ತಮಿಳುನಾಡಿಗೆ ನೀರು ಬಿಡುವುದೋ ಬೇಡವೋ?: ಮತ್ತೆ ಸರ್ವಪಕ್ಷಗಳ ಸಭೆ
ಬೆಂಗಳೂರು, ಸೆಪ್ಟೆಂಬರ್ 28: ಕಾವೇರಿ ನೀರು ಹಂಚಿಕೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೆ ಸರ್ವಪಕ್ಷಗಳ ಸಭೆ ಕರೆದಿದ್ದಾರೆ. ಶುಕ್ರವಾರಕ್ಕೆ ವಿಚಾರಣೆ ಮುಂದೂಡುವುದಕ್ಕೆ ಮುಂಚೆ ತಮಿಳುನಾಡಿಗೆ ಹದಿನೆಂಟು ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು.
ಸರಕಾರದ ಮೂಲಗಳು ಒನ್ ಇಂಡಿಯಾಗೆ ನೀಡಿದ ಮಾಹಿತಿ ಪ್ರಕಾರ, ವಿಧಾನಸಭೆಯಲ್ಲಿ ನಿರ್ಣಯ ತೆಗೆದುಕೊಂಡಿರುವುದರಿಂದ ತಮಿಳುನಾಡಿಗೆ ನೀರು ಹರಿಸಲು ಕರ್ನಾಟಕದಿಂದ ಸಾಧ್ಯವಿಲ್ಲ. ಶಾಸಕರು ಜನರನ್ನು ಪ್ರತಿನಿಧಿಸುತ್ತಾರೆ, ನಿರ್ಣಯವನ್ನು ಬದಲಿಸದ ಹೊರತು ರಾಜ್ಯದಿಂದ ನೀರು ಬಿಡುಗಡೆ ಸಾಧ್ಯವಿಲ್ಲ.[ಈಗಿನ ಪರಿಸ್ಥಿತಿಯಲ್ಲಿ ನೀರು ಬಿಡೋಕೆ ಆಗಲ್ಲ: ಸಿದ್ದರಾಮಯ್ಯ]
ಸುಪ್ರೀಂ ಕೋರ್ಟ್ ನೀರು ಬಿಡುಗಡೆ ಮಾಡುವಂತೆ ಸೂಚಿಸಿದ ಕೂಡಲೆ ಅದು ತಕ್ಷಣವೇ ಕಾನೂನು ಅಥವಾ ಆದೇಶ ಆಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸರ್ವಪಕ್ಷಗಳ ಸಭೆ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಕೇಂದ್ರ ಸರಕಾರದ ಮಧ್ಯಸ್ಥಿಕೆಯಲ್ಲಿ ದೆಹಲಿಯಲ್ಲಿ ನಡೆಯುವ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅನಾರೋಗ್ಯದಿಂದ ಬಳಲುತ್ತಿದ್ದು, ಅಲ್ಲಿನ ಲೋಕೋಪಯೋಗಿ ಸಚಿವ ಇ.ಕೆ.ಪಳನಿಸ್ವಾಮಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಕೇಂದ್ರ ಸಚಿವೆ ಉಮಾಭಾರತಿ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಸಭೆ ನಡೆಯಲಿದೆ.[ಆದೇಶ ಪಾಲಿಸುವಂತೆ ಸಿದ್ದರಾಮಯ್ಯಗೆ ಹೇಳಿ : ಸುಪ್ರೀಂ]
ಬೆಂಗಳೂರಿನಲ್ಲಿ ನಿಷೇಧಾಜ್ಞೆ ಮುಂದುವರಿದಿದ್ದು, ಇದರಿಂದ ಸಾಮಾನ್ಯ ಜನಜೀವನಕ್ಕೆ ಯಾವುದೇ ತೊಂದರೆಯಾಗುವುದಿಲ್ಲ. ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಹೇರಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.