ಜನಾರ್ದನ್ ರೆಡ್ಡಿ ಆಸ್ತಿ ಜಪ್ತಿಗೆ ಸರ್ಕಾರಕ್ಕೆ ನಿರ್ದೇಶಿಸಲು ಹೈಕೋರ್ಟ್ಗೆ ಸಿಬಿಐ ಅರ್ಜಿ
ಬೆಂಗಳೂರು, ಜನವರಿ 05: ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿರುವ ಮಾಜಿ ಸಚಿವ ಮತ್ತು ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸಂಸ್ಥಾಪಕ ಜನಾರ್ದನ್ ರೆಡ್ಡಿ ಮತ್ತವರ ಕುಟುಂಬ ಸದಸ್ಯರಿಗೆ ಸೇರಿದ ಆಸ್ತಿಯನ್ನು ಜಪ್ತಿ ಮಾಡಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಕೇಂದ್ರ ತನಿಖಾ ದಳ (ಸಿಬಿಐ) ಕರ್ನಾಟಕ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದೆ.
ಈ ವಾರದ ಕೊನೆಯಲ್ಲಿ ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆ ಇದೆ. ಸಿಬಿಐ ಸಂಗ್ರಹಿಸಿದ ಮಾಹಿತಿ ಪ್ರಕಾರ, ಬಹುಕೋಟಿ ಅಕ್ರಮ ಗಣಿಗಾರಿಕೆ ಮತ್ತು ಕಬ್ಬಿಣದ ಅದಿರು ಸಾಗಣೆ ಅಕ್ರಮ ಹಣದಿಂದ ಈ ಎರಡು ರಾಜ್ಯಗಳಲ್ಲಿ ಜನಾರ್ದನ್ ರೆಡ್ಡಿ ಅವರು ಸುಮಾರು 219 ಆಸ್ತಿಗಳನ್ನು ಹೊಂದಿದ್ದಾರೆ. ಅವುಗಳನ್ನು ಜಪ್ತಿ ಮಾಡಬೇಕಿದೆ ಎಂದು ಮನವಿಯಲ್ಲಿ ತಿಳಿಸಿದೆ.
ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಅಪಾರ ಆಸ್ತಿಗಳನ್ನು ಹೊಂದಿದ್ದಾರೆ. ಈ ಆಸ್ತಿಗಾಗಿ ಮಾಜಿ ಸಚಿವರು ಹಾಗೂ ಅವರ ಆಪ್ತರು ಮತ್ತವರ ಕಂಪನಿಗಳಿಂದ ಆಕ್ರಮ ಆದಾಯ ಸಂಪಾದಿಸಲಾಗಿದೆ. ಈ ಬಗ್ಗೆ ಮಾಹಿತಿ ಸಂಗ್ರಹಿಸಲಾಗಿದ್ದು, ಆಸ್ತಿ ಜಪ್ತಿಗೆ ಅನುಮೋದನೆಯನ್ನು ಕೋರಿ ಸರ್ಕಾರಕ್ಕೆ ಸಿಬಿಐ ಅರ್ಜಿ ಸಲ್ಲಿಸುವ ಮೂಲಕ ಮನವಿ ಮಾಡಿದೆ.

ಸಿಬಿಐ ಅಧಿಕಾರಿಗಳು ತಮ್ಮ ಕೆಲವು ಆಸ್ತಿಗಳನ್ನು ಪತ್ತೆ ಹಚ್ಚಲು ಪ್ರಯತ್ನಿಸುತ್ತಿದ್ದಾರೆ ಎಂಬ ಮಾಹಿತಿ ತಿಳಿದ ಮಾಜಿ ಸಚಿವ ಜನಾರ್ದನ್ ರೆಡ್ಡಿಯವರು ಆ ಆಸ್ತಿಗಳನ್ನು ಮಾರಾಟ ಅಥವಾ ವಿಲೇವಾರಿ ಮಾಡಲು ಪ್ರಾರಂಭಿಸಿದ್ದಾರೆ ಎಂದು ಸಿಬಿಐ ಹೇಳಿದೆ. ಈ ಹಿನ್ನೆಲೆಯಲ್ಲಿ ಸಿಬಿಐ ರೆಡ್ಡಿಯವರು ಯಾವುದೇ ರೀತಿಯ ಆಸ್ತಿಗಳನ್ನು ನೋಂದಾಯಿಸಲು ಆಗಮಿಸಿದರೆ ಪ್ರಕ್ರಿಯೆ ಕೈಗೊಳ್ಳದಂತೆ ರಂಗಾ ರೆಡ್ಡಿ ಜಿಲ್ಲೆಯ ರಿಜಿಸ್ಟ್ರಾರ್ಗೆ ತಿಳಿಸಿದ್ದೇವೆ ಎಂದು ಸಿಬಿಐ ತಿಳಿಸಿದ್ದಾರೆ.

ಅನುಮತಿ ನೀಡದ ಸರ್ಕಾರ: ಸಿಬಿಐ ಅರ್ಜಿ
ಅಕ್ರಮ ಹಣದ ಮೂಲದಿಂದ ಜನಾರ್ದನ್ ರೆಡ್ಡಿ ಖರೀದಿಸಿದ್ದ ಆಸ್ತಿಯನ್ನು ಜಪ್ತಿ ಮಾಡುವ ಕುರಿತು ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. ಕ್ರಿಮಿನಲ್ ಕಾನೂನು (ತಿದ್ದುಪಡಿ) ಸುಗ್ರೀವಾಜ್ಞೆ 1994ರ ಸೆಕ್ಷನ್ 3, 4 ಮತ್ತು 6 ಅಡಿಯಲ್ಲಿ ಸ್ವಾಧೀನಪಡಿಸಿಕೊಂಡಿರುವ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಒಪ್ಪಿಗೆ ನೀಡುವಂತೆ ಈ ಹಿಂದೆ ಸಿಬಿಐ ಅಧಿಕಾರಿಗಳು ರಾಜ್ಯ ಮುಖ್ಯ ಕಾರ್ಯದರ್ಶಿಗಳಿಗೆ ಅರ್ಜಿ ಸಲ್ಲಿಸಿದೆ. ಸರ್ಕಾರ ಮಾತ್ರ ಅನುಮತಿ ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಇದೀಗಿ ಸಿಬಿಐ ಹೈಕೋರ್ಟ್ ಮೆಟ್ಟಿಲೇರಿದೆ ಎನ್ನಲಾಗಿದೆ.












Click it and Unblock the Notifications