ಕಾವೇರಿ ವಿವಾದದ ತೀರ್ಪು : ಸರ್ಕಾರದ ಕಿವಿ ಹಿಂಡಿದ ಗೌಡರು
ಬೆಂಗಳೂರು, ಫೆಬ್ರವರಿ 27 : 'ಕಾವೇರಿ ನದಿ ನೀರಿನ ಹಂಚಿಕೆ ವಿವಾದದಲ್ಲಿ ಕರ್ನಾಟಕಕ್ಕೆ ಹೆಚ್ಚಿನ ಲಾಭವಾಗಿಲ್ಲ. ಸರ್ಕಾರ ತೀರ್ಪಿನ ಅಂಶಗಳನ್ನು ಅರ್ಥ ಮಾಡಿಕೊಳ್ಳದೇ ಸಂಭ್ರಮಿಸುತ್ತಿದೆ' ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದರು.
ಬೆಂಗಳೂರಿನಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, ಕಾವೇರಿ ವಿವಾದದ ಬಗ್ಗೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ಮಾತನಾಡಿದರು. ಫೆ.16ರಂದು ತೀರ್ಪು ಬಂದಾಗ ದೇವೇಗೌಡರು ಪ್ರತಿಕ್ರಿಯೆ ನೀಡಿರಲಿಲ್ಲ.
ಪತ್ರಿಕಾಗೋಷ್ಠಿಯ ಪ್ರಮುಖ ಅಂಶಗಳು
* ಕಾವೇರಿ ನದಿ ನೀರು ನಿರ್ವಹಣಾ ಮಂಡಳಿಯನ್ನು 6 ವಾರದಲ್ಲಿ ರಚನೆ ಮಾಡುವಂತೆ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ. ಇದನ್ನು ತಡೆಯಲು ಸರ್ಕಾರದ ನಡೆ ಏನು?

* ಕರ್ನಾಟಕದ ಕಾಂಗ್ರೆಸ್ ಸರ್ಕಾರ ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆ ಸರಿಯಾಗಿ ತಿಳಿದುಕೊಳ್ಳದೇ ನಮ್ಮ ಪರವಾಗಿ ತೀರ್ಪು ಬಂದಿದೆ ಎಂದು ಸಂಭ್ರಮಿಸುತ್ತಿದೆ.
* ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾವೇರಿ ನದಿ ನೀರು ನಿರ್ವಹಣಾ ಮಂಡಳಿ ರಚನೆ ಮಾಡುವಂತೆ ಮನವಿ ಸಲ್ಲಿಸಿದ್ದಾರೆ. ನಮ್ಮ ಸರ್ಕಾರ ಇದನ್ನು ತಡೆಯಲು ಯಾವುದೇ ಆಲೋಚನೆ ನಡೆಸಿಲ್ಲ.
* ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದ ನಾಯಕರು ಕಾವೇರಿ ನದಿ ನೀರಿನ ಪಾತ್ರದ ಜನರ ಹಿತದ ಬಗ್ಗೆ ಮಾತನಾಡುತ್ತಿಲ್ಲ. ಕಮಿಷನ್ ಸರ್ಕಾರದ ಆರೋಪ ಪ್ರತ್ಯಾರೋಪದಲ್ಲಿ ಬ್ಯುಸಿಯಾಗಿದ್ದಾರೆ.
* ಕರ್ನಾಟಕದಲ್ಲಿನ ಕಾಂಗ್ರೆಸ್ ಸರ್ಕಾರಕ್ಕೆ ಪಾಠ ಕಲಿಸಲು ಕೇಂದ್ರ ಕಾವೇರಿ ನದಿ ನೀರು ನಿರ್ವಹಣಾ ಮಂಡಳಿ ರಚನೆ ಮಾಡಿದರೆ ಅದಕ್ಕೆ ಯಾರು ಹೊಣೆ?
* ಕಾವೇರಿ ಭಾಗದ ಜನರ ಹಿತ ಕಾಪಾಡಲು ರಾಷ್ಟ್ರೀಯ ಪಕ್ಷಗಳು ತಗೆದುಕೊಳ್ಳುವ ನಿರ್ಧಾರ ನೋಡಿಕೊಂಡು ತಮ್ಮ ಪಕ್ಷದ ನಡೆ ಬಗ್ಗೆ ತಿಳಿಸುತ್ತೇನೆ ಎಂದು ದೇವೇಗೌಡರು ಹೇಳಿದರು.












Click it and Unblock the Notifications