ಕರ್ನಾಟಕ ವಿಧಾನಸಭಾ ಚುನಾವಣೆಗೂ ಮುನ್ನ ಕಿರುಕುಳ ನೀಡಲು ಸಿಬಿಐ ಯತ್ನ: ಡಿ.ಕೆ.ಶಿವಕುಮಾರ್
ಬೆಂಗಳೂರು, ಡಿಸೆಂಬರ್ 20: ಕೇಂದ್ರ ತನಿಖಾ ದಳದ(CBI) ಅಧಿಕಾರಿಗಳು ತಮಗೆ ಸಂಬಂಧಿಸಿದ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ ಟ್ರಸ್ಟಿಗಳನ್ನು ಪ್ರಶ್ನಿಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೋಮವಾರ ಹೇಳಿದ್ದಾರೆ.
ಅಧಿಕಾರಿಗಳಿಗೆ ಪದೇ ಪದೇ ಮನವಿ ಮಾಡಿದರೂ ನನ್ನನ್ನು ಗುರಿಯಾಗಿಸಿ ದಾಳಿ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಗೂ ಮುನ್ನ ಕಿರುಕುಳ ನೀಡಲು ಕೇಂದ್ರ ಸಂಸ್ಥೆಗಳು ಯೋಜನೆ ರೂಪಿಸಿವೆ ಎಂದೂ ಡಿಕೆಶಿ ಆರೋಪಿಸಿದ್ದಾರೆ.

'ಎರಡು ವರ್ಷಗಳ ಹಿಂದೆ ಎಫ್ಐಆರ್ ದಾಖಲಿಸಿದ್ದರೂ ತನಿಖೆ ನಡೆದಿಲ್ಲ ಎಂದು ನಾನು ಅಧಿಕಾರಿಗಳಿಗೆ ಪತ್ರ ಬರೆದಿದ್ದೇನೆ. ಇದು ಮಹತ್ವದ ಪ್ರಕರಣವಲ್ಲ ಎಂದು ಅಡ್ವೊಕೇಟ್ ಜನರಲ್ ಸ್ಪಷ್ಟಪಡಿಸಿದ್ದಾರೆ. ನಾನು ಸಿಬಿಐ ತನಿಖೆಯನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದೇನೆ. ಈಗ ಚುನಾವಣೆಗೂ ಮುನ್ನ ನನಗೆ ಕಿರುಕುಳ ನೀಡುತ್ತಿದ್ದಾರೆ' ಎಂದು ಶಿವಕುಮಾರ್ ಹೇಳಿದ್ದಾರೆ.
ತಮ್ಮ ಜೊತೆ ಬಿಸಿನೆಸ್ ಪಾರ್ಟನರ್ ಆಗಿರುವ ಉದ್ಯಮಿಗಳು ಮತ್ತು ರಾಜಕಾರಣಿಗಳು ಸಹ ಕಿರುಕುಳಕ್ಕೆ ಒಳಗಾಗುತ್ತಿರುವುದರಿಂದ ತನಗೆ ನೋವಾಗಿದೆ ಎಂದು ಹೇಳಿದ್ದಾರೆ.
'ಶಿವಕುಮಾರ್ ಅವರಿಗೆ ಸಂಬಂಧಿಸಿದ ವಿವಿಧ ವ್ಯವಹಾರ ಸಂಸ್ಥೆಗಳಿಗೆ ಸಿಬಿಐ ಅಧಿಕಾರಿಗಳು ಭೇಟಿ ನೀಡುತ್ತಲೇ ಇರುತ್ತಾರೆ. ನೋಟಿಸ್ ನೀಡುವುದು, ಪಡೆದುಕೊಂಡಿರುವ ದಾಖಲೆಗಳನ್ನು ಹಿಂದಿರುಗಿಸುವುದು ಸೇರಿದಂತೆ ಅನೇಕ ಕಾರಣಗಳಿಗಾಗಿ ಸಿಬಿಐ ಅಧಿಕಾರಿಗಳು ಭೇಟಿ ನೀರುತ್ತಲೇ ಇರುತ್ತಾರೆ. ಸೋಮವಾರ ನಡೆದಿದ್ದು ಅಂತಹುದೇ ಭೇಟಿ' ಎಂದು ಸಿಬಿಐ ಮೂಲಗಳು ತಿಳಿಸಿವೆ.

ಹಣ ಅಕ್ರಮ ವರ್ಗಾವಣೆಗೆ ಸಂಬಂಧಿಸಿದ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್ ಅವರು ಈಗಾಗಲೇ ಜೈಲು ವಾಸ ಅನುಭವಿದ್ದಾರೆ. ಶಿವಕುಮಾರ್ ಹಾಗೂ ಅವರಿಗೆ ಸಂಬಂಧಿಸಿದ ಪ್ರಕರಣಗಳ ತನಿಖೆಯನ್ನು ಜಾರಿ ನಿರ್ದೇಶನಾಲಯಕ, ಸಿಬಿಐ ಹಾಗೂ ತೆರಿಗೆ ಇಲಾಖೆಗಳು ಕೈಗೊಂಡಿವೆ.
ಶಿವಕುಮಾರ್ ಮೇಲಿನ ತನಿಖೆಗಳು ರಾಜಕೀಯ ದುರುದ್ದೇಶದಿಂದ ಕೂಡಿವೆ ಎಂದು ಕಾಂಗ್ರೆಸ್ ನಾಯಕರು ಹರಿಹಾಯ್ದಿದ್ದಾರೆ. ಆದರೆ, ಕಾಂಗ್ರೆಸ್ ನಾಯಕರ ಈ ಆರೋಪಗಳನ್ನು ಕೇಂದ್ರ ತನಿಖಾ ಸಂಸ್ಥೆಗಳು ತಳ್ಳಿ ಹಾಕಿವೆ.
ಮುಂದಿನ ನಾಲ್ಕೈದು ತಿಂಗಳಲ್ಲಿ ಕರ್ನಾಟಕ ವಿಧಾನಸಭೆಗೆ ಚುನಾವಣೆಗಳು ನಡೆಯಲಿವೆ. ಕಾಂಗ್ರೆಸ್ ಸಮೀಕ್ಷೆಯ ಪ್ರಕಾರ, ಪಕ್ಷವು ಕರ್ನಾಟಕದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನಡುವೆ ಮುಖ್ಯಮಂತ್ರಿ ಸ್ಥಾನಕ್ಕಾಗಿ ತೀವ್ರ ಪೈಪೋಟಿ ಏರ್ಪಟ್ಟಿದೆ. ಆದರೆ, ಈ ಮಾತುಗಳನ್ನು ಉಭಯ ನಾಯಕರು ತಳ್ಳಿಹಾಕಿದ್ದಾರೆ. ಜನೆವರಿ 11ರಿಂದ ಬಸ್ ಯಾತ್ರೆಯನ್ನು ಉಭಯ ನಾಯಕರು ಜಂಟಿ ಆಗಿ ಕೈಗೊಳ್ಳಲಿದ್ದಾರೆ. ರಾಜ್ಯದಾದ್ಯಂತ ಸಂಚರಿಸಿ ಪ್ರಚಾರ ಮಾಡಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.












Click it and Unblock the Notifications