ಡಿಕೆಶಿ ನಿವಾಸದ ಮೇಲೆ ಸಿಬಿಐ ದಾಳಿ; ಉಪ ಚುನಾವಣೆ ಲೆಕ್ಕಾಚಾರ ಉಲ್ಟಾ
ಬೆಂಗಳೂರು, ಅಕ್ಟೋಬರ್ 05: ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ನಿವಾಸದ ಮೇಲೆ ಸಿಬಿಐ ದಾಳಿ ನಡೆದಿದೆ. ಆರ್. ಆರ್. ನಗರ ಮತ್ತು ಶಿರಾ ಕ್ಷೇತ್ರದ ಉಪ ಚುನಾವಣೆ ತಯಾರಿಯಲ್ಲಿದ್ದ ಡಿ. ಕೆ. ಶಿವಕುಮಾರ್ ಎಲ್ಲಾ ಸಭೆಗಳನ್ನು ರದ್ದು ಮಾಡಿದ್ದಾರೆ.
ಸೋಮವಾರ ಬೆಳಗ್ಗೆ 60ಕ್ಕೂ ಹೆಚ್ಚು ಸಿಬಿಐ ಅಧಿಕಾರಿಗಳು ಸದಾಶಿವನಗರ, ಕನಕಪುರ, ದೆಹಲಿ ಸೇರಿದಂತೆ 14 ವಿವಿಧ ಪ್ರದೇಶಗಳಲ್ಲಿ ದಾಳಿ ನಡೆಸಿದ್ದಾರೆ. ಇದರಿಂದಾಗಿ ಸೋಮವಾರದ ಡಿ. ಕೆ. ಶಿವಕುಮಾರ್ ಕಾರ್ಯಕ್ರಮಗಳು ರದ್ದಾಗಿವೆ.
ರಾಜರಾಜೇಶ್ವರಿ ನಗರ ಕ್ಷೇತ್ರದ ಉಪ ಚುನಾವಣೆ ಬಗ್ಗೆ ಸೋಮವಾರ ಡಿ. ಕೆ. ಶಿವಕುಮಾರ್ ಸಭೆ ಕರೆದಿದ್ದರು. ಆರ್. ಆರ್. ನಗರ ಕ್ಷೇತ್ರದ ಮಾಜಿ ಕಾರ್ಪೊರೇಟರ್ಗಳು ಸಭೆಯಲ್ಲಿ ಪಾಲ್ಗೊಳ್ಳಬೇಕಿತ್ತು. ಆದರೆ, ಮುಂಜಾನೆಯೇ ಸಿಬಿಐ ದಾಳಿ ನಡೆದಿದೆ.
ಕರ್ನಾಟಕದ ವಿವಿಧ ಕಾಂಗ್ರೆಸ್ ನಾಯಕರು ಡಿ. ಕೆ. ಶಿವಕುಮಾರ್ ನಿವಾಸದ ಮೇಲೆ ನಡೆದ ದಾಳಿಯನ್ನು ಖಂಡಿಸಿದ್ದಾರೆ. ಉಪ ಚುನಾವಣೆ ಸಂದರ್ಭದಲ್ಲಿ ಜನರ ದಾರಿ ತಪ್ಪಿಸಲು ದಾಳಿ ಮಾಡಲಾಗಿದೆ ಎಂದು ಕಾಂಗ್ರೆಸ್ ಪಕ್ಷ ಆರೋಪಿಸುತ್ತಿದೆ.

ಅಭ್ಯರ್ಥಿಗಳನ್ನು ಘೋಷಣೆ ಮಾಡಿಲ್ಲ
ಆರ್. ಆರ್. ನಗರ ಮತ್ತು ಶಿರಾ ಕ್ಷೇತ್ರದ ಉಪ ಚುನಾವಣೆ ನವೆಂಬರ್ 3ರಂದು ನಡೆಯಲಿದೆ. ಶಿರಾ ಕ್ಷೇತ್ರಕ್ಕೆ ಟಿ. ಬಿ. ಜಯಚಂದ್ರ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. ಆದರೆ, ಆರ್. ಆರ್. ನಗರ ಕ್ಷೇತ್ರಕ್ಕೆ ಇನ್ನೂ ಅಭ್ಯರ್ಥಿಯನ್ನು ಘೋಷಣೆ ಮಾಡಿಲ್ಲ.

ರಾಜಕೀಯ ಆರೋಪಗಳು
ಉಪ ಚುನಾವಣೆ ಸಮಯದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ನಿವಾಸದ ಮೇಲೆ ಸಿಬಿಐ ದಾಳಿ ನಡೆದಿದೆ. ಇದರಿಂದಾಗಿ ಉಪ ಚುನಾವಣೆ ಪ್ರಚಾರದ ಸಮಯದಲ್ಲಿ ರಾಜಕೀಯ ಆರೋಪ, ಪ್ರತ್ಯಾರೋಪಗಳು ನಡೆಯಲಿವೆ. ಅದರಲ್ಲೂ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವದಲ್ಲಿದೆ.

14 ಕಡೆ ದಾಳಿ, ಪ್ರತಿಭಟನೆ
ಡಿ. ಕೆ. ಶಿವಕುಮಾರ್ ನಿವಾಸ, ಸಹೋದರ ನಿವಾಸ, ಸಂಬಂಧಿಕರ ನಿವಾಸ ಸೇರಿದಂತೆ ಒಟ್ಟು 14 ಕಡೆ ಸಿಬಿಐ ದಾಳಿ ನಡೆದಿದೆ. ಇದನ್ನು ಖಂಡಿಸಿ ಡಿ. ಕೆ. ಶಿವಕುಮಾರ್ ಬೆಂಬಲಿಗರು ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ. ವಿವಿಧ ನಾಯಕರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ.
|
ದಿನೇಶ್ ಗುಂಡೂರಾವ್ ಟ್ವೀಟ್
ಡಿ. ಕೆ. ಶಿವಕುಮಾರ್ ಮನೆ ಮೇಲೆ ನಡೆದ ಸಿಬಿಐ ದಾಳಿ ರಾಜಕೀಯ ಪ್ರೇರಿತ. ಶಿರಾ ಹಾಗೂ ಆರ್. ಆರ್. ನಗರ ಉಪಚುನಾವಣೆಯ ಸಂದರ್ಭದಲ್ಲೇ ಈ ದಾಳಿ ನಡೆದಿರುವುದು ಅದರ ಹಿಂದಿನ ಉದ್ದೇಶ ತೋರಿಸುತ್ತದೆ ಎಂದು ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿದ್ದಾರೆ.












Click it and Unblock the Notifications