ಮೋದಿ ಹಾಗೂ ದೇವೇಗೌಡರಿಗೆ ಥ್ಯಾಂಕ್ಸ್ ಎಂದ ಕರ್ನಾಟಕ
ಬೆಂಗಳೂರು, ಅಕ್ಟೋಬರ್ 03: ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟಿನಿಂದ ಸೆಪ್ಟೆಂಬರ್ 30ರಂದು ಬಂದ ಆದೇಶದ ಬಗ್ಗೆ ಚರ್ಚೆ ನಡೆಸಲು ಸೋಮವಾರ(ಅಕ್ಟೋಬರ್ 03) ವಿಶೇಷ ಆಧಿವೇಶನ ನಡೆಸಲಾಗಿದೆ. ಸದನದಲ್ಲಿ ಪ್ರಧಾನಿ ಮೋದಿ ಹಾಗೂ ಮಾಜಿ ಪ್ರಧಾನಿ ದೇವೇಗೌಡ ಅವರಿಗೆ ಧನ್ಯವಾದಗಳನ್ನು ಸಲ್ಲಿಸಲಾಗಿದೆ.
ಕಾವೇರಿ ನದಿ ನೀರು ಹಂಚಿಕೆ ವಿಷಯವಾಗಿ ನಮ್ಮ ನಿರ್ಣಯ ಅಚಲವಾಗಿದ್ದು, ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ವಿರೋಧ ವ್ಯಕ್ತಪಡಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಅವರು ವಿಷಯ ಪ್ರಸ್ತಾಪಿಸಿದರು. [ಕಾವೇರಿ ನಿರ್ವಹಣಾ ಮಂಡಳಿ ರಚನೆ ವಿರೋಧಿಸಿದ ಕೇಂದ್ರ]

ಇಡೀ ಸದನ ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರಿಗೆ ಧನ್ಯವಾದ ಅರ್ಪಿಸುತ್ತದೆ. ದೇವೇಗೌಡರ ಜೀವ ನಮಗೆ ಮುಖ್ಯ. ಅವರನ್ನು ಒಂದು ಪಕ್ಷಕ್ಕೆ ಸೀಮಿತಗೊಳಿಸುವುದು ಬೇಡ. ಪಕ್ಷಾತೀತವಾಗಿ ಅವರನ್ನು ಕಾಣಬೇಕಿದೆ ಎಂದು ಆರೋಗ್ಯ ಸಚಿವ ರಮೇಶ್ ಕುಮಾರ್ ಅವರು ಸದನದಲ್ಲಿ ಹೇಳಿದರು.
ಈ ನಡುವೆ ಬೆಳಗಾವಿಯಲ್ಲಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಪ್ರತಿಕ್ರಿಯಿಸಿ, ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿಯಿಂದ ಕಾವೇರಿ ವಿಚಾರದಲ್ಲಿ ಗೊಂದಲ ಉಂಟಾಗಿತ್ತು.ಕೇಂದ್ರ ಸರ್ಕಾರದ ಮಧ್ಯ ಪ್ರವೇಶದಿಂದ ಪರಿಸ್ಥಿತಿ ಸರಿಯಾಗಲಿದೆ. ಬಿಜೆಪಿಯತ್ತ ಬೊಟ್ಟು ಮಾಡುವುದನ್ನು ಕಾಂಗ್ರೆಸ್ ಸರ್ಕಾರ ಮೊದಲು ಬಿಡಲಿ ಎಂದಿದ್ದಾರೆ.












Click it and Unblock the Notifications