ಕಾವೇರಿ ಕಿಚ್ಚು : ಸಿದ್ದರಾಮಯ್ಯ ಪತ್ರಿಕಾಗೋಷ್ಠಿ ವಿವರ
ಬೆಂಗಳೂರು, ಸೆಪ್ಟೆಂಬರ್ 13 : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಮಹತ್ವದ ತುರ್ತು ಸಚಿವ ಸಂಪುಟ ಸಭೆ ನಡೆಯಿತು. ಸಭೆಯಲ್ಲಿ ಸುಪ್ರೀಂಕೋರ್ಟ್ ಆದೇಶದಂತೆ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಲು ತೀರ್ಮಾನ ಕೈಗೊಳ್ಳಲಾಯಿತು.
ಸಚಿವ ಸಂಪುಟ ಸಭೆಯ ಬಳಿಕ ಸಿದ್ದರಾಮಯ್ಯ ಅವರು ಪತ್ರಿಕಾಗೋಷ್ಠಿ ನಡೆಸಿದರು. 'ಸೋಮವಾರ ಸುಪ್ರೀಂಕೋರ್ಟ್ ನೀಡಿದ ಆದೇಶ ಪಾಲನೆ ಮಾಡುವುದು ಅಸಾಧ್ಯ. ಆದರೂ ಕಾನೂನಿಗೆ ಗೌರವ ಕೊಟ್ಟು, ಆದೇಶವನ್ನು ಪಾಲನೆ ಮಾಡಲು ಸರ್ಕಾರ ತೀರ್ಮಾನ ಕೈಗೊಂಡಿದೆ' ಎಂದು ಹೇಳಿದರು.[ಕಾವೇರಿ ವಿವಾದ : ಕರ್ನಾಟಕಕ್ಕೆ ಮತ್ತೆ ಅನ್ಯಾಯ]

'ಸುಪ್ರೀಂಕೋರ್ಟ್ ಸೆಪ್ಟೆಂಬರ್ 5ರಂದು ನೀಡಿದ ಆದೇಶವನ್ನು ಕರ್ನಾಟಕ ಪಾಲನೆ ಮಾಡಿದೆ. ಈ ಆದೇಶವನ್ನು ಮಾರ್ಪಾಡು ಮಾಡುವಂತೆ ಅರ್ಜಿ ಸಲ್ಲಿಸಲಾಗಿತ್ತು. ಆದರೆ, ಕೋರ್ಟ್ ಸೆಪ್ಟೆಂಬರ್ 20ರ ತನಕ 12 ಸಾವಿರ ಕ್ಯೂಸೆಕ್ ನೀರು ಹರಿಸಿ ಎಂದು ಆದೇಶ ನೀಡಿದೆ.['ಕಾನೂನು ತಂತ್ರಗಾರಿಕೆಯಲ್ಲಿ ದಾರಿ ತಪ್ಪಿತು ರಾಜ್ಯ ಸರ್ಕಾರ']
* ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ನಾವು ಬದ್ಧರಾಗಿದ್ದೇವೆ. ಕಾನೂನು ಕಾಪಾಡಲು ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಯಾರೂ ಕಾನೂನನ್ನು ಕೈಗೆ ತೆಗೆದುಕೊಳ್ಳಬಾರದು.[ಶಾಂತಿ ಕಾಪಾಡುವಂತೆ ಕರೆ ನೀಡಿದ ಸಿದ್ದರಾಮಯ್ಯ]
* ಸೋಮವಾರ ಪೊಲೀಸರು ನಡೆಸಿದ ಗೋಲಿಬಾರ್ನಲ್ಲಿ ಉಮೇಶ್ ಎಂಬುವವರು ಮೃತಪಟ್ಟಿದ್ದಾರೆ. ಅವರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರವನ್ನು ನೀಡಲಾಗುತ್ತದೆ.
* ಇನ್ನೊಬ್ಬರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಆದರೆ, ಈ ಮೂಲಕ ಸ್ಪಷ್ಟಪಡಿಸುತ್ತೇನೆ. ಅವರು ಪೊಲೀಸ್ ಲಾಠಿ ಚಾರ್ಜ್ನಿಂದ ಮೃತಪಟ್ಟಿಲ್ಲ. ಕಟ್ಟಡದಿಂದ ಬಿದ್ದು ಮೃತಪಟ್ಟಿದ್ದಾರೆ.
* ಕಾವೇರಿ ನದಿ ನೀರು ಹಂಚಿಕೆ ವಿವಾದಲ್ಲಿ ಮಧ್ಯಪ್ರವೇಶಿಸಬೇಕು ಎಂದು ಪ್ರಧಾನಿ ಅವರಿಗೆ ಪತ್ರ ಬರೆದಿದ್ದೆ. ಆದರೆ, ಅದಕ್ಕೆ ಪ್ರತಿಕ್ರಿಯೆ ಬಂದಿಲ್ಲ. ಆದ್ದರಿಂದ ಪ್ರಧಾನಿ ಅವರನ್ನು ಭೇಟಿ ಮಾಡಲು ನಿರ್ಧರಿಸಿದ್ದೇನೆ. ಬುಧವಾರ ಬಹುಶಃ ಅವರು ಭೇಟಿಗೆ ಸಮಯ ನೀಡಲಿದ್ದಾರೆ.
* ಕರ್ನಾಟಕದಲ್ಲಿರುವ ತಮಿಳರ ರಕ್ಷಣೆಗೆ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಕರ್ನಾಟಕ ಸರ್ಕಾರವೂ ತಮಿಳುನಾಡಿನಲ್ಲಿರುವ ಕನ್ನಡಿಗರ ರಕ್ಷಣೆಗೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದೆ.
* ಬೆಂಗಳೂರು, ಮೈಸೂರು ಸೇರಿದಂತೆ ಕಾವೇರಿ ಪಾತ್ರದ ಪ್ರದೇಶಗಳಿಗೆ ಕುಡಿಯುವ ನೀರು ಪೂರೈಸಲಾಗುತ್ತದೆ ಎಂದು ಭರವಸೆ ನೀಡುತ್ತೇನೆ.
* ತಮಿಳುನಾಡು ಮತ್ತು ಕರ್ನಾಟಕದ ಮುಖ್ಯಮಂತ್ರಿಗಳ ಸಭೆ ಕರೆಯುವಂತೆ ಪ್ರಧಾನಿಗಳಿಗೆ ಮನವಿ ಮಾಡಲಾಗುತ್ತದೆ.












Click it and Unblock the Notifications