ತಮಿಳುನಾಡಿಗೆ ನೀರು ಹರಿಸಲು ಮೇಲುಸ್ತುವಾರಿ ಸಮಿತಿ ಆದೇಶ
ಬೆಂಗಳೂರು, ಸೆಪ್ಟೆಂಬರ್ 19 : ಕರ್ನಾಟಕ ತಮಿಳುನಾಡಿಗೆ 10 ದಿನಗಳ ಕಾಲ 3 ಸಾವಿರ ಕ್ಯೂಸೆಕ್ ನೀರು ಹರಿಸಬೇಕು ಎಂದು ಕಾವೇರಿ ಮೇಲುಸ್ತುವಾರಿ ಸಮಿತಿ ಆದೇಶ ನೀಡಿದೆ.
ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಅರವಿಂದ್ ಜಾಧವ್ ಅವರು ಈ ಆದೇಶಕ್ಕೆ ವಿರೋಧ ವ್ಯಕ್ತಪಡಿಸಿದರು.
ಹಿಂದಿನ ಸುದ್ದಿ : ಭೋಜನ ವಿರಾಮದ ಬಳಿಕ ಕಾವೇರಿ ಮೇಲುಸ್ತುವಾರಿ ಸಮಿತಿ ಸಭೆ ಮತ್ತೆ ಆರಂಭವಾಗಿದೆ. ತಮಿಳುನಾಡು ನೀರು ಹರಿಸಲು ಬೇಡಿಕೆ ಇಟ್ಟಿದ್ದು, ಕರ್ನಾಟಕ ಮತ್ತು ತಮಿಳುನಾಡಿನ ಮುಖ್ಯ ಕಾರ್ಯದರ್ಶಿಗಳು ನೀರಿನ ಹಂಚಿಕೆ ಕುರಿತು ಮಾತುಕತೆ ನಡೆಸುತ್ತಿದೆ.
ಹಿಂದಿನ ಸುದ್ದಿ : ನವದೆಹಲಿಯ ಶ್ರಮಶಕ್ತಿ ಭವನದಲ್ಲಿ ಕೇಂದ್ರ ಜಲಸಂಪನ್ಮೂಲ ಸಚಿವಾಲಯ ಕಾರ್ಯದರ್ಶಿ ಶಶಿಶೇಖರ್ ನೇತೃತ್ವದಲ್ಲಿ ನಡೆಯುತ್ತಿರುವ ಕಾವೇರಿ ಮೇಲುಸ್ತುವಾರಿ ಸಮಿತಿ ಸಭೆಯನ್ನು ಭೋಜನ ವಿರಾಮದ ಕಾರಣ ಸ್ಥಗಿತಗೊಳಿಸಲಾಗಿದೆ. 3.30ರ ನಂತರ ಸಭೆ ಮತ್ತೆ ಮುಂದುವರೆಯಲಿದೆ.
ಹಿಂದಿನ ಸುದ್ದಿ : ನವದೆಹಲಿಯಲ್ಲಿ ಕಾವೇರಿ ಮೇಲುಸ್ತುವಾರಿ ಸಮಿತಿ ಸಭೆ ಆರಂಭವಾಗಿದೆ. ಕಾವೇರಿ ನದಿ ನೀರಿನ ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಇಂದು ನ್ಯಾಯ ಸಿಗುವ ವಿಶ್ವಾಸವಿದೆ. ಸಭೆ ಹಿನ್ನಲೆಯಲ್ಲಿ ಬೆಂಗಳೂರು, ಮಂಡ್ಯದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
ಸೋಮವಾರ ಬೆಳಗ್ಗೆ 11.30ಕ್ಕೆ ನವದೆಹಲಿಯ ಶ್ರಮಶಕ್ತಿ ಭವನದಲ್ಲಿ ಕೇಂದ್ರ ಜಲಸಂಪನ್ಮೂಲ ಸಚಿವಾಲಯ ಕಾರ್ಯದರ್ಶಿ ಶಶಿಶೇಖರ್ ನೇತೃತ್ವದಲ್ಲಿ ಕಾವೇರಿ ಮೇಲುಸ್ತುವಾರಿ ಸಮಿತಿ ಸಭೆ ಆರಂಭವಾಗಿದೆ. ಕರ್ನಾಟಕ ಸರ್ಕಾರದ ಮುಖ್ಯಕಾರ್ಯದರ್ಶಿ ಅರವಿಂದ ಜಾಧವ್ ಅವರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ.[ಕಾವೇರಿ ವಿವಾದ : ಪಕ್ಷ, ಸರ್ಕಾರದ ನಡುವೆ ಹೊಂದಾಣಿಕೆ ಇಲ್ಲ?]
