ಈ ಸಮಸ್ಯೆಗಳ ಪರಿಹಾರಕ್ಕೂ ಸಿದ್ದರಾಮಯ್ಯರಿಂದ ಮೋದಿಗೆ ಮೊರೆ!
ಬೆಂಗಳೂರು, ಸೆಪ್ಟೆಂಬರ್ 21; ಕರ್ನಾಟಕದ ಪ್ರತಿಪಕ್ಷ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.'ತಮ್ಮ ಜವಾಬ್ದಾರಿ, ಅಧಿಕಾರವನ್ನು ಮರೆತ ಸಿದ್ದರಾಮಯ್ಯರವರು ಮಾತೆತ್ತಿದರೆ ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಪ್ರವೇಶಿಸಬೇಕು ಎನ್ನುತ್ತಾರೆ' ಎಂದು ಹೇಳಿದೆ.
ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಧ್ಯ ಪ್ರವೇಶ ಮಾಡಬೇಕು ಎಂಬ ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದೆ. ಎರಡು ದಿನಗಳ ಹಿಂದೆ ಎಲ್ಲದಕ್ಕೂ ಕೇಂದ್ರ ಸರ್ಕಾರದ ಕಡೆ ಕೈ ತೋರಿಸುವುದು ಬಿಡಿ ಎಂದು ಬಿಜೆಪಿ ಸಿದ್ದರಾಮಯ್ಯಗೆ ಸಲಹೆ ನೀಡಿತ್ತು.

ಗುರುವಾರ ಟ್ವೀಟ್ ಮಾಡಿರುವ ಬಿಜೆಪಿ, 'ಮುಂದಿನ ದಿನಗಳಲ್ಲಿ ಈ ಸಮಸ್ಯೆಗಳ ಪರಿಹಾರಕ್ಕೂ ಅವರು ಮೋದಿಯವರ ಮೊರೆ ಹೋದರೂ ಅಚ್ಚರಿಯಲ್ಲ' ಎಂದು ಕಾಂಗ್ರೆಸ್ ಪಕ್ಷದ ಕೆಲವು ಆಂತರಿಕ ಸಮಸ್ಯೆಗಳನ್ನು ಪಟ್ಟಿ ಮಾಡಿದೆ.
ಬಿಜೆಪಿಯ ಟ್ವೀಟ್
* ಬಿಕೆ ಹರಿಪ್ರಸಾದ್ ಅವರು ಸಿಎಂ ಬದಲಿಸುವ ಮಾತನಾಡುತ್ತಿದ್ದಾರೆ; ಪ್ರಧಾನಿ ಮೋದಿಯವರು ಮಧ್ಯಪ್ರವೇಶಿಸಬೇಕು..!
* ಮೂರು ಡಿಸಿಎಂ ಸ್ಥಾನಕ್ಕಾಗಿ ಕಿತ್ತಾಟ ಜೋರಾಗಿದೆ; ಪ್ರಧಾನಿ ಮೋದಿಯವರು ಮಧ್ಯಪ್ರವೇಶಿಸಬೇಕು..!
* ರಾಜ್ಯ ಸರ್ಕಾರದ ವೈಫಲ್ಯದಿಂದ ಕರ್ನಾಟಕದಲ್ಲಿ ರೈತರ ಅತ್ಮಹತ್ಯೆ ತೀವ್ರಗೊಂಡಿದೆ. ಪ್ರಧಾನಿ ಮೋದಿಯವರು ಮಧ್ಯಪ್ರವೇಶಿಸಬೇಕು..!
* ಶ್ಯಾಡೋ ಸಿಎಂ ಹಾವಳಿ ಹೆಚ್ಚಾಗಿ, ರಾಜ್ಯದ ಸಚಿವರು ಹಾಗೂ ಅಧಿಕಾರಿಗಳು ಬೇಸತ್ತಿದ್ದಾರೆ; ಪ್ರಧಾನಿ ಮೋದಿಯವರು ಮಧ್ಯಪ್ರವೇಶಿಸಬೇಕು..!
* ರಾಜ್ಯದಲ್ಲಿ ಕಮಿಷನ್, ಕಲೆಕ್ಷನ್, ವರ್ಗಾವಣೆ ದಂಧೆ ಹೆಚ್ಚಾಗಿದೆ ; ಪ್ರಧಾನಿ ಮೋದಿಯವರು ಮಧ್ಯಪ್ರವೇಶಿಸಬೇಕು..!
'ಪ್ರಧಾನಿ ಮೋದಿಯವರಿಗೆ ದೇಶ ಮುನ್ನೆಡೆಸುವ ಜವಾಬ್ದಾರಿ ಇದೆ. ನಿಮಗೂ ರಾಜ್ಯದ ಜವಾಬ್ದಾರಿ ಇದೆ. ಮೊದಲು ನಿಮ್ಮ ಒಳ ಜಗಳದ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಿ, ರಾಜ್ಯದ ಜನರ ಹಿತ ಕಾಪಾಡಲು ಮಾಡಬೇಕಾದ ಕೆಲಸಗಳನ್ನು ಮಾಡಿ, ಮುಖ್ಯಮಂತ್ರಿ ಸ್ಥಾನದ ಜವಾಬ್ದಾರಿಯನ್ನು ನಿರ್ವಹಿಸಿ' ಎಂದು ಕರ್ನಾಟಕ ಬಿಜೆಪಿ ಸಲಹೆ ಮಾಡಿದೆ.
