ಬೈಎಲೆಕ್ಷನ್ ಹೊತ್ತಲ್ಲೇ ಡಿ.ಕೆ.ಶಿವಕುಮಾರ್ಗೆ ದೊಡ್ಡ ಸಂಕಷ್ಟ
ಒಂದೆಡೆ ಚನ್ನಪಟ್ಟಣ ಉಪಚುನಾವಣೆ ಘೋಷಣೆಯಾಗಿದೆ. ಈ ಬಾರಿ ಚನ್ನಪಟ್ಟಣ ಗೆಲ್ಲಲೇಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತೊಡೆ ತಟ್ಟಿದ್ದಾರೆ. ಈ ಹೊತ್ತಿನಲ್ಲೇ ಡಿಕೆಶಿಗೆ ದೊಡ್ಡ ಆಪತ್ತು ಎದುರಾಗಿದೆ.
ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಆರೋಪವಿದ್ದು, ಈ ಸಂಬಂಧ ಸಿಬಿಐ ಅಧಿಕಾರಿಗಳು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ ಎಂದು ತಿಳಿದುಬಂದಿದೆ. ಇದೇ ಕೇಸ್ ಸಂಬಂಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೂಡ ಡಿ.ಕೆ.ಶಿವಕುಮಾರ್ ವಿರುದ್ಧ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.

ಮೊದಲಿಗೆ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಕರ್ನಾಟಕ ಹೈಕೋರ್ಟ್ ರಿಲೀಫ್ ನೀಡಿತ್ತು. ಡಿಕೆಶಿ ಮೇಲೆ ಸಿಬಿಐ ತನಿಖೆಗೆ ವಹಿಸಿದ್ದನ್ನು ವಾಪಸ್ ಪಡೆದಿದ್ದ ಕಾಂಗ್ರೆಸ್ ಸರ್ಕಾರದ ಕ್ರಮ ಪ್ರಶ್ನಿಸಿ, ಬಿಜೆಪಿ ಹಾಗೂ ಸಿಬಿಐನಿಂದ ಹೈಕೋರ್ಟ್ಗೆ ಅರ್ಜಿ ಸಲ್ಲಿಕೆಯಾಗಿತ್ತು. ಇದನ್ನು ಹೈಕೋರ್ಟ್ ವಜಾಗೊಳಿಸಿತ್ತು.
ಬಳಿಕ ಹೈಕೋರ್ಟ್ ತೀರ್ಪು ಪ್ರಶ್ನಿಸಿ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸುಪ್ರೀಂಕೋರ್ಟ್ಗೂ ಮೇಲ್ಮನವಿ ಸಲ್ಲಿಸಿದ್ದರು. ಈಗ ಸಿಬಿಐ ಕೂಡ ಸುಪ್ರೀಂಕೋರ್ಟ್ ಕದ ತಟ್ಟಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಮೇಲಿನ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ವಿಚಾರಣೆಯನ್ನು ಸುಪ್ರೀಂಕೋರ್ಟ್ ನಡೆಸಿತ್ತು. ಬಳಿಕ ವಿಚಾರಣೆಯನ್ನು ಮುಂದೂಡಿತ್ತು.

ಯತ್ನಾಳ್ ಅವರು ಡಿಕೆಶಿ ವಿರುದ್ಧ ಆದಾಯಕ್ಕೂ ಮೀರಿ ಆಸ್ತಿ ಗಳಿಸಿರುವ ಆರೋಪ ಮಾಡಿದ್ದರು. ಇದನ್ನು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಈ ಕೇಸ್ ಸಂಬಂಧ ಕರ್ನಾಟಕ ಸರ್ಕಾರ, ಲೋಕಾಯುಕ್ತ ಹಾಗೂ ಡಿ.ಕೆ.ಶಿವಕುಮಾರ್ ಅವರಿಗೆ ನೋಟಿಸ್ ಜಾರಿ ಮಾಡುವ ಮೂಲಕ ವಿಚಾರಣೆಯನ್ನು ನಾಲ್ಕು ವಾರಗಳವರೆಗೆ ಮುಂದೂಡಿತ್ತು.
ಅಕ್ರಮ ಆಸ್ತಿ ಗಳಿಕೆ ಸಂಬಂಧ ಡಿಕೆಶಿ ಮೇಲಿದ್ದ ಸಿಬಿಐ ಕೇಸ್ ವಾಪಸ್ ಪಡೆಯುವ ಕುರಿತಂತೆ ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿದ್ದ ಶಾಸಕ ಯತ್ನಾಳ್, ಈ ಹಿಂದೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಹೈಕೋರ್ಟ್ ಈ ಅರ್ಜಿಯನ್ನು ಕಳೆದ ಆಗಸ್ಟ್ನಲ್ಲಿ ತಿರಸ್ಕರಿಸಿತ್ತು.
ಹೈಕೋರ್ಟ್ ಯತ್ನಾಳ್ ಅವರ ಅರ್ಜಿಯನ್ನು ವಜಾ ಮಾಡಿದ್ದಲ್ಲದೆ, ರಾಜ್ಯ ಸರ್ಕಾರ ಮತ್ತು ಸಿಬಿಐ ನಡುವಿನ ಈ ಕೇಸ್ ಅನ್ನು ಸುಪ್ರೀಂಕೋರ್ಟ್ ತೀರ್ಮಾನಿಸಲಿ. ಇದರ ವಿಚಾರಣೆ ಅಲ್ಲಿ ನಡೆಯುವುದೇ ಸೂಕ್ತ ಎಂದು ಹೈಕೋರ್ಟ್ ಹೇಳಿತ್ತು. ಬಳಿಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸುಪ್ರೀಂಕೋರ್ಟ್ನಲ್ಲೂ ಅರ್ಜಿ ಸಲ್ಲಿಸಿದ್ದರು. ಈ ವಿಚಾರಣೆ ಸದ್ಯ ನಡೆಯುತ್ತಿದೆ. ಹೀಗಿರುವಾಗಲೇ ಸಿಬಿಐ ಕೂಡ ಡಿ.ಕೆ.ಶಿವಕುಮಾರ್ ಅವರಿಗೆ ಶಾಕ್ ನೀಡಲು ಮುಂದಾಗಿದೆ.
ಸಿಬಿಐ ಕೂಡ ಯತ್ನಾಳ್ ಅವರಂತೆ ಡಿಕೆಶಿ ಮೇಲಿನ ಕೇಸ್ ವಾಪಸ್ ಪಡೆಯುವ ಸರ್ಕಾರದ ನಿರ್ಧಾರ ಪ್ರಶ್ನಿಸಿದೆ. ಈ ಸಂಬಂಧ ಸುಪ್ರೀಂಕೋರ್ಟ್ಗೆ ಅರ್ಜಿ ಕೂಡ ಸಲ್ಲಿಸಿದೆ. ಯತ್ನಾಳ್ ಅರ್ಜಿ ವಿಚಾರಣೆ ವೇಳೆ ಸಿಬಿಐನಿಂದಲೂ ಸುಪ್ರೀಂಕೋರ್ಟ್ ಅಭಿಪ್ರಾಯ ಕೇಳಿತ್ತು. ಈಗ ಸಿಬಿಐ ಕೂಡ ಅರ್ಜಿ ಸಲ್ಲಿಸಿರುವುದು ಡಿ.ಕೆ.ಶಿವಕುಮಾರ್ ಅವರಿಗೆ ಸಂಕಷ್ಟ ತರುವ ಸಾಧ್ಯತೆ ಇದೆ.












Click it and Unblock the Notifications