DCM DK Shivakumar: ಅತ್ತಿಬೆಲೆ, ಸರ್ಜಾಪುರಕ್ಕೆ ಕಾವೇರಿ ನೀರು, ಮೆಟ್ರೋ: ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ
ಬೆಂಗಳೂರು, ಸೆಪ್ಟೆಂಬರ್ 25: ಅತ್ತಿಬೆಲೆ, ಸರ್ಜಾಪುರ ಭಾಗಕ್ಕೆ ಕಾವೇರಿ ನೀರು ಮತ್ತು ಮೆಟ್ರೋ ಯೋಜನೆ ವಿಸ್ತರಣೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಾಗ್ದಾನ ನೀಡಿದರು.
ಈ ಕುರಿತು ಆನೇಕಲ್ನಲ್ಲಿ ಜನತಾ ದರ್ಶನ ಕಾರ್ಯಕ್ರಮ ಉದ್ಘಾಟಿಸಿದ ನಂತರ ಮಾತನಾಡಿದ ಅವರು ಅತ್ತಿಬೆಲೆ ಮತ್ತು ಸರ್ಜಾಪುರ ಅಭಿವೃದ್ಧಿ ಹೊಂದುತ್ತಿದ್ದು, ಕೈಗಾರಿಕಾ ಪ್ರದೇಶಗಳಾಗಿ ಬೆಳವಣಿಗೆ ಕಾಣುತ್ತಿವೆ. ಈ ಭಾಗದ ಅಭಿವೃದ್ಧಿಗೆ ಕಾಂಗ್ರೆಸ್ ಪಕ್ಷ ಬದ್ದವಾಗಿದೆ. ಆನೇಕಲ್ಗೆ ಸ್ಟೇಡಿಯಂ ಬೇಕು ಎಂದು ಶಾಸಕರಾದ ಶಿವಣ್ಣ ಮನವಿ ಮಾಡಿದ್ದರು, ಅದರಂತೆ 10 ಕೋಟಿ ಅನುದಾನ ಮಂಜೂರು ಮಾಡಲಾಗುವುದು. ಮೂಲಸೌಕರ್ಯಗಳಿಗೆ ನಮ್ಮ ಸರ್ಕಾರದಲ್ಲಿ ಮೊದಲ ಆದ್ಯತೆ ಎಂದು ಹೇಳಿದರು.

ಜನತಾ ದರ್ಶನದಲ್ಲಿ ಸ್ವೀಕರಿಸಿರುವ ಎಲ್ಲಾ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಲಾಗುವುದು. ಬಗರ್ಹುಕುಂ, ಸ್ಮಶಾನ, ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಎಲ್ಲಾ ತೊಂದರೆಗಳನ್ನು ಜನತಾ ದರ್ಶನದ ಮೂಲಕ ಪ್ರತಿ ತಿಂಗಳು ಬಗೆಹರಿಸುತ್ತೇವೆ ಎಂದರು.
ಅನೇಕಲ್ನಲ್ಲಿ ತಹಸೀಲ್ದಾರ್ ನ್ಯಾಯಾಲಯ ಆಗಬೇಕು ಎಂದು ಮನವಿ ಮಾಡಿದ್ದಾರೆ, ಪ್ರತಿ ವಾರ ಇಲ್ಲಿಯೇ ಕೋರ್ಟ್ ನಡೆಸುವಂತೆ ಸೂಚನೆ ನೀಡಿದ್ದೇನೆ. 136 ಶಾಸಕರನ್ನು ಗೆಲ್ಲಿಸಿ ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತುಂಬಿದ್ದೀರಿ. ಅದಕ್ಕೆ ನಾವು ನಿಮ್ಮ ಋಣ ತೀರಿಸುತ್ತಿದ್ದೇವೆ. ಗ್ಯಾರಂಟಿ ಯೋಜನೆಗಳು ಎಲ್ಲರಿಗೂ ತಲುಪಿಸುವ ಜವಾಬ್ದಾರಿ ಜನರ ಮೇಲಿದೆ ಎಂದು ಹೇಳಿದರು.
