ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳ ಮನೆಗಳಿಗೆ ಹರಿಯಲಿದೆ ಕಾವೇರಿ: ಡಿ.ಕೆ. ಶಿವಕುಮಾರ್
ಬೆಂಗಳೂರು, ಸೆಪ್ಟೆಂಬರ್ 23: ಬೆಂಗಳೂರು ಬೃಹತ್ ಮಹಾನಗರ ಪಾಲಿಕೆ ವ್ಯಾಪ್ತಿಗೆ ಹೊಸದಾಗಿ ಸೇರ್ಪಡೆಯಾಗಿರುವ 110 ಹಳ್ಳಿಗಳ ಜನರಿಗೆ ಕುಡಿಯಲು ನೀರು ಪೂರೈಸುವ ಕಾವೇರಿ 5ನೇ ಹಂತದ ಕುಡಿಯುವ ನೀರಿನ ಯೋಜನೆಯ ಉದ್ಘಾಟನೆಯನ್ನು ಪಿತೃ ಪಕ್ಷದ ನಂತರ ವಿಜಯ ದಶಮಿ ವೇಳೆಗೆ ನೆರವೇರಿಸುವ ಆಲೋಚನೆಯಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ರಾಮನಗರ ಜಿಲ್ಲೆ ಹಾರೋಹಳ್ಳಿಯ ಕಾವೇರಿ ನೀರು ಪಂಪಿಂಗ್ ಸ್ಟೇಷನ್ ಬಳಿ ಮಾಧ್ಯಮ ಜೊತೆಗೆ ಮಾತನಾಡಿ, ಬೆಂಗಳೂರು ಜನರಿಗೆ ಟ್ಯಾಂಕರ್ ಮೂಲಕ ನೀರು ಕೊಡುವುದನ್ನು ತಪ್ಪಿಸಿ ಮನೆ, ಮನೆಗೂ ಕುಡಿಯುವ ನೀರು ಹರಿಸುವುದು ನಮ್ಮ ಸಂಕಲ್ಪ. ಬಿಬಿಎಂಪಿ ವ್ಯಾಪ್ತಿಗೆ ಹೊಸದಾಗಿ ಸೇರಿರುವ 110 ಹಳ್ಳಿಗಳಿಗೆ ಕಾವೇರಿ ನೀರು ನೀಡಬೇಕು ಎಂದು ಕಾಂಗ್ರೆಸ್ ಸರ್ಕಾರ ಈ ಯೋಜನೆ ಆರಂಭಿಸಿತ್ತು.

ಈ ಯೋಜನೆ ಜಾರಿಗೆ ಇದ್ದ ಅಡಚಣೆಗಳನ್ನು ಹಂತ, ಹಂತವಾಗಿ ನಿವಾರಿಸಲಾಗಿದೆ. ಅನೇಕ ಕಡೆಗಳಲ್ಲಿ ಮಧ್ಯೆ ಮಧ್ಯೆ ಸಮಸ್ಯೆಗಳಿದ್ದವು. ಮುಂದೆ ಯಾವುದೇ ತೊಂದರೆ ಆಗಬಾರದು ಎಂದು ಈ ಯೋಜನೆ ಉದ್ಘಾಟಿಸುವ ಮುನ್ನ ಎಲ್ಲವೂ ಸರಿಯಾಗಿದೆಯೇ ಎಂದು ನಾನೇ ಕಣ್ಣಾರೆ ಕಂಡು ಪರಿಶೀಲಿಸಬೇಕು ಎಂದು ಭೇಟಿ ನೀಡಿದ್ದೇನೆ" ಎಂದು ತಿಳಿಸಿದರು.
ಈಗಾಗಲೇ 1,400 ಎಂಎಲ್ ಡಿ ನೀರನ್ನು ನೀಡಲಾಗುತ್ತಿದ್ದು, ಇದಕ್ಕೆ 775 ಎಂಎಲ್ ಡಿಯಷ್ಟು ನೀರು ಸೇರಿಸಲಾಗುವುದು. ಕನಿಷ್ಠ 10 ವರ್ಷ ಬೆಂಗಳೂರಿನಲ್ಲಿ ಕುಡಿಯಲು ನೀರಿನ ತೊಂದರೆ ಆಗಬಾರದು ಎಂದು ಯೋಜನೆ ರೂಪಿಸಲಾಗಿದೆ ಎಂದರು. ಕೆಂಗೇರಿ ಸೇರಿದಂತೆ ಒಂದಷ್ಟು ಕಡೆ ಕಾಮಗಾರಿ ನಡೆಸಲು ಜಾಗಗಳ ಒತ್ತುವರಿ ತೊಂದರೆ, ಅರಣ್ಯ ಭೂಮಿಗಳ ತೊಂದರೆ ಸೇರಿದಂತೆ ಎಲ್ಲವನ್ನೂ ನಾವುಗಳೇ ಖುದ್ದಾಗಿ ಮಾತನಾಡಿ ಬಗೆಹರಿಸಿದ್ದೇವೆ. ಅವರಿಗೆ ಪರಿಹಾರವಾಗಿ ಟಿಡಿಆರ್ ಕೊಟ್ಟಿದ್ದೇವೆ" ಎಂದು ಮಾಹಿತಿ ನೀಡಿದರು.
