ಮೇಕೆದಾಟು ಯೋಜನೆ : ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ಹೇಳಿದ್ದೇನು?
ಬೆಂಗಳೂರು, ಡಿಸೆಂಬರ್ 04 : ಮೇಕೆದಾಟು ಕುಡಿಯುವ ನೀರಿನ ಯೋಜನೆ ವಿಚಾರದಲ್ಲಿ ಕರ್ನಾಟಕ ಸರ್ಕಾರ ಸಲ್ಲಿಸುವ ಡಿಪಿಆರ್ ಪರಿಶೀಲನೆ ಮಾಡುವುದಾಗಿ ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ಹೇಳಿದೆ. ಯೋಜನೆಗೆ ತಮಿಳುನಾಡು ವಿರೋಧ ವ್ಯಕ್ತಪಡಿಸುತ್ತಿದೆ.
ನವದೆಹಲಿಯಲ್ಲಿ ನಡೆದ ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ತಮಿಳುನಾಡು ಮೇಕೆದಾಟು ಕುಡಿಯುವ ನೀರಿನ ಯೋಜನೆಗೆ ವಿರೋಧ ವ್ಯಕ್ತಪಡಿಸಿತು. ಯೋಜನೆ ಕುರಿತು ವಿಸ್ತೃತ ಯೋಜನಾ ವರದಿ ಸಲ್ಲಿಸಲು ಮಾತ್ರ ಸೂಚಿಸಲಾಗಿದೆ ಎಂದು ಪ್ರಾಧಿಕಾರ ಸ್ಪಷ್ಟಪಡಿಸಿತು.
'ಮೇಕೆದಾಟು ಯೋಜನೆ ಬಗ್ಗೆ ಸಭೆಯಲ್ಲಿ ವಿವರವಾದ ಚರ್ಚೆ ನಡೆದಿದೆ. ತಮಿಳುನಾಡಿನ ಆಕ್ಷೇಪಣೆಗಳನ್ನು ದಾಖಲು ಮಾಡಿಕೊಳ್ಳಲಾಗಿದೆ' ಎಂದು ಪ್ರಾಧಿಕಾರದ ಅಧ್ಯಕ್ಷ ಮಸೂದ್ ಹುಸೇನ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
'ಮೇಕೆದಾಟು ಯೋಜನೆ ಕುರಿತು ವಿಸ್ತೃತ ಯೋಜನಾ ವರದಿ ತಯಾರಿಸಲು ಡಿಸೆಂಬರ್ 7ರಂದು ಮೇಕೆದಾಟಿಗೆ ತಜ್ಞರ ಜೊತೆ ಭೇಟಿ ನೀಡಲಾಗುತ್ತದೆ' ಎಂದು ಕರ್ನಾಟಕದ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಪ್ರಾಧಿಕಾರ ಹೇಳಿದ್ದೇನು?
ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಮಸೂದ್ ಹುಸೇನ್ ಅವರು, 'ಕೇಂದ್ರ ಜಲ ಆಯೋಗ ಕೇವಲ ಕಾರ್ಯಸಾಧು ವರದಿಗೆ ಒಪ್ಪಿಗೆ ನೀಡಿದೆ ಹೊರತು ಯೋಜನೆಗೆ ಅಲ್ಲ. ವಿಸ್ತೃತ ಯೋಜನಾ ವರದಿ ತಯಾರಿಸಿ, ಸಲ್ಲಿಸಲು ಸೂಚಿಸಲಾಗಿದೆ. ವರದಿ ಕೇಳುವುದು ವಿವಾದದ ವಿಚಾರವಲ್ಲ. ವರದಿಯನ್ನು ಪ್ರಾಧಿಕಾರ ಪರಿಶೀಲನೆ ನಡೆಸಲಿದೆ. ಬಳಿಕ ಎಲ್ಲಾ ರಾಜ್ಯಗಳ ಅಭಿಪ್ರಾಯ ಆಧರಿಸಿ ಕೇಂದ್ರ ಜಲಸಂಪನ್ಮೂಲ ಸಚಿವಾಲಯಕ್ಕೆ ಒಪ್ಪಿಗೆಗಾಗಿ ಸಲ್ಲಿಸಲಾಗುತ್ತದೆ'ಸ ಎಂದು ಸ್ಪಷ್ಟನೆ ನೀಡಿದ್ದಾರೆ.