ರಾಜ್ಯಕ್ಕೆ ಮಳೆ ಬೀಳಲಿ ಎಂದು ಎಲ್ಲರೂ ಪ್ರಾರ್ಥನೆ ಮಾಡಿ. ಕಾವೇರಿ ಪ್ರತಿಭಟನೆ ವೇಳೆ ಯಾವುದೇ ಅಹಿತಕರ ಘಟನೆಯಲ್ಲಿ ಜನರು ಭಾಗವಹಿಸಬಾರದು, ಶಾಂತಿಯುತವಾಗಿ ತಮ್ಮ ಆಗ್ರಹವನ್ನು ತಿಳಿಸಬೇಕು ಎಂದು ಮನವಿ ಮಾಡಿದರು. ಗೃಹಲಕ್ಷ್ಮೀ 2 ಸಾವಿರ ಸಹಾಯಧನ ಯೋಜನೆಯ ಪ್ರಯೋಜನ ಪಡೆದ ಮಹಿಳೆಯರಿಗೆ ಫಲಾನುಭವಿ ಪತ್ರ ವಿತರಣೆ ಮಾಡಲಾಯಿತು.ಬೆಂಗಳೂರು ನಗರ ಜಿಲ್ಲೆಯಲ್ಲಿ ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ 10ಕೋಟಿ ರೂ. ಅನುದಾನ ಮಂಜೂರು ಮಾಡಲಾಗುವುದು ಹಾಗೂ ಇದರ ಸಂಬಂಧವಾಗಿ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಹಣ ಬಿಡುಗಡೆ ಮಾಡಲಾಗುವುದು ಎಂದು ಡಿ. ಕೆ ಶಿವಕುಮಾರ್ ಭರವಸೆ ನೀಡಿದರು.
ಆನೇಕಲ್ ತಾಲ್ಲೂಕಿನ ಎಲ್ಲಾ ಗ್ರಾಮಗಳಿಗೂ ಕಾವೇರಿ ಕುಡಿಯುವ ನೀರು ಪೂರೈಕೆ ಮಾಡಲು ಶಾಸಕರು ಮತ್ತು ಸಂಸದರು ಮನವಿ ಮಾಡಿದ್ದು . ತಾಲ್ಲೂಕಿನ ಎಲ್ಲಾ ಗ್ರಾಮಗಳಿಗೂ ಕಾವೇರಿ ನೀರು ಪೂರೈಕೆ ಮಾಡಲಾಗುವುದು. ಜನತಾ ದರ್ಶನದಲ್ಲಿ ಸರ್ವಜನಿಕರು ನೀಡಿರುವ ಎಲ್ಲಾ ಅರ್ಜಿಗಳ ಬಗ್ಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದ ಅವರು, ಆನೇಕಲ್ಗೆ ವಕೀಲ ಸಂಘದ ವತಿಯಿಂದ ಬೇಡಿಕೆಯನ್ನು ಸಲ್ಲಿಸಿದ್ದು ಎಸಿ ಕೋರ್ಟ್ ಸ್ಥಾಪಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಾಗುವುದು ಎಂದು ಭರವಸೆ ನೀಡಿದರು.
ಸಂಸದರಾದ ಡಿ.ಕೆ.ಸುರೇಶ್ ಮಾತನಾಡಿ ಆನೇಕಲ್ ಪಟ್ಟಣಕ್ಕೆ ಕಾವೇರಿ ನೀರು ಪೂರೈಕೆ ಮಾಡಲಾಗುತ್ತಿದೆ. ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ತಾಲ್ಲೂಕಿನ ಎಲ್ಲಾ ಭಾಗಗಳಿಗೂ ಕಾವೇರಿ ನೀರು ಪೂರೈಕೆಗೆ ಡಿಪಿಆರ್ ಮಾಡಲಾಗಿದೆ. ಉಪಮುಖ್ಯಮಂತ್ರಿಗಳು ಮಂಜೂರು ಮಾಡುವ ಭರವಸೆ ನೀಡಿದ್ದಾರೆ ಎಂದರು.
ಆನೇಕಲ್ ಶಾಸಕರಾದ ಬಿ.ಶಿವಣ್ಣ ಮಾತನಾಡಿ ಆನೇಕಲ್ ತಾಲ್ಲೂಕಿನ ಬೊಮ್ಮಸಂದ್ರದವರೆಗೆ ಮೆಟ್ರೋ ಯೋಜನೆ ಜಾರಿಯಾಗಿದ್ದು . ತಾಲ್ಲೂಕಿನ ಅತ್ತಿಬೆಲೆ, ಸರ್ಜಾಪುರ, ಆನೇಕಲ್ಗೆ ಮೆಟ್ರೋ ಯೋಜನೆ ವಿಸ್ತರಿಸುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸಂಕೇತಿಕವಾಗಿ ಸೌಲಭ್ಯಗಳನ್ನು ವಿತರಿಲಾಯಿತು. ಗೃಹ ಲಕ್ಷ್ಮೀ, 94ಸಿ ಅಡಿಯಲ್ಲಿ ಫಲಾನುಭವಿಗಳಿಗೆ ಹಕ್ಕುಪತ್ರಗಳ ವಿತರಣೆ, ಹೆಬ್ಬಗೋಡಿ ನಗರಸಭೆ ವತಿಯಿಂದ ಲ್ಯಾಪ್ಟಾಪ್ ವಿತರಣೆ ಹಾಗೂ ವಿಕಲಚೇತನ ವಿದ್ಯಾರ್ಥಿಗಳಿಗೆ ವಿವಿಧ ಪರಿಕರಗಳನ್ನು ವಿತರಿಸಲಾಯಿತು.












Click it and Unblock the Notifications