ರಮೇಶ್ ಜಾರಕಿಹೊಳಿ ವಿರುದ್ಧ ಕಾಂಗ್ರೆಸ್ನಿಂದ ಇಡಿಗೆ ದೂರು?
ಬೆಂಗಳೂರು, ಮಾರ್ಚ್ 23: ಸಿಡಿ ವಿಚಾರದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಕರ್ನಾಟಕ ಕಾಂಗ್ರೆಸ್ ಈ ವಿಚಾರದಲ್ಲಿ ಹೋರಾಟವನ್ನು ತೀವ್ರಗೊಳಿಸಿದೆ.
Recommended Video
ರಮೇಶ್ ಜಾರಕಿಹೊಳಿ ವಿರುದ್ಧ ಅತ್ಯಾಚಾರ ಪ್ರರಕರಣ ದಾಖಲು ಮಾಡಬೇಕು. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಉಸ್ತುವಾರಿಯಲ್ಲಿ ಸ್ವತಂತ್ರ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ಸದಸ್ಯರು ಸದನದಲ್ಲಿ ಆಗ್ರಹಿಸುತ್ತಿದ್ದಾರೆ.
ಸದನದ ಹೊರಗೂ ಸಹ ಕಾಂಗ್ರೆಸ್ ಹೋರಾಟವನ್ನು ಮುಂದುವರೆಸಲಿದ್ದು, ರಮೇಶ್ ಜಾರಕಿಹೊಳಿ ವಿರುದ್ಧ ಜಾರಿ ನಿರ್ದೇಶನಾಲಯಕ್ಕೆ ದೂರು ನೀಡಲು ಚಿಂತನೆ ನಡೆಸಿದೆ. ಮಂಗಳವಾರ ಸಂಜೆ ದೂರು ನೀಡುವ ನಿರೀಕ್ಷೆ ಇದೆ.

ಸಿಡಿ ಪ್ರಕರಣದಲ್ಲಿ ಹಣವ ವ್ಯವಹಾರ ನಡೆದಿದೆ ಎಂಬ ಆರೋಪವಿದೆ. ಲಕ್ಷಾಂತರ ರೂಪಾಯಿ ಹಣವನ್ನು ನೀಡಲಾಗಿದೆ ಎಂಬ ವರದಿಗಳು ಮಾಧ್ಯಮಗಳಲ್ಲಿ ಬರುತ್ತಿವೆ. ಈ ಕುರಿತು ಕಾಂಗ್ರೆಸ್ ಜಾರಿ ನಿರ್ದೇಶನಾಲಯಕ್ಕೆ ದೂರು ನೀಡಲಿದೆ.
ಮಂಗಳವಾರ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ಧರಾಮಯ್ಯ ಕಚೇರಿಯಲ್ಲಿ ಹಿರಿಯ ಶಾಸಕರ ಸಭೆ ನಡೆಯಿತು. ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, ಈಶ್ವರ್ ಖಂಡ್ರೆ, ದಿನೇಶ್ ಗುಂಡೂರಾವ್, ರಮೇಶ್ ಕುಮಾರ್, ಕೆ. ಜೆ. ಜಾರ್ಜ್ ಮುಂತಾದವರು ಸಭೆಯಲ್ಲಿ ಪಾಲ್ಗೊಂಡಿದ್ದರು.
ಈ ಸಭೆಯಲ್ಲಿ ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡುವ ಕುರಿತು ಚರ್ಚೆ ನಡೆದಿದೆ. ಕರ್ನಾಟಕ ಕಾಂಗ್ರೆಸ್ನ ಕಾನೂನು ಘಟಕದ ವತಿಯಿಂದ ಹಣದ ವ್ಯವಹಾರ ನಡೆದಿರುವ ಕುರಿತು ತನಿಖೆ ನಡೆಸುವಂತೆ ದೂರು ನೀಡುವ ಸಾಧ್ಯತೆ ಇದೆ.
ಮಂಗಳವಾರ ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ ರಮೇಶ್ ಜಾರಕಿಹೊಳಿ ವಿರುದ್ಧ ಅತ್ಯಾಚಾರ ಪ್ರರಕರಣ ದಾಖಲು ಮಾಡಬೇಕು, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಉಸ್ತುವಾರಿಯಲ್ಲಿ ಸ್ವತಂತ್ರ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದರು. ಗದ್ದಲದಿಂದಾಗಿ ಎರಡು ಬಾರಿ ಕಲಾಪವನ್ನು ಮುಂದೂಡಲಾಯಿತು.












Click it and Unblock the Notifications