ತಮಿಳುನಾಡು ವಿರೋಧ
ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ತಮಿಳುನಾಡು ಮೇಕೆದಾಟು ಕುಡಿಯುವ ನೀರಿನ ಯೋಜನೆಗೆ ವಿರೋಧ ವ್ಯಕ್ತಪಡಿಸಿತು. ತಮಿಳುನಾಡಿನ ಆಕ್ಷೇಪಣೆಗಳನ್ನು ಸಭೆಯಲ್ಲಿ ದಾಖಲು ಮಾಡಿಕೊಳ್ಳಲಾಯಿತು. ಈ ವರ್ಷ ಕರ್ನಾಟಕದಲ್ಲಿ ಉತ್ತಮ ಮಳೆಯಾಗಿದೆ. ಆದ್ದರಿಂದ ತಮಿಳುನಾಡಿಗೆ ಚೆನ್ನಾಗಿ ನೀರು ಹರಿದು ಬಂದಿದೆ ಎಂದು ಸಭೆಯಲ್ಲಿ ಚರ್ಚಿಸಲಾಯಿತು. ಮುಂದಿನ ಸಭೆ 2019ರ ಜನವರಿಯಲ್ಲಿ ನಡೆಯಲಿದೆ.

ಎಲ್ಲಾ ರಾಜ್ಯಗಳ ಅಭಿಪ್ರಾಯ ಸಂಗ್ರಹ
ಮೇಕೆದಾಟು ಕುಡಿಯುವ ನೀರಿನ ಯೋಜನೆ ಕುರಿತು ವಿಸ್ತೃತ ಯೋಜನಾ ವರದಿಯನ್ನು ಕರ್ನಾಟಕ ಸರ್ಕಾರ ಸಿದ್ಧಪಡಿಸಿ ಕೇಂದ್ರ ಜಲ ಆಯೋಗಕ್ಕೆ ಸಲ್ಲಿಸಲಿದೆ. ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ಈ ವರದಿಯನ್ನು ಪರಿಶೀಲಿಸಲಿದ್ದು, ಬಳಿಕ ಕಾವೇರಿ ನದಿ ಪಾತ್ರದ ಎಲ್ಲಾ ರಾಜ್ಯಗಳ ಅಭಿಪ್ರಾಯವನ್ನು ಸಂಗ್ರಹಣೆ ಮಾಡಲಿದೆ. ಬಳಿಕ ಕೇಂದ್ರ ಜಲಸಂಪನ್ಮೂಲ ಇಲಾಖೆಗೆ ಸಲ್ಲಿಸಲಿದೆ. ಜಲಸಂಪನ್ಮೂಲ ಇಲಾಖೆ ಒಪ್ಪಿಗೆ ನೀಡಿದರೆ ಮಾತ್ರವೇ ಯೋಜನೆ ಜಾರಿಗೆ ಬರಲಿದೆ.

ತಮಿಳುನಾಡು ವಿರೋಧವೇಕೆ?
ಮೇಕೆದಾಟು ಯೋಜನೆಗೆ ಹಲವು ಕಾರಣಗಳಿಗೆ ತಮಿಳುನಾಡು ವಿರೋಧ ವ್ಯಕ್ತಪಡಿಸುತ್ತಿದೆ. ಕಾವೇರಿ ನ್ಯಾಯಮಂಡಳಿಯಲ್ಲಿ ನದಿ ನೀರಿನ ಹಂಚಿಕೆ ವಿವಾದದ ಬಗ್ಗೆ ವಾದ-ವಿವಾದ ನಡೆಯುವಾಗ ಕರ್ನಾಟಕ ಯೋಜನೆ ಬಗ್ಗೆ ಪ್ರಸ್ತಾಪ ಮಾಡಿರಲಿಲ್ಲ ಎಂಬುದು ಪ್ರಮುಖ ವಾದವಾಗಿದೆ.

ಡಿ.ಕೆ.ಶಿವಕುಮಾರ್ ಹೇಳಿಕೆ
'ಮೇಕೆದಾಟು ಯೋಜನೆ ಕುರಿತು ವಿಸ್ತೃತ ಯೋಜನಾ ವರದಿ ತಯಾರಿಸಲು ಡಿಸೆಂಬರ್ 7ರಂದು ಮೇಕೆದಾಟಿಗೆ ತಜ್ಞರ ಜೊತೆ ಭೇಟಿ ನೀಡಲಾಗುತ್ತದೆ' ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.












Click it and Unblock the Notifications