ಮೇಲುಸ್ತುವಾರಿ ಸಮಿತಿ ಸಭೆಯಲ್ಲಿ ಕರ್ನಾಟಕ, ತಮಿಳುನಾಡು, ಕೇರಳ ಮತ್ತು ಪುದುಚೇರಿ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು ಪಾಲ್ಗೊಂಡಿದ್ದಾರೆ. ಇಂದಿನ ಸಭೆಯಲ್ಲಿ ಕರ್ನಾಟಕ ಸುಪ್ರೀಂಕೋರ್ಟ್ ಆದೇಶದಂತೆ ನೀರು ಹರಿಸಿದ್ದೇವೆ ಎಂದು ಸಮಿತಿಗೆ ಮಾಹಿತಿ ನೀಡಲಿದೆ. [ಕರ್ನಾಟಕದ ವಾದಕ್ಕೆ ಮನ್ನಣೆ ನೀಡುತ್ತದೆಯೇ ಮೇಲುಸ್ತುವಾರಿ ಸಮಿತಿ?]
'ಕಾವೇರಿ ನದಿ ನೀರು ಹಂಚಿಕೆಯಲ್ಲಿ ಈ ಬಾರಿಯೂ ರಾಜ್ಯಕ್ಕೆ ಅನ್ಯಾಯವಾದರೆ ಸಹಿಸುವುದಿಲ್ಲ. ರೈತರಿಗೆ ಆಗಿರುವ ನಷ್ಟಕ್ಕೆ ಪರಿಹಾವನ್ನು ಸರ್ಕಾರ ನೀಡಬೇಕು. ಇಲ್ಲವಾದಲ್ಲಿ ರೈತರು ದಂಗೆ ಏಳುತ್ತಾರೆ' ಎಂದು ಕಾವೇರಿ ಹಿತರಕ್ಷಣಾ ಸಮಿತಿ ಅಧ್ಯಕ್ಷ ಜಿ.ಮಾದೇಗೌಡ ಹೇಳಿದರು.[ತಮಿಳುನಾಡಿಗೆ ನೀರು, ನೆಲಕಚ್ಚುತ್ತಿದೆ ಕೆಆರ್ ಎಸ್ ನೀರಿನ ಮಟ್ಟ]
ಮಂಡ್ಯದಲ್ಲಿ ಕಾವೇರಿ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಜಿ.ಮಾದೇಗೌಡ ಅವರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯುತ್ತಿದ್ದು, ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಸೇರಿದಂತೆ ಹಲವು ಮಠಾಧೀಶರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.
ಅತ್ತಿಬೆಲೆ ಚೆಕ್ ಪೋಸ್ಟ್ ಬಳಿ ಪ್ರತಿಭಟನೆ ನಡೆಸುತ್ತಿದ್ದ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಸೇರಿದಂತೆ ಹಲವರನ್ನು ಅವರನ್ನು ಪೊಲೀಸರು ವಶಕ್ಕೆ ಪಡೆದರು. ರಸ್ತೆ ಮಧ್ಯೆ ಕುಳಿತು ಪ್ರತಿಭಟನೆ ನಡೆಸುತ್ತಿದ್ದರಿಂದ ವಶಕ್ಕೆ ಪಡೆಯಲಾಗಿದೆ.