5 ನೇ ಹಂತ ಅನುಷ್ಠಾನದ ಬಳಿಕ 4 ಲಕ್ಷ ಹೊಸ ನೀರಿನ ಸಂಪರ್ಕ ನೀಡಲಾಗುತ್ತದೆ. 5 ಸಾವಿರ ಕೋಟಿ ಮೊತ್ತದಲ್ಲಿ 50 ಲಕ್ಷ ಜನರಿಗೆ ನೀರು ಒದಗಿಸುವ ದೇಶದ ದೊಡ್ಡ ಯೋಜನೆ. ಈ ಕಾರ್ಯಕ್ರಮದ ಅನುಷ್ಠಾನಕ್ಕೆ ಜಪಾನ್ ಇಂಟರ್ ನ್ಯಾಷನಲ್ ಕೋ- ಆಪರೇಷನ್ ಏಜನ್ಸಿ (ಜೈಕಾ) ಸಂಸ್ಥೆ ಜೊತೆ ಸಾಲದ ಒಪ್ಪಂದ ಮಾಡಿಕೊಂಡಿದ್ದೇವೆ ಎಂದರು.
ಈ ಐದನೇ ಹಂತ ಕೇವಲ ಒಂದು ಕ್ಷೇತ್ರಕ್ಕೆ ಸೇರಿದ್ದಲ್ಲ, ರಾಜರಾಜೇಶ್ವರಿ ನಗರ, ಬೆಂಗಳೂರು ದಕ್ಷಿಣ, ಕೆಂಗೇರಿ, ಆನೇಕಲ್, ಯಶವಂತಪುರ, ಬ್ಯಾಟರಾಯನಪುರ, ಬೊಮ್ಮನಹಳ್ಳಿ, ಮಹದೇವಪುರ ಸೇರಿದಂತೆ ಹಲವು ಭಾಗಗಳಿಗೆ ನೀರು ಒದಗಿಸಲಾಗುವುದು. ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ನಿವಾರಿಸಲೆಂದೇ ಈ ಬೃಹತ್ ಯೋಜನೆ ಅನುಷ್ಠಾನಕ್ಕೆ ತರುತ್ತಿದ್ದೇವೆ ಎಂದರು.
1 ಲಕ್ಷ 45 ಸಾವಿರ ಮೆಗಾ ಟನ್ ಸ್ಟೀಲ್ ಪೈಪ್ ಗಳನ್ನು ಈ ಯೋಜನೆಯಲ್ಲಿ ಬಳಕೆ ಮಾಡಲಾಗಿದೆ. 110 ಕಿ. ಮೀ ಉದ್ದ ಪೈಪ್ ಲೈನ್ ಅಳವಡಿಸಲಾಗಿದೆ. ಕನಕಪುರ ಬಳಿ ತಿರುವು ಮಾಡಲು ತೊಂದರೆ ಆಗಿತ್ತು. ಅದನ್ನು ಬಗೆಹರಿಸಲಾಗಿದೆ. ಇದೊಂದೇ ಹಂತದಲ್ಲಿ 775 ಎಂಎಲ್ ಡಿ ನೀರನ್ನು ಹರಿಸಲಾಗುತ್ತಿದೆ. ಭಾರತದಲ್ಲೇ ಅತಿ ದೊಡ್ಡ ಕುಡಿಯುವ ನೀರಿನ ಯೋಜನೆ. ಕುಡಿಯುವ ನೀರಿನ ಸರಬರಾಜು ವಿಚಾರದಲ್ಲಿ ನಾವು ಸಾಕಷ್ಟು ಟೀಕೆಗಳನ್ನು ಎದುರಿಸಿದ್ದೇವೆ. ಕಳೆದ ಬೇಸಿಗೆ ವೇಳೆ 7 ಸಾವಿರ ಬೋರ್ ವೆಲ್ ಗಳು ಬತ್ತಿ ಹೋಗಿದ್ದರೂ ಅಧಿಕಾರಿಗಳು, ನೌಕರರು ಜನರ ಬದುಕಿಗೆ ತೊಂದರೆ ಆಗದಂತೆ ನೀರನ್ನು ನೀಡಿದ್ದಾರೆ. ಅವರ ಕೆಲಸಕ್ಕೆ, ಬದ್ಧತೆಗೆ ವಂದನೆಗಳು ಎಂದರು.
ಈ ಯೋಜನೆ ಆಧುನಿಕ ಇಂಜಿನಿಯರಿಂಗ್ ನ ಅದ್ಬುತ ಎಂದು ಕರೆಯುತ್ತಾರೆ. ಈ ಯೋಜನೆ ಮೂಲಕ ಬೆಂಗಳೂರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳುವುದೇ ನಮ್ಮ ಗುರಿ ಹಾಗೂ ಉದ್ದೇಶ ಎಂದು ಹೇಳಿದರು.
ಸತ್ತೇಗಾಲ ಯೋಜನೆ ಕೂಡ ವಿಳಂಬವಾಗುತ್ತಿದೆ ಎಂದು ಕೇಳಿದಾಗ, "ಸತ್ತೆಗಾಲಕ್ಕೂ ಮುಂದೊಂದು ದಿನ ಭೇಟಿ ನೀಡಿ ಯೋಜನೆ ಜಾರಿಗೆ ಪ್ರಯತ್ನಿಸುತ್ತೇವೆ ಎಂದು ಹೇಳಿದರು.












Click it and Unblock the Notifications