ನೀರು ಹರಿಸಲು ಆದೇಶ; ತಮಿಳುನಾಡು ಕಾವೇರಿ ನೀರು ಹರಿಸುವಂತೆ ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಕೆ ಮಾಡಿತ್ತು. ಗುರುವಾರ ಈ ಅರ್ಜಿಯ ವಿಚಾರಣೆ ನಡೆಯಿತು.
ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ. ಆರ್. ಗವಾಯಿ, ನ್ಯಾಯಮೂರ್ತಿ ಪಿ. ಎಸ್. ನರಸಿಂಹ ಮತ್ತು ನ್ಯಾಯಮೂರ್ತಿ ಬಿ. ಕೆ. ಮಿಶ್ರಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯುಸೆಕ್ ನೀರು ಹರಿಸಬೇಕು ಎಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸೋಮವಾರ ನೀಡಿದ್ದ ಆದೇಶ ಎತ್ತಿ ಹಿಡಿದಿದೆ.
ಮುಂದಿನ 15 ದಿನ ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರು ಹರಿಸಿ ಎಂದು ಆದೇಶಿಸಿದೆ. ಈಗಾಗಲೇ ಬರ ಪರಿಸ್ಥಿತಿ ಕಾರಣ ಕಾವೇರಿ ಕೊಳ್ಳದ ಜಲಾಶಯಗಳಲ್ಲಿ ನೀರಿಲ್ಲದೇ ಸಂಕಷ್ಟಕ್ಕೆ ಸಿಲುಕಿರುವ ಕರ್ನಾಟಕಕ್ಕೆ ಈ ಆದೇಶ ಮತ್ತಷ್ಟು ಸಂಕಟ ತಂದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಟ್ವೀಟ್ ಮಾಡಿ, 'ಕನ್ನಡ ನಾಡು, ನುಡಿ, ಜಲ, ಸಂಸ್ಕೃತಿ ಕಾಪಾಡುವ ವಿಚಾರದಲ್ಲಿ ಪಕ್ಷ ರಾಜಕಾರಣ ಪಕ್ಕಕ್ಕಿಟ್ಟು ನಾವೆಲ್ಲಾ ಒಂದು ಧ್ವನಿಯಾಗಿ ಗಟ್ಟಿ ನಿಲ್ಲಬೇಕು.
ಸಂಕಷ್ಟ ಸೂತ್ರ ಸಿದ್ಧವಾಗದೇ ಇರುವುದರಿಂದ ಕಾವೇರಿ ನೀರು ಹಂಚಿಕೆ ಎನ್ನುವುದು ನಮ್ಮ ರಾಜ್ಯಕ್ಕೆ ಕ್ಲಿಷ್ಟಕರವಾಗಿ ಪರಿಣಮಿಸಿದೆ. ನೀರು ಬಿಡಬಾರದು ಎನ್ನುವ ಪ್ರಶ್ನೆ ಅಲ್ಲ. ಬಿಡಲು ನಮ್ಮಲ್ಲಿ ನೀರೇ ಇಲ್ಲ' ಎಂದು ಹೇಳಿದ್ದರು.
'ಕುಡಿಯುವ ನೀರಿಗೆ 33 ಟಿಎಂಸಿ, ಬೆಳೆ ರಕ್ಷಣೆಗೆ 70 ಟಿಎಂಸಿ, ಕೈಗಾರಿಕೆಗಳಿಗೆ 3 ಟಿಎಂಸಿ ಸೇರಿ ಒಟ್ಟು 106 ಟಿಎಂಸಿ ನೀರು ನಮಗೆ ಅನಿವಾರ್ಯವಾಗಿ ಬೇಕಿದೆ. ಈಗ ನಮ್ಮ ಬಳಿ ಇರುವುದು 53 ಟಿಎಂಸಿ ನೀರು ಮಾತ್ರ. ಹೀಗಾಗಿ ತಮಿಳುನಾಡಿಗೆ ಬಿಡಲು ನೀರೇ ಇಲ್ಲ. ನಮಗೆ ಆಗಸ್ಟ್ ಬಳಿಕ ಮಳೆ ಬರಲ್ಲ. ತಮಿಳುನಾಡಿಗೆ ಆಗಸ್ಟ್ ಬಳಿಕ ಮಳೆ ಬರುತ್ತದೆ. ಅಲ್ಲಿ ಅಂತರ್ಜಲ ಕೂಡ ಹೆಚ್ಚಿದೆ. ಆದ್ದರಿಂದ ನಾವು ಹೆಚ್ಚು ಸಂಕಷ್ಟದಲ್ಲಿದ್ದೇವೆ' ಎಂದು ಟ್ವೀಟ್ ಮಾಡಿದ್ದರು.












Click it and Unblock the Notifications