್ರೀಂಕೋರ್ಟ್ನಲ್ಲಿ ಕಾನೂನು ಹೋರಾಟ ನಡೆಸಲು ಕರ್ನಾಟಕ ಸರ್ಕಾರ ಸಿದ್ಧವಾಗಿದೆ. ಸರ್ವಪಕ್ಷಗಳ ಸಭೆಯಲ್ಲಿ ಸರ್ಕಾರದ ಈ ತೀರ್ಮಾನಕ್ಕೆ ವಿರೋಧ ಪಕ್ಷಗಳು ಸಹ ಬೆಂಬಲ ನೀಡಿವೆ.
ಸುಪ್ರೀಂಕೋರ್ಟ್ನಲ್ಲಿ ಹೇಗೆ ವಾದ ಮಂಡಿಸಬೇಕು?, ವಾಸ್ತವ ಸ್ಥಿತಿಯನ್ನು ಹೇಗೆ ಮನವರಿಕೆ ಮಾಡಿಕೊಡಬೇಕು? ಎಂದು ಕಾನೂನು ತಜ್ಞರ ಜೊತೆಗಿನ ಸಭೆಯಲ್ಲಿ ಚರ್ಚಿಸಿ, ತೀರ್ಮಾನ ಮಾಡಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಭೇಟಿಗೆ ಸಮಯ ಸಿಕ್ಕರೆ ಸಂಸದರ ನಿಯೋಗದ ಜೊತೆ ಅವರನ್ನು ಸಹ ಭೇಟಿ ಮಾಡುವ ಸಾಧ್ಯತೆ ಇದೆ.
ತಮಿಳುನಾಡು ಕಾವೇರಿ ನೀರು ಹರಿಸಲು ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಬೇಕು ಎಂದು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಕೆ ಮಾಡಿದೆ. ಈ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್ ತ್ರಿ ಸದಸ್ಯ ಪೀಠ ರಚನೆ ಮಾಡಿದೆ. ಸೆಪ್ಟೆಂಬರ್ 21ರ ಗುರುವಾರ ಕೋರ್ಟ್ನಲ್ಲಿ ಈ ಅರ್ಜಿಯ ವಿಚಾರಣೆ ನಡೆಯಲಿದೆ. ಆದ್ದರಿಂದ ಬುಧವಾರ ಕಾನೂನು ತಜ್ಞರ ಜೊತೆ ನಡೆಯಲಿರುವ ಸಭೆ ಮಹತ್ವ ಪಡೆದುಕೊಂಡಿದೆ.
ಸೋಮವಾರ ಮಂಡ್ಯದ ಸಂಸದೆ ಸುಮಲತಾ ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಕಾವತ್ ಭೇಟಿ ಮಾಡಿದ್ದರು. ಕಾವೇರಿ ಕೊಳ್ಳದ ಪರಿಸ್ಥಿತಿ ವಿವರಿಸಿ, ರೈತರ ಹಿತ ಕಾಪಾಡಬೇಕು ಎಂದು ಮನವಿ ಮಾಡಿದ್ದರು.
ಸಚಿವರ ಭೇಟಿ ಬಳಿಕ ಟ್ವೀಟ್ ಮಾಡಿದ್ದ ಅವರು, 'ರಾಜ್ಯ ಸರಕಾರ ಕೂಡ ಮಾನ್ಯ ಕೇಂದ್ರ ಸಚಿವರನ್ನು ಮತ್ತು ಸಂಬಂಧಿಸಿದ ಪ್ರಾಧಿಕಾರದ ಅಧ್ಯಕ್ಷರನ್ನು ಖುದ್ದಾಗಿ ಭೇಟಿ ಮಾಡಿ, ಭೀಕರವಾಗಿರುವ ವಸ್ತುಸ್ಥಿತಿಯನ್ನು ಮನವರಿಕೆ ಮಾಡಿಕೊಡಲಿ. ತಮಿಳು ನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಿ, ನಾವೆಲ್ಲರೂ ನಮ್ಮ ರೈತರ ಪರವಾಗಿ ನಿಲ್ಲೋಣ' ಎಂದು ಹೇಳಿದ್ದರು.
ಕರ್ನಾಟಕ ಸರ್ಕಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಹೆಚ್ಚುತ್ತಿರುವ ಮತ್ತು ವಿಸ್ತರಿಸುತ್ತಿರುವ ಬರವನ್ನು ಗಮನಿಸಿ, ಕುಡಿಯುವ ನೀರಿನ ಅಗತ್ಯತೆ, ನೀರಾವರಿ ಅಗತ್ಯತೆ ಹಿನ್ನಲೆಯಲ್ಲಿ ತಮಿಳುನಾಡಿಗೆ ನೀರನ್ನು ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿತ್ತು.
ಆದರೆ ಸೋಮವಾರ ನಡೆದ ಪ್ರಾಧಿಕಾರದ ಸಭೆಯಲ್ಲಿ ತಮಿಳುನಾಡು ಸರ್ಕಾರ ಪ್ರತಿದಿನ 6,500 ಕ್ಯುಸೆಕ್ ಬಾಕಿಯನ್ನು ಒಳಗೊಂಡು ಮುಂದಿನ 15 ದಿನ ಒಟ್ಟು 12,500 ಕ್ಯುಸೆಕ್ ನೀರನ್ನು ಹರಿಸಬೇಕು ಎಂದು ವಾದ ಮಂಡಿಸಿತು. ಅಂತಿಮವಾಗಿ ಪ್ರಾಧಿಕಾರ ಮುಂದಿನ 15 ದಿನ ಪ್ರತಿದಿನ 5 ಸಾವಿರ ಕ್ಯುಸೆಕ್ ನೀರು ಹರಿಸಿ ಎಂದು ಕರ್ನಾಟಕಕ್ಕೆ ಆದೇಶ ನೀಡಿತ್ತು.












Click it and Unblock the Notifications