ವಿಧಾನಸಭೆಯಲ್ಲಿ ಕೈಗೊಂಡ ನಿರ್ಣಯ ಬಹಳ ಮುಖ್ಯ: ಸಿದ್ದರಾಮಯ್ಯ
ಬೆಂಗಳೂರು, ಸೆಪ್ಟೆಂಬರ್ 28: ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಕರೆದಿದ್ದ ಸರ್ವಪಕ್ಷ ಸಭೆಯಲ್ಲಿ ತಮಿಳುನಾಡಿಗೆ ಕಾವೇರಿ ನೀರು ಹರಿಸದಿರುವ ನಿರ್ಧಾರಕ್ಕೆ ಬದ್ಧರಾಗಿರೋಣ. ಈ ತೀರ್ಮಾನವನ್ನು ಬಿಜೆಪಿ ಬೆಂಬಲಿಸುತ್ತದೆ ಎಂದು ವಿಧಾನಸೌಧದಲ್ಲಿ ಬುಧವಾರ ಬಿಜೆಪಿ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಿಳಿಸಿದ್ದಾರೆ.
ಬಿಜೆಪಿಯಿಂದ ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದಗೌಡ, ಪ್ರತಾಪ ಸಿಂಹ ಸೇರಿದಂತೆ ಅನೇಕರು ಸರ್ವಪಕ್ಷ ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಇತ್ತ ಜೆಡಿಎಸ್ ಮುಖಂಡರು ಸಹ ತಮಿಳುನಾಡಿಗೆ ನೀರು ಹರಿಸದಂತೆ ಸಲಹೆ ಮಾಡಿದ್ದಾರೆ. ಸದನದಲ್ಲಿ ಕಳೆದ ಶುಕ್ರವಾರ ಕೈಗೊಂಡ ನಿರ್ಣಯಕ್ಕೆ ಸರಕಾರ ಬದ್ಧವಾಗಿರಬೇಕು ಎಂದು ಒಮ್ಮತಾಭಿಪ್ರಾಯದಿಂದ ತಿಳಿಸಿದ್ದಾರೆ.

ಇದೇ ವೇಳೆ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ಮಾತನಾಡಿ, ಸಂವಿಧಾನಕ್ಕಿಂತ ಜನರ ಪ್ರಾಣ ಉಳಿಸುವುದು ಮುಖ್ಯ. ಆದ್ದರಿಂದ ರಾಜ್ಯದ ಜನರ ಹಿತ ಬಲಿ ಕೊಟ್ಟು, ಯಾವ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸಬಾರದು ಎಂದು ಆಗ್ರಹಿಸಿದ್ದಾರೆ.
ಸುಪ್ರೀಂ ಕೋರ್ಟ್ ಹದಿನೆಂಟು ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡಬೇಕು ಎಂದು ಸೂಚಿಸಿದ್ದ ಹಿನ್ನೆಲೆಯಲ್ಲಿ ಮುಖ್ಯಮಮ್ತ್ರಿ ಸಿದ್ದರಾಮಯ್ಯ ಸರ್ವಪಕ್ಷಗಳ ಸಭೆ ಕರೆದಿದ್ದರು. ಕಳೆದ ಬಾರಿ ನಡೆದ ಸಭೆಯಲ್ಲಿ ಬಿಜೆಪಿ ಮುಖಂಡರು ಯಾರೂ ಭಾಗವಹಿಸಿರಲಿಲ್ಲ.
ನಾವು ವಿಧಾನಸಭೆಯಲ್ಲಿ ಕೈಗೊಂಡ ನಿರ್ಣಯ ಬಹಳ ಮುಖ್ಯ ಎಂದು ಸರ್ವಪಕ್ಷಗಳ ಸಭೆಯಲ್ಲಿ ಹೇಳುವ ಮೂಲಕ ತಮಿಳುನಾಡಿಗೆ ನೀರು ಹರಿಸುವುದಿಲ್ಲ ಎಂಬ ಸಂಗತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.











Click it and Unblock the